×
Ad

ಜಗತ್ತಿನ ಹೋರಾಟಗಾರರಿಗೆ ಗಾಂಧಿ ತತ್ವ ದಾರಿ ದೀಪ: ಸಿದ್ದರಾಮಯ್ಯ

Update: 2021-10-02 16:55 IST

ಬೆಂಗಳೂರು, ಅ.2: ಮಹಾತ್ಮ ಗಾಂಧೀಜಿಯವರು ಇಂದು ನಮ್ಮ ಜೊತೆ ಇಲ್ಲದಿದ್ದರೂ ಅವರ ತತ್ವಾದರ್ಶಗಳು, ವಿಚಾರಧಾರೆಗಳು ನಮ್ಮ ನಡುವೆ ಜೀವಂತವಾಗಿವೆ. ಇಂದಿಗೂ ಜಗತ್ತಿನ ಅನೇಕ ಜನ ಹೋರಾಟಗಾರರಿಗೆ ಮಹಾತ್ಮ ಗಾಂಧಿಯವರು ಸ್ಫೂರ್ತಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಶನಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಕ್ಷಿಣ ಆಫ್ರಿಕಾದಲ್ಲಿ ನೆಲ್ಸನ್ ಮಂಡೇಲಾ ಅವರು ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಟ ನಡೆಸಲು, ದಶಕಗಳ ಕಾಲ ಸೆರೆಮನೆ ವಾಸ ಅನುಭವಿಸಲು ಸ್ಫೂರ್ತಿ ನೀಡಿದ್ದು ಗಾಂಧೀಜಿಯವರ ವಿಚಾರಧಾರೆ. ಹೀಗೆ ಮಾರ್ಟಿನ್ ಲೂಥರ್ ಕಿಂಗ್‍ರಿಂದ ಹಿಡಿದು ಬರಾಕ್ ಒಬಾಮವರೆಗೆ ಜಗತ್ತಿನಾದ್ಯಂತ ಹೋರಾಟಗಾರರಿಗೆ ಗಾಂಧಿ ತತ್ವ ಇಂದಿಗೂ ದಾರಿದೀಪವಾಗಿದೆ ಎಂದು ಅವರು ತಿಳಿಸಿದರು.

ರಾಷ್ಟ್ರ ಕಂಡ ಅಪರೂಪದ ಹಾಗೂ ಧೀಮಂತ ವ್ಯಕ್ತಿತ್ವ ಮಹಾತ್ಮ ಗಾಂಧಿ ಅವರದು. ದಕ್ಷಿಣ ಆಫ್ರಿಕಾದಲ್ಲಿ ವಕೀಲ ವೃತ್ತಿ ನಡೆಸುವಾಗಲೇ ಅಲ್ಲಿನ ಭಾರತೀಯರ ಮೇಲಾಗುತ್ತಿದ್ದ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿ, ಶೋಷಿತರಿಗೆ ನ್ಯಾಯ ಕೊಡಿಸುವಲ್ಲಿ ಯಶಸ್ವಿಯಾದರು. ಅಂದಿನ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಅಧ್ಯಕ್ಷರಾಗಿದ್ದ ಗೋಪಾಲಕೃಷ್ಣ ಗೋಖಲೆ ಅವರು ಸ್ವಾತಂತ್ರ್ಯ ಚಳವಳಿಯನ್ನು ಮುನ್ನಡೆಸಲು ಮಹಾತ್ಮ ಗಾಂಧಿ ಅವರೇ ಸೂಕ್ತ ವ್ಯಕ್ತಿ ಎಂದು ಮನಗಂಡು ಅವರ ಮನವೊಲಿಸಿ ಭಾರತಕ್ಕೆ ಕರೆತಂದರು ಎಂದು ಸಿದ್ದರಾಮಯ್ಯ ಹೇಳಿದರು.

ಭಾರತಕ್ಕೆ ಬಂದ ನಂತರ ಗಾಂಧಿಯವರು ಮೊದಲು ದೇಶದ ನಗರ, ಗ್ರಾಮ ಹೀಗೆ ಎಲ್ಲ ಕಡೆ ಸುತ್ತಾಡಿ, ದೇಶದ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಕಲೆಹಾಕಿದರು. ಜನರ ಸ್ಥಿತಿಗತಿಗಳ ಅರಿವೆ ಇಲ್ಲದೆ ಸ್ವಾತಂತ್ರ್ಯ ಹೋರಾಟ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವು ಅವರಿಗಿತ್ತು. ದೇಶದ ಜನರ ಹಸಿವು, ಬಡತನವನ್ನು ಕಂಡ ಮಹಾತ್ಮ ಗಾಂಧಿಯವರು ತಾವು ಕೂಡ ಕಚ್ಚೆಪಂಚೆ ಹಾಗೂ ತುಂಡು ಬಟ್ಟೆಯನ್ನು ಮೈಮೇಲೆ ಧರಿಸುವ ಶಪಥಗೈದರು. ತಮ್ಮ ಬದುಕಿನುದ್ದಕ್ಕೂ ನುಡಿದಂತೆಯೇ ನಡೆದ ಮೇರು ವ್ಯಕ್ತಿತ್ವ ಮಹಾತ್ಮ ಗಾಂಧೀಜಿಯದು ಎಂದು ಅವರು ಬಣ್ಣಿಸಿದರು.

ಗಾಂಧೀಜಿ ವಿಶ್ವ ನಾಯಕ: ಗಾಂಧಿಯವರು ಇಂದು ಕೇವಲ ಭಾರತಕ್ಕಷ್ಟೇ ಸೀಮಿತವಾಗಿರದೆ, ವಿಶ್ವನಾಯಕರಾಗಿದ್ದಾರೆ. ಆದರೆ ನಮ್ಮದೇ ದೇಶದ ಕೇಂದ್ರ ಸರಕಾರ ಗಾಂಧಿ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ, ಅವರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಮಹಾನ್ ವ್ಯಕ್ತಿಗೆ ಅಪಮಾನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಗಾರಿದರು.
ಗಾಂಧಿಯವರು ಸತ್ಯ ಮತ್ತು ಅಹಿಂಸೆಯ ಮಾರ್ಗ ತೋರಿದ್ದರೆ, ಭಾರತೀಯ ಜನತಾ ಪಕ್ಷ ಅಸತ್ಯ ಮತ್ತು ಹಿಂಸೆಯ ಹಾದಿಯಲ್ಲಿ ನಂಬಿಕೆ ಇಟ್ಟಿದೆ. ನರೇಂದ್ರ ಮೋದಿ ಅವರ ಮಾತು ಮತ್ತು ನಡೆ ಇವೆರಡು ತದ್ವಿರುದ್ಧವಾಗಿದೆ. ಅವರು ಏನು ಹೇಳುತ್ತಾರೋ ಅದಕ್ಕೆ ವಿರುದ್ಧವಾದ ಕೆಲಸ ಮಾಡುತ್ತಾರೆ. ಮೋದಿ ಅವರು ಯಾವುದನ್ನು ಉಳಿಸುತ್ತೇನೆ ಎನ್ನುತ್ತಾರೋ ಅದನ್ನು ನಾಶ ಮಾಡಲು ಹೊರಟಿದ್ದಾರೆ ಎಂದರ್ಥ ಎಂದು ಅವರು ಟೀಕಿಸಿದರು.

ಮಹಾತ್ಮ ಗಾಂಧಿಯವರ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಬಿಜೆಪಿಯವರು ದೇಶಭಕ್ತ ಎಂದು ಕರೆಯುತ್ತಾರೆ. ಇಂತಹ ಪಕ್ಷ ಅಧಿಕಾರದಲ್ಲಿ ಇದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಉಳಿಯಲು ಹೇಗೆ ಸಾಧ್ಯ? ಇಂದು ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಉಳಿದಿದೆಯೇ ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಕೇಂದ್ರ ಸರಕಾರ ಹಾಗೂ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವವರಿಗೆ ದೇಶದ್ರೋಹದ ಸುಳ್ಳು ಆಪಾದನೆಯಡಿ ಜೈಲಿಗೆ ಅಟ್ಟಲಾಗುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕಳೆದು ಹತ್ತು ತಿಂಗಳುಗಳಿಂದ ರೈತರು ದೇಶಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ಮಾತುಕತೆಯ ಬದಲು, ಕ್ರೌರ್ಯ ಮತ್ತು ಬಲಪ್ರಯೋಗದ ಮೂಲಕ ಅವರ ಹೋರಾಟವನ್ನು ಅಂತ್ಯಗೊಳಿಸಲು ಹೊರಟಿದೆ ಎಂದು ಸಿದ್ದರಾಮಯ್ಯ ಕಿಡಿಗಾರಿದರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರು "ಜೈ ಜವಾನ್, ಜೈ ಕಿಸಾನ್" ಎಂಬ ಕರೆ ನೀಡಿದರು. ರೈಲು ದುರಂತ ಸಂಭವಿಸಿದಾಗ ಘಟನೆಯ ನೈತಿಕ ಹೊಣೆ ಹೊತ್ತು ತಮ್ಮ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಎಂದರೆ ತಪ್ಪಿಲ್ಲ. ಈಗಿನ ರಾಜಕಾರಣದಲ್ಲಿ ನೈತಿಕತೆ ಎಂಬುದು ಕಣ್ಮರೆಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಶಾಸ್ತ್ರಿ ಅವರು ಪ್ರಧಾನಿಯಾದ ಮೇಲೆ ಅವರ ಮಗ ಕೆಲಸ ಮಾಡುತ್ತಿದ್ದ ಕಂಪನಿ ಮುಂಭಡ್ತಿ ನೀಡಿತು ಎಂಬ ಕಾರಣಕ್ಕೆ ಕೆಲಸಕ್ಕೆ ರಾಜೀನಾಮೆ ನೀಡುವಂತೆ ಹೇಳಿ, ಕೆಲಸ ಬಿಡುವಂತೆ ಮಾಡಿದ್ದರು. ಇಂತಹ ಪ್ರಾಮಾಣಿಕತೆ ಈಗಿನ ರಾಜಕಾರಣಿಗಳಲ್ಲಿ ಕಾಣಲು ಸಾಧ್ಯವೇ? ಬಿಜೆಪಿ ಆಡಳಿತದಲ್ಲಿ ದೇಶ ಸಂಕಷ್ಟದ ದಿನಗಳನ್ನು ಎದುರಿಸುತ್ತಿದೆ. ಇಂದು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗಾಂಧಿಯವರ ವಿಚಾರಧಾರೆಗಳು ನಮ್ಮ ಈ ಹೋರಾಟದ ಹಾದಿಗೆ ಬೆಳಕಾಗಲಿ ಎಂದು ಹಾರೈಸುತ್ತೇನೆ ಎಂದು ಅವರು ಹೇಳಿದರು.

ಗಾಂಧೀಜಿಯವರನ್ನು ಸಂಪೂರ್ಣವಾಗಿ ಅನುಸರಿಸಲು ಸಾಧ್ಯವಿಲ್ಲದಿದ್ದರೂ, ಅವರ ದಾರಿಯಲ್ಲಿ ಸಾಗುವ ಪ್ರಯತ್ನ ಮಾಡೋಣ. ಇದೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂಬುದು ನನ್ನ ಭಾವನೆ ಎಂದು ಸಿದ್ದರಾಮಯ್ಯ ಹೇಳಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News