×
Ad

ದೇಶದ ನಾಗರಿಕ ಸೇವೆಯಲ್ಲಿ 4000 ಮಂದಿ ಆರೆಸ್ಸೆಸ್ ಕಾರ್ಯಕರ್ತರು: ಎಚ್.ಡಿ.ಕುಮಾರಸ್ವಾಮಿ ಆರೋಪ

Update: 2021-10-05 18:43 IST

ಬೆಂಗಳೂರು, ಅ.5: ದೇಶದ ನಾಗರಿಕ ಸೇವೆಯಲ್ಲಿ ಸುಮಾರು 4000 ಜನ ಆರೆಸ್ಸೆಸ್ ಕಾರ್ಯಕರ್ತರು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಿದ್ದಾರೆ. ಅವರಿಗೆ ಪರೀಕ್ಷೆಗಳನ್ನು ತೆಗೆದುಕೊಳ್ಳಲು ತರಬೇತಿ ನೀಡಲಾಗುತ್ತದೆ. ಆ ಮೂಲಕ 2016ನೆ ಸಾಲಿನಲ್ಲಿ 676 ಜನ ಆಯ್ಕೆಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬಿಡದಿಯಲ್ಲಿರುವ ತಮ್ಮ ತೋಟದಲ್ಲಿ ಆಯೋಜಿಸಲಾಗಿರುವ ಜನತಾ ಪರ್ವ 1.0 ಹಾಗೂ ಮಿಷನ್ 123 ಕಾರ್ಯಾಗಾರದ ಕೊನೆಯ ದಿನವಾದ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಹಿಡಿತದಲ್ಲಿ ದೇಶದ ಅಧಿಕಾರಿಗಳ ತಂಡ ಇಟ್ಟುಕೊಂಡು ಜನರ ಕಷ್ಟಗಳಿಗೆ ಅಧಿಕಾರ ನಡೆಸುವುದಕ್ಕಿಂತ, ದೇಶವನ್ನು ನಿಮ್ಮ ಹಿಡೆನ್ ಅಜೆಂಡಾ ಮೂಲಕ ಮನುಸ್ಮøತಿ ಯುಗಕ್ಕೆ ತೆಗೆದುಕೊಂಡು ಹೋಗುವುದಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಆರೆಸ್ಸೆಸ್ ಕೀಲುಗೊಂಬೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಆರೆಸ್ಸೆಸ್ ಕೀಲುಗೊಂಬೆ ಆಗಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪಾದ ಕೃಪಾಕಟಾಕ್ಷ, ನಿರ್ದೇಶನದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಆರೆಸ್ಸೆಸ್ ಬಗ್ಗೆ ಅಧ್ಯಯನ ಮಾಡುತ್ತಿದ್ದೇನೆ. ಹಲವಾರು ಪುಸ್ತಕಗಳನ್ನು ಓದುತ್ತಿದ್ದೇನೆ. ಆರೆಸ್ಸೆಸ್ ಹೇಗೆ ಕೆಲಸ ಮಾಡುತ್ತದೆ ಹಾಗೂ ಚುನಾಯಿತ ಸರಕಾರಗಳನ್ನು ಹೇಗೆ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುತ್ತದೆ ಎಂಬುದನ್ನು ತಿಳಿದು ನನಗೆ ಆಘಾತ ಆಯಿತು ಎಂದು ಅವರು ಹೇಳಿದರು.  

ಸಂಘದ ಐಡಿಯಾಲಜಿ ಹೊಂದಿರುವ ಅಧಿಕಾರಿಗಳನ್ನು ತನ್ನ ತಾಳಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಆರೆಸ್ಸೆಸ್. ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಅಧಿಕಾರಿಗಳು ಸಂಘದ ತರಬೇತಿ ಪಡೆದು ಕೆಲಸ ಮಾಡುತ್ತಿದ್ದಾರೆ ಅನ್ನುವ ಮಾಹಿತಿಯಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ನಾಯಕರಿಗೆ ಸ್ವಾತಂತ್ರ್ಯ ಇಲ್ಲ. ನಮ್ಮ ರಾಜ್ಯದ ಬಿಜೆಪಿ ಸರಕಾರದ ಎರಡನೇ ಮುಖ್ಯಮಂತ್ರಿ ಕೇಶವಕೃಪಕ್ಕೆ ಏಕೆ ಹೋದರು. ಎಲ್ಲಿಯೇ ಹೋದರೂ ಆರೆಸ್ಸೆಸ್ ಕಚೇರಿಗಳಿಗೆ ಯಾಕೆ ಹೋಗುತ್ತಾರೆ? ರಾಜ್ಯದಲ್ಲಿ ಇರುವುದು ಸಂಪೂರ್ಣ ಆರೆಸ್ಸೆಸ್ ಸರಕಾರ. ಕೇಶವಕೃಪಕ್ಕೆ ಜನ ಮತ ಹಾಕಿಲ್ಲ ಎಂಬುದನ್ನು ಆಡಳಿತ ನಡೆಸುವವರು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದರು. 

ಇವರಿಗೆ ದೇಶದ ಮತ್ತು ರಾಜ್ಯದ ಪ್ರಗತಿಯ ಅಜೆಂಡಾ ಇಲ್ಲ. ಜನರನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವುದೇ ಅವರ ಅಜೆಂಡಾ. ನಾವು ಕೂಡ ಹಿಂದುಗಳೇ. ನಮಗೆ ಹಿಂದುತ್ವಕ್ಕಿಂತ ಮೊದಲು ದುಡಿಯುವ ಕೈಗೆ ದುಡಿಮೆ ಬೇಕು. ಅನ್ನ ಬೇಕು. ಸರಕಾರ ಈ ರಾಜ್ಯದ, ದೇಶದ ಬಡವರ ಬಗ್ಗೆ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದರು.

ಅಟಲ್ ಬಿಹಾರಿ ವಾಜಪೇಯಿ ಎಂಥ ನಾಯಕರು ಎಂಬುದು ನಮಗೆಲ್ಲರಿಗೂ ಗೊತ್ತು. ಹೆಜ್ಜೆ ಹೆಜ್ಜೆಗೂ ಅವರ ಸರಕಾರಕ್ಕೆ ಅಡ್ಡಿ ಮಾಡಿತು ಆರೆಸ್ಸೆಸ್. ಜಿನ್ನಾ ಅವರನ್ನು ಹೊಗಳಿದ ಒಂದೇ ಕಾರಣಕ್ಕೆ ಎಲ್.ಕೆ.ಅಡ್ವಾಣಿ ಅವರನ್ನು ರಾಜಕೀಯವಾಗಿ ಮುಗಿಸಲಾಯಿತು. ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಅಪಮಾನಕರ ರೀತಿಯಲ್ಲಿ ಕೆಳಗಿಳಿಸಲಾಯಿತು. ಮುರಳಿ ಮನೋಹರ್ ಜೋಶಿಯವರನ್ನು ಯಾವ ಕಾರಣಕ್ಕಾಗಿ ಮನೆಗೆ ಕಳುಹಿಸಿದರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಈ ದೇಶದಲ್ಲಿ ಸಣ್ಣ ಪುಟ್ಟ ಸಮಾಜಗಳಿಗೆ ಶಿಕ್ಷಣ, ಆರೋಗ್ಯ ಕೊಟ್ಟಿರುವುದು ಆರೆಸ್ಸೆಸ್ ಅಲ್ಲ. ಹಿಂದುತ್ವ ಹಾಗೂ ಕೋಮುವಾದವನ್ನು ಹರಡುವ ಕೆಲಸವನ್ನು ಬಿಟ್ಟರೆ ಬೇರೆ ಯಾವ ಸಾಧನೆಯನ್ನೂ ಅದು ಮಾಡಿಲ್ಲ. ದೇಶದ ಬಡತನದ ಬಗ್ಗೆ, ಸಮಸ್ಯೆಗಳ ಬಗ್ಗೆ ಆರೆಸ್ಸೆಸ್ ಸಭೆಗಳಲ್ಲಿ ಚರ್ಚೆ ಆಗಿಲ್ಲ. ದೇಶವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವುದು ಒಂದೇ ಅವರ ಅಜೆಂಡಾ ಎಂದು ಅವರು ಕಿಡಿಗಾರಿದರು.

ಆರೆಸ್ಸೆಸ್ ಕೇಂದ್ರ ಬಿಂದು ಇಟ್ಟುಕೊಂಡು ಬಿಜೆಪಿ ಕೆಲಸ ಮಾಡುತ್ತಿದೆ. ರಾಜಕೀಯವಾಗಿ ಪಕ್ಷಕ್ಕೆ ಸ್ವಾತಂತ್ರ್ಯ ಇಲ್ಲ. ಕೆಲ ವರ್ಷಗಳ ಹಿಂದೆ ಬಿಜೆಪಿಯನ್ನೆ ವಿಸರ್ಜಿಸಿ ಹೊಸ ಪಕ್ಷ ರಚನೆಯತ್ತ ಅದು ಅಲೋಚನೆ ಮಾಡಿತ್ತು ಎಂದು ಕುಮಾರಸ್ವಾಮಿ ಹೇಳಿದರು.

ವಿಧೇಯಕದ ಬದಲು ವಿಶ್ವಾಸ ಮೂಡಿಸಬೇಕು: ಮತಾಂತರ ನಿಷೇಧ  ವಿಧೇಯಕದ ಬದಲು ಜನರಲ್ಲಿ ವಿಶ್ವಾಸ ತುಂಬಬೇಕು. ಉದ್ಯೋಗ ಶಿಕ್ಷಣ ಕೊಡಬೇಕು. ಆರ್ಥಿಕ ಶಕ್ತಿ ತಂದುಕೊಡಬೇಕು. ಮತಾಂತರ ನಿಷೇಧ ವಿದೇಯಕದಿಂದ ಮತಾಂತರವನ್ನು ನಿಲ್ಲಿಸಲು ಸಾಧ್ಯವಿಲ್ಲ. ಶಿಕ್ಷಣ, ಆರೋಗ್ಯ, ವಸತಿ ಮುಂತಾದ ಸೌಲಭ್ಯಗಳನ್ನು ಉತ್ತಮವಾಗಿ ಒದಗಿಸಿದ್ದಿದ್ದರೆ ಮತಾಂತರ ಎನ್ನುವ ಶಬ್ದವೇ ಕೇಳುತ್ತಿರಲಿಲ್ಲ. ಸ್ವಯಂಪ್ರೇರಿತರಾಗಿ ಬೇರೆ ಧರ್ಮಕ್ಕೆ ಜನ ಹೋಗುತ್ತಿರುವ ಉದಾಹರಣೆ ಇದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಬೌದ್ಧ ಧರ್ಮಕ್ಕೆ ಹೋದರು. ಇದು ಇಂದಿನ ಸಮಸ್ಯೆ ಅಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

ಬಿಜೆಪಿಯವರಿಗೆ ಬೇಕಾಗಿರುವುದು ಶಾಂತಿ, ನೆಮ್ಮದಿ ಅಲ್ಲ. ವಿಧಾನಸಭಾ ಕಲಾಪದಲ್ಲಿ ಮತಾಂತರದ ಬಗ್ಗೆ ನಡೆದ ಚರ್ಚೆಯಲ್ಲಿ ಶಾಸಕರ ತಾಯಿ ಒಬ್ಬರು ಮತಾಂತರ ಆಗಿದ್ದರ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಆದರೆ, ಇಂದಿನ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ಕ್ರೈಸ್ತ ಗುರು ಒಬ್ಬರು, ಬೈಬಲ್‍ನಲ್ಲಿ ಒತ್ತಾಯ ಮಾಡಿ ಮತಾಂತರ ಮಾಡುವುದಕ್ಕೆ ಬೆಂಬಲ ಇಲ್ಲ. ಪ್ರೀತಿಯನ್ನು ನಾವು ಬಯಸುವವರು. ನಾವು ಬೇರೆ ದೇಶದಲ್ಲಿ ಹುಟ್ಟಿದ್ದಲ್ಲ. ನಾವು ಭಾರತೀಯರೇ ಅಂತ ಹೇಳಿದರು. ಅವರ ಮಾತುಗಳ ಬಗ್ಗೆ ಆಲೋಚನೆ ಮಾಡಬೇಕಿದೆ. ಅದು ಸತ್ಯವಾದ ಮಾತು ಎಂದು ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ತಪ್ಪು ಮಾಡಿದೆ: ಕಾಂಗ್ರೆಸ್ ಸರಿಯಾಗಿದ್ದಿದ್ದರೆ ದೇಶದ ಸ್ಥಿತಿ ಬೇರೆ ರೀತಿಯೇ ಇರುತ್ತಿತ್ತು. ಅವರ ಸ್ವೇಚ್ಛಾ ವರ್ತನೆಯೇ ಇಂತಹ ವಾತಾವರಣ ನಿರ್ಮಾಣ ಮಾಡಿ ಬಿಜೆಪಿ ಅಟಾಟೋಪಗಳಿಗೆ ಅಂಕೆ ಇಲ್ಲದಂತೆ ಆಗಿದೆ. ರಾಜ್ಯದಲ್ಲೂ ಆ ಪಕ್ಷದ್ದು ಅದೇ ಕತೆ. ಸುದೀರ್ಘ ಅಧಿಕಾರ ಇದ್ದಾಗ ಏನು ಮಾಡಲಿಲ್ಲ. ಮೂರು ಸಾವಿರ ರೈತರು ಸಾಯುವವರೆಗೂ ಏನೂ ಗೊತ್ತಿಲ್ಲ ಅಂತ ಇದ್ದರು ಆಗಿನ ಮುಖ್ಯಮಂತ್ರಿ. ಈಗ ರಾಜಕೀಯಕ್ಕೆ ಹಾಗೂ ಅಧಿಕಾರ ಹಿಡಿಯಲು ತರಾತುರಿಯಲ್ಲಿ ಪಂಜಿನ ಮೆರವಣಿಗೆ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಪ್ರಥಮ ಬಾರಿಗೆ ಕ್ರೈಸ್ತ ಸಮಾಜದವರಿಗೆ ಕಾರ್ಯಾಗಾರ ಮಾಡಲಾಯಿತು. ಆ ಸಮುದಾಯದ ಪ್ರತಿನಿಧಿಗಳ ಜತೆ ಚರ್ಚೆ ನಡೆಸಲಾಯಿತು. ಅವರಿಗೆ ನಂಬಿಕೆ, ವಿಶ್ವಾಸ ಮೂಡಿಸುವ ಕೆಲಸವನ್ನು ಪಕ್ಷ ಮಾಡಿದೆ. ಪ್ರಥಮ ಬಾರಿಗೆ ನಾವು ನಿಮ್ಮ ಜೊತೆಗೂಡುತ್ತೇವೆ ಅಂತ ಬಂದಿದ್ದಾರೆ. ಅವರಿಗೆ ಮುಂದಿನ ಚುನಾವಣೆಯಲ್ಲಿ ಅವಕಾಶ ನೀಡಲಾಗುವುದು. ಕ್ರೈಸ್ತ ಸಮುದಾಯದ ಜನರ ಬಗ್ಗೆ ಸರಕಾರ ಮೊಸಳೆ ಕಣ್ಣೀರು ಹಾಕಿದೆ ಅಷ್ಟೇ. ಅವರಿಗೆ ರಕ್ಷಣೆ ನೀಡುವ ಕೆಲಸ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News