''ಸತ್ಯ ಯಾವತ್ತಾದರೂ ಹೊರಗೆ ಬರಲೇಬೇಕು, ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು'': ನಳಿನ್ಕುಮಾರ್ ಕಟೀಲ್
ಬೆಂಗಳೂರು, ಅ.13: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನಡೆಸಿದ ಸಂಭಾಷಣೆಯ ವೈರಲ್ ವೀಡಿಯೋ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಟ್ವೀಟ್ಗಳನ್ನು ಮಾಡಿರುವ ಅವರು, ''ಸತ್ಯ ಯಾವತ್ತಾದರೂ ಹೊರಗೆ ಬರಲೇಬೇಕು ಎಂದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಈ.ಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
''ತಕ್ಕಡಿ ಮೇಲೇಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರೇ ಗುಟ್ಟಾಗಿ ಒಪ್ಪಿಕೊಂಡಿದ್ದಾರೆ. ಶಿವಕುಮಾರ್ ರಾಜ್ಯಾಧ್ಯಕ್ಷರಾಗಿ ಇದ್ದರೆ ಪಕ್ಷ ನಿರ್ನಾಮವಾಗಲಿದೆ ಎಂದು ಕಾಂಗ್ರೆಸ್ಸಿಗರು ಹೇಳಿರುವುದು ತಡವಾಗಿಯಾದರೂ ಜ್ಞಾನೋದಯವಾದಂತಾಗಿದೆ'' ಎಂದು ಅವರು ಹೇಳಿದ್ದಾರೆ.
''ಡಿ.ಕೆ.ಶಿವಕುಮಾರ್ ದೊಡ್ಡ ಸ್ಕ್ಯಾಮ್, ಕಲೆಕ್ಷನ್ ಗಿರಾಕಿ, ಅವರ ಹುಡುಗರ ಬಳಿ 50, 100 ಕೋಟಿ ಇದೆ ಎಂದು ಕಾಂಗ್ರೆಸ್ ಮುಖಂಡರೇ ಹೇಳುತ್ತಿರುವುದರಿಂದ ಇವರ ಮೇಲೆ ಆದ ಐಟಿ, ಸಿಬಿಐ ತನಿಖೆ ರಾಜಕೀಯ ಪ್ರೇರಿತವಲ್ಲ ಎಂದು ಜನರಿಗೆ ಮನವರಿಕೆಯಾಗಿದೆ'' ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
''ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು. ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆ'' ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕುಳಿತು ಸತ್ಯ ಹೇಳಿರುವ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳು.
— Nalinkumar Kateel (@nalinkateel) October 13, 2021
ನಿಮ್ಮ ಮಾತುಗಳನ್ನು ಜನರಿಗೆ ತಲುಪಿಸಿರುವ ಮಾಧ್ಯಮಗಳಿಗೆ ಅಭಿನಂದನೆ.