ದತ್ತು ಸ್ವೀಕಾರ ಕುರಿತ ಕಾನೂನು ಬಗ್ಗೆ ಅರಿವು ಕಾರ್ಯಕ್ರಮ
ಬ್ರಹ್ಮಾವರ, ಅ.13: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ದತ್ತು ಸ್ವೀಕಾರ ಮತ್ತು ನಿರ್ವಹಣೆಗೆ ಸಂಬಂಧಪಟ್ಟ ಇತ್ತೀಚಿನ ಕಾನೂನುಗಳಿಗೆ ಸಂಬಂಧಿಸಿದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಬ್ರಹ್ಮಾವರ ಹಿರಿಯ ನಾಗರಿಕರ ಸಂಘದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬ್ರಹ್ಮಾವರ ತಾಪಂ ಕಾಯನಿರ್ವಾಹಣಾಧಿಕಾರಿ ಇಬ್ರಾಹಿಂಪುರ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲ ರೂಪಾಶ್ರೀ, ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸದಾನಂದ ನಾಯಕ್ ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ ಸ್ವಾಗತಿಸಿದರು.