ಜಡ್ಕಲ್‌ ನಲ್ಲಿ ಉಡುಪಿ ಡಿಸಿ ಗ್ರಾಮ ವಾಸ್ತವ್ಯ; ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಕೂರ್ಮಾರಾವ್

Update: 2021-10-16 13:47 GMT

ಜಡ್ಕಲ್ (ಉಡುಪಿ), ಅ.16: ಪ್ರತೀ ತಿಂಗಳ 3ನೇ ಶನಿವಾರ ನಡೆಯುತ್ತಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ, ಕೋವಿಡ್-19ರಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಸರಕಾರದ ಸೂಚನೆಯಂತೆ ಅ.16ರಿಂದ ಪುನರಾರಂಭಗೊಂಡಿದೆ. ಇಂದು ಬೈಂದೂರು ತಾಲೂಕಿನ ಜಡ್ಕಲ್‌ನಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 57ಕ್ಕೂ ಅಧಿಕ ಅರ್ಜಿಗಳಿಗೆ ಸಂಬಂಧಿಸಿ ಸ್ಥಳದಲ್ಲೇ ಸೂಕ್ತ ಪರಿಹಾರ ಕೈಗೊಳ್ಳಲಾಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ಜಡ್ಕಲ್ ಗ್ರಾಪಂಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಗ್ರಂಥಾಲಯ ಸೇರಿದಂತೆ ಅಲ್ಲಿನ ಎಲ್ಲಾ ವ್ಯವಸ್ಥೆಗಳನ್ನು ಪರಿಶೀಲಿಸಿ ದರು. ನಂತರ ಜಡ್ಕಲ್‌ನ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರೌಢಶಾಲೆಗೆ ಭೇಟಿ ನೀಡಿದ ಡಿಸಿ, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಬಳಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೂರ್ಮಾರಾವ್ ಎಂ., ಜಿಲ್ಲಾ ಕೇಂದ್ರದಿಂದ ಬಹಳಷ್ಟು ದೂರದಲ್ಲಿರುವ ಈ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳಿಗಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಾರ್ವಜನಿಕರು ಆಗಮಿ ಸಲು ಕಷ್ಟವಾಗಲಿದ್ದು, ಇಲ್ಲಿನ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಅರಿತು ಕೊಂಡು ಪರಿಹರಿಸಲು ಈ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ರಾಜು ಪೂಜಾರಿ, ಇಲ್ಲಿ ದೃಷ್ಟಿದೋಷ ಕುರಿತಂತೆ ಪ್ರಮಾಣ ಪತ್ರ ಪಡೆಯಲು ಸಮಸ್ಯೆ ಇದೆ. ವಿಕಲಚೇತನರಿಗೆ ಖಾಸಗಿ ಬಸ್‌ನಲ್ಲೂ ಉಚಿತ ಪಾಸ್ ವ್ಯವಸ್ಥೆಯಾಗಬೇಕು. ಈಗಾಗಲೇ ಕೆಎಸ್ಸಾರ್ಟಿಸಿ ಬಸ್‌ನಲ್ಲಿರುವ ಉಚಿತ ಪ್ರಯಾಣದ 100 ಕಿ.ಮೀ. ಮಿತಿಯನ್ನು ರಾಜ್ಯಾದ್ಯಂತ ಸಂಚರಿಸಲು ವಿಸ್ತರಿಸಬೇಕು, ಎಲ್ಲಾ ಇಲಾಖೆಗಳಲ್ಲಿರುವ ಶೇ.5 ಅನುದಾನದ ಸಮರ್ಪಕ ಬಳಕೆಯಾಗಬೇಕು, ಎಲ್ಲಾ ಕಾರ್ಯಾಲಯಗಳನ್ನು ಜನಸ್ನೇಹಿ ಕಾರ್ಯಾಲಯಗಳನ್ನಾಗಿ ಪರಿವರ್ತಿಸಬೇಕು ಎಂದು ಮನವಿ ಮಾಡಿದರು.

ವಿಕಲಚೇತನರಿಗೆ ಖಾಸಗಿ ಬಸ್‌ನಲ್ಲಿ ಉಚಿತ ಪಾಸ್ ನೀಡುವ ಕುರಿತಂತೆ ಆರ್‌ಟಿಎ ಸಭೆಯಲ್ಲಿ ಚರ್ಚಿಸಿ ಪ್ರಯತ್ನಿಸಲಾಗುವುದು. ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ವಿಶೇಷ ಚೇತನ ಸ್ನೇಹಿಯಾಗುವಂತೆ ನೋಡಿ ಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲೆಯ ಎಲ್ಲಾ ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದು. ವಿಕಲಚೇತನರಿಗೆ ಮೀಸಲಿರುವ ಶೇ.5 ಅನುದಾನವನ್ನು ಸದ್ಬಳಕೆ ಮಾಡುವ ಕುರಿತಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇತರೇ ಸಮಸ್ಯೆಗಳ ಕುರಿತಂತೆ ರಾಜ್ಯಮಟ್ಟದಲ್ಲಿ ನಿರ್ಧಾರವಾಗಬೇಕಿದ್ದು, ಈ ಮನವಿಗಳನ್ನು ರಾಜ್ಯ ಸರಕಾರಕ್ಕೆ ಕಳುಹಿಸಲಾಗುವುದು ಎಂದರು.

ಲೋ ವೋಲ್ಟೆಜ್ ಸಮಸ್ಯೆ:  ಈ ಭಾಗದಲ್ಲಿ ತೀವ್ರವಾಗಿರುವ ಲೋ ವೋಲ್ಟೇಜ್ ಸಮಸ್ಯೆಗೆ ಸಂಬಂಧಿಸಿ ಗ್ರಾಮಸ್ಥರ ದೂರುಗಳ ಕುರಿತಂತೆ ಮೆಸ್ಕಾಂ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಪ್ರಶ್ನಿಸಿದರು. ಮುಧೂರುನಲ್ಲಿ ಸಬ್‌ಸ್ಟೇಶನ್ ನಿರ್ಮಾಣ ಕಾಮಗಾರಿ ಮುಕ್ತಾಯಗೊಳಿಸಲು ಅರಣ್ಯ ಇಲಾಖೆಯ ಎಕೋ ಸೆನ್ಸಿಟಿವ್ ಝೋನ್ ಸಮಸ್ಯೆ ಇರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ಜಡ್ಕಲ್ ವ್ಯಾಪ್ತಿಯ ಮೆಕ್ಕೆಯಲ್ಲಿ ನೂತನ ಅಂಗನವಾಡಿ ಆರಂಭಿಸುವ ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ, ಸಾಧ್ಯವಿದ್ದಲ್ಲಿ ಮಿನಿ ಅಂಗನವಾಡಿ ಯನ್ನು ಶೀಘ್ರದಲ್ಲಿ ಆರಂಭಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಶೇ.95ರಷ್ಟು ಗ್ರಾಮಸ್ಥರು ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಗ್ರಾಮದಲ್ಲಿ ಶೇ.100 ಪ್ರಥಮ ಡೋಸ್ ಲಸಿಕೆ ಗುರಿ ಸಾಧಿಸುವಂತೆ ಹಾಗೂ ಎರಡನೇ ಡೋಸ್‌ಗೆ ಅವಧಿ ಬಂದಿರುವ ಎಲ್ಲಾ ಸಾರ್ವಜನಿಕರು ತಪ್ಪದೇ ಲಸಿಕೆ ಪಡೆಯುವಂತೆ ಹಾಗೂ ಪಡಿತರ ಚೀಟಿಗಳಿಗೆ ಇ-ಕೆವೈಸಿ ಮಾಡಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಡ್ಕಲ್ ಗ್ರಾಪಂ ಅಧ್ಯಕ್ಷೆ ವನಜಾಕ್ಷಿ, ಉಪಾಧ್ಯಕ್ಷ ಲಕ್ಷ್ಮಣ ಶೆಟ್ಟಿ, ಜಿಪಂನ ಯೋಜನಾ ನಿರ್ದೇಶಕ ಬಾಬು, ಬೈಂದೂರು ತಾಪಂ ಕಾರ್ಯನಿರ್ವಹಣಾಧಿಕಾರಿ ಭಾರತಿ ಮತ್ತಿತರರು ಉಪಸ್ಥಿತರಿದ್ದರು. 

ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಸ್ವಾಗತಿಸಿದರು.

ಮುಧೂರು ಆರೋಗ್ಯ ಕೇಂದ್ರಕ್ಕೆ ಸ್ಟಾಫ್ ನರ್ಸ್ 

ಮುಧೂರಿನಲ್ಲಿರುವ ಆರೋಗ್ಯ ಕೇಂದ್ರಕ್ಕೆ ಸ್ಟಾಫ್ ನರ್ಸ್ ಕೊರತೆ ಇರುವ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನೇಮಕಕ್ಕೆ ಅನುಮೋದನೆ ದೊರೆತಿದ್ದು, ಸ್ಥಳೀಯ ಅಥವಾ ಯಾವುದೇ ಅಭ್ಯರ್ಥಿ ಗಳು ಇಲ್ಲಿ ಕರ್ತವ್ಯ ನಿರ್ವಹಿಸಲು ಇಚ್ಛಿಸಿದಲ್ಲಿ ಕೂಡಲೇ ಆದೇಶ ಪತ್ರ ನೀಡಲಾಗುವುದು ಎಂದರು.

ಜಡ್ಕಲ್ ಮತ್ತು ಮುಧೂರುನಲ್ಲಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಸಲ್ಲಿಸಿದ ಮನವಿ ಕುರಿತು ಪರಿಶೀಲಿಸಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸ್ಥಳೀಯ ಕಂದಾಯ ಅಧಿಕಾರಿಗಳಿಂದ ಈ ಬಗ್ಗೆ ಮಾಹಿತಿ ಪಡೆದು, ಈಗಾಗಲೇ ಈ ಎರಡೂ ಗ್ರಾಮಗಳಲ್ಲಿ ತಲಾ ಒಂದು ಎಕರೆ ಭೂಮಿಯನ್ನು ಇದಕ್ಕಾಗಿ ಕಾಯ್ದಿರಿಸಲಾಗಿದ್ದು, ಗಡಿ ಗುರುತು ಮಾಡುವುದು ಬಾಕಿ ಇದೆ. 2 ವಾರಗಳಲ್ಲಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬೈಂದೂರು ತಹಶೀಲ್ದಾರ್ ಗೆ ಸೂಚನೆಗಳನ್ನು ನೀಡಿದರು.

ಸರಕಾರಿ ಶಾಲೆಗೆ ಅಧಿಕ ವಿದ್ಯಾರ್ಥಿಗಳು 

ಜಡ್ಕಲ್ ಗ್ರಾಪಂ ವ್ಯಾಪ್ತಿಯ ಸಳಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ, ಪ್ರಸ್ತುತ ಖಾಸಗಿ ಶಾಲೆಯನ್ನು ತೊರೆದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಆದರೆ ಇಲ್ಲಿನ ಶಾಲಾ ಕಟ್ಟಡವು ಸುಮಾರು 60 ವರ್ಷಗಳಷ್ಟು ಹಳೆಯದಾಗಿದೆ. ಶಾಲಾ ಕಟ್ಟಡ ಮತ್ತು ಶೌಚಾಲಯವನ್ನು ಆಧುನಿಕ ರೀತಿಯಲ್ಲಿ ಮೇಲ್ದರ್ಜೆಗೇರಿಸುವಂತೆ ಪೋಷಕರು ಮನವಿ ಮಾಡಿದರು.

ಅಲ್ಲದೇ ಶಾಲೆಯಲ್ಲಿ 3 ಮಂದಿ ಖಾಯಂ ಶಿಕ್ಷಕರು ಮಾತ್ರವಿದ್ದು, ಒಂದನೇ ತರಗತಿಯಿಂದ ಶಾಲೆಗಳು ಆರಂಭವಾಗುವ ನಿರೀಕ್ಷೆ ಇರುವುದರಿಂದ ಅತಿಥಿ ಶಿಕ್ಷಕರನ್ನು ನೇಮಿಸುವಂತೆ ಶಾಲೆಯ ಶಿಕ್ಷಕರು ಕೋರಿದರು. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News