'ಮೀನುಗಾರರ ಗ್ರಾಮಗಳ ಅಭಿವೃದ್ದಿಗೆ 7.5ಕೋಟಿ ರೂ ಅನುದಾನ'

Update: 2021-10-17 15:45 GMT

ಮಲ್ಪೆ, ಅ.17: ಮೀನುಗಾರರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಗ್ರಾಮ ಗಳನ್ನು ಗುರುತಿಸಿ, ಅಗತ್ಯ ಮೂಲಭೂತ ಸೌಲಭ್ಯ ಗಳನ್ನು ಒದಗಿಸಿ ಅಭಿವೃದ್ದಿ ಪಡಿಸಲು 7.5 ಕೋಟಿ ರೂ. ಅನುದಾನ ನೀಡುವ ನೂತನ ಯೋಜನೆಯನ್ನು ಜಾರಿಗೆ ತರಲಾ ಗುವುದು ಎಂದು ಕೇಂದ್ರ ಮೀನುಗಾರಿಕೆ, ವಾರ್ತಾ ಮತ್ತು ಪ್ರಚಾರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಯ ರಾಜ್ಯ ಸಚಿವ ಡಾ. ಎಲ್.ಮುರುಗನ್ ಹೇಳಿದ್ದಾರೆ.

ಮಲ್ಪೆ ಮೀನುಗಾರಿಕಾ ಬಂದರಿಗೆ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಮೀನುಗಾರರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು. ಮೀನುಗಾರರ ಗ್ರಾಮಗಳಲ್ಲಿ ಮೀನುಗಾರರಿಗೆ ಅಗತ್ಯ ಮೂಲಭೂತ ಸೌಕರ್ಯ, ಮೀನುಗಾರಿಕಾ ಚಟುವಟಿಕೆ ಮತ್ತು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಅಭಿವೃದ್ದಿಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೈಗೊಳ್ಳ ಲಾಗುವುದು. ಅದಕ್ಕಾಗಿ ಮೀನುಗಾರರ ಗ್ರಾಮಗಳನ್ನು ಗುರುತಿಸುವ ಕಾರ್ಯ ನಡೆಸಲಾಗುವುದು ಎಂದರು.

ಕರ್ನಾಟಕದಲ್ಲಿ ಮೀನುಗಾರಿಕಾ ಚಟುವಟಿಕೆಗಳ ಅಭಿವೃದ್ಧಿಗಾಗಿ ಕೇಂದ್ರ ಸರಕಾರದಿಂದ ಮುಂದಿನ 5 ವರ್ಷಗಳಲ್ಲಿ 725 ಕೋಟಿ ರೂ.ಗಳ ಹೂಡಿಕೆ ಮಾಡಲಾಗುವುದು. ಹೆಜಮಾಡಿಯಲ್ಲಿ ಬಂದರು ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಅನುಮೋದನೆ ದೊರೆತಿದೆ. ದೇಶದ 5 ಪ್ರಮುಖ ಬಂದರುಗಳನ್ನು ಆಸ್ಪತ್ರೆ, ಕೋಲ್ಡ್ ಸ್ಟೋರೇಜ್, ಐಸ್ ಪ್ಲಾಂಟ್ ಸಹಿತ ಅಂತಾರಾಷ್ಟ್ರೀಯ ಸೌಲಭ್ಯಗಳೊಂದಿಗೆ ಅಭಿವೃದ್ಧ್ದಿಪಡಿಸುವ ಬಗ್ಗೆ ಈಗಾಗಲೇ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ, ರಾಜ್ಯದ ಮೀನುಗಾರಿಕಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ, ಮೀನುಗಾರರ ವಿವಿಧ ಬೇಡಿಕೆಗಳ ಕುರಿತೂ ಸಹ ಕೇಂದ್ರ ಮತ್ತು ರಾಜ್ಯ ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಮೀನುಗಾರರ ಅಭಿವೃದ್ಧಿಗೆ ಕೇಂದ್ರಕ್ಕೆ ಈಗಾಗಲೇ 16 ಪ್ರಸ್ತಾವನೆಗಳನ್ನು ಕಳುಹಿಸಲಾಗಿದೆ ಎಂದು ಹೇಳಿದರು.

ಉಡುಪಿ ಶಾಸಕ ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಪು ಶಾಸಕ ಲಾಲಾಜಿ ಅರ್ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಪಂ ಸಿಇಓ ಡಾ.ನವೀನ್ ಭಟ್, ಮೀನು ಮಾರಾಟ ಪೆಡರೇಷನ್ ಅಧ್ಯಕ್ಷ ಯಶ್‌ ಪಾಲ್ ಸುವರ್ಣ, ಮೀನುಗಾರಿಕಾ ಇಲಾಖೆ ನಿರ್ದೇಶಕ ರಾಮಾಚಾರ್ಯ, ಕೆಎಫ್‌ಡಿಸಿ ಅಧ್ಯಕ್ಷ ನಿತಿನ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ದೊಡ್ಡಮನಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಉಪಸ್ಥಿತರಿದ್ದರು.

ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಣೇಶ್ ಸ್ವಾಗತಿಸಿದರು. ಉಪ ನಿರ್ದೇಶಕ ಶಿವಕುಮಾರ್ ನಿರೂಪಿಸಿದರು. ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ ವಂದಿಸಿದರು. ಇದೇ ವೇಳೆ ಕೇಂದ್ರ ಸಚಿವ ಎಲ್. ಮುರುಗನ್ ಮೀನುಗಾರರೊಂದಿಗೆ ಮೀನುಗಾರಿಕಾ ಬೋಟ್‌ನಲ್ಲಿ ಪ್ರಯಾಣಿಸಿದರು.

‘ಡಿಸೇಲ್ ಬೆಲೆ ಏರಿಕೆಯಿಂದ ಮೀನುಗಾರಿಕೆಗೆ ನಷ್ಟ’

ಚಂಡಮಾರುತ ಹಾಗೂ ಕೊರೋನಾದಿಂದ ಕಂಗೆಟ್ಟಿರುವ ಮೀನುಗಾರರಿಗೆ ಡಿಸೇಲ್ ಬೆಲೆ ವಿಪರೀತ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಹಿಂದೆ ಡಿಸೇಲ್ ಬೆಲೆ 2-3ರೂ. ಏರಿಕೆ ಆಗುತ್ತಿದ್ದರೆ, ಇದೀಗ ಒಂದೇ ವರ್ಷದಲ್ಲಿ 40ರೂ. ಹೆಚ್ಚಾಗಿದೆ. ಇದರಿಂದ ಮೀನುಗಾರರು ಬಹಳಷ್ಟು ನಷ್ಟ ಅನುಭವಿಸುತ್ತಿದ್ದಾರೆ ಎಂದು ಮೀನುಗಾರರ ಮುಖಂಡ ಕಿಶೋರ್ ಸುವರ್ಣ ಸಚಿವರ ಮುಂದೆ ಅಳಲು ತೋಡಿಕೊಂಡರು.

ಅದೇ ರೀತಿ ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡಬೇಕು. ನಾಡ ದೋಣಿಗಳಿಗೆ ಸೀಮೆಎಣ್ಣೆ ವಿತರಣೆ ಮಾಡಬೇಕು. ಡ್ರೆಜ್ಜಿಂಗ್ ಸಮಸ್ಯೆ ಬಗೆಹರಿಸ ಬೇಕು. ಬೋಟ್‌ಗಳಿಗೆ ನೀಡುವ ಡಿಸೇಲ್‌ನಿಂದ ರೋಡ್ ಸೆಸ್ ತೆಗೆದುಹಾಕ ಬೇಕು. ಸಮುದ್ರದಲ್ಲಿ ಮೀನುಗಾರರರಿಗೆ ಎದುರಾಗುವ ಅಂತರ್‌ರಾಜ್ಯ ಸಮಸ್ಯೆಗಳನ್ನು ಬಗೆಹರಿಸಬೇಕು. ಸಮುದ್ರ ಮಧ್ಯೆ ಆರೋಗ್ಯ ಸಮಸ್ಯೆ ಉಂಟಾ ದಲ್ಲಿ ಮೀನುಗಾರರ ರಕ್ಷಣೆ ಸೀ ಆಂಬುಲೈನ್ಸ್ ವ್ಯವಸ್ಥೆ ಮಾಡುವಂತೆ ಮೀನುಗಾರರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News