ದುರ್ಗಾ ದೌಡ್ ನಲ್ಲಿ ತಲವಾರು ಪ್ರದರ್ಶನ: ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹ
ಉಡುಪಿ, ಅ.17: ವಿಜಯದಶಮಿಯಂದು ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ದುರ್ಗಾ ದೌಡ್ ಕಾರ್ಯಕ್ರಮದ ಮೆರವಣಿಗೆ ಯುದ್ದಕ್ಕೂ ತಲವಾರು ಮತ್ತು ಇತರ ಮಾರಕ ಆಯುಧಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಠಿಸಿದ್ದ ಕ್ರಮವನ್ನು ಪಿಎಫ್ಐ ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.
ದುರ್ಗಾದೌಡ್ ಮೆರವಣಿಗೆಯಲ್ಲಿ ಪೊಲೀಸರ, ಶಾಸಕರ ಮತ್ತು ಸಚಿವರ ಸಮ್ಮುಖದಲ್ಲಿ ಸಾರ್ವಜನಿಕವಾಗಿ ತಲವಾರು ಹಾಗೂ ಮಾರಕಾಯುಧಗಳನ್ನು ಪ್ರದರ್ಶಿಸಲಾಗಿದೆ. ಈ ಎಲ್ಲಾ ಸಂದರ್ಭದಲ್ಲೂ ಪೊಲೀಸ್ ಇಲಾಖೆಯ ಗಾಢ ಮೌನ ಅನಾಹುತಕ್ಕೆ ದಾರಿಯುಂಟು ಮಾಡಲಿದೆ. ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದುರ್ಗಾ ದೌಡ್ ಕಾರ್ಯಕ್ರಮದ ಆಯೋಜಕರ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ಬಂಧಿಸಬೇಕು. ಇದಕ್ಕೆ ವಿಫಲವಾದರೆ ಜಿಲ್ಲಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಪಿಎಫ್ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಯಾಝ್ ಅಹ್ಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.