ಮೀಲಾದುನ್ನಬಿ ಸರಳವಾಗಿ ಆಚರಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕರೆ

Update: 2021-10-17 17:03 GMT
ಡಾ. ಕೆ.ವಿ. ರಾಜೇಂದ್ರ

ಮಂಗಳೂರು, ಅ.17: ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮೀಲಾದುನ್ನಬಿಯನ್ನು ಸರಳವಾಗಿ ಹಾಗೂ ಭಕ್ತಿಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಆಚರಿಸಲಿರುವ ಮೀಲಾದುನ್ನಬಿ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ ಸಾಂಸ್ಕೃತಿಕ ಕಾರ್ಯಕ್ರಮ/ ಸಭೆ/ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ. ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಮಸೀದಿ ಹಾಗೂ ದರ್ಗಾಗಳಲ್ಲಿ ಸುರಕ್ಷಿತ ಅಂತರ ಹಾಗೂ ಕೋವಿಡ್ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ದೈಹಿಕ ಅಂತರ ಕಾಪಾಡಿಕೊಂಡು ಮೀಲಾದುನ್ನಬಿ ಆಚರಿಸಬಹುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಆಚರಿಸಬಹುದಾಗಿದೆ.

ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಮಸೀದಿಗಳಲ್ಲಿ ನಮಾಝ್ ನಿರ್ವಹಿಸುವವರ ಮಧ್ಯ ಕನಿಷ್ಠ ಆರು ಅಡಿ ಅಂತರ ಇರಬೇಕು. ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡಬೇಕು. ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ಮನೆಗಳಿಂದ ಮುಸಲ್ಲಾವನ್ನು ಕಡ್ಡಾಯವಾಗಿ ತರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ.

ಮಸೀದಿಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್, ಇತರ ತೆರೆದ ಜಾಗ) ಮೀಲಾದುನ್ನಬಿ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ. ಖಬರಸ್ತಾನದಲ್ಲಿ ಮೀಲಾದುನ್ನಬಿ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News