ಮಂಗಳೂರು; ಅಕ್ರಮ ಮರಳುಗಾರಿಕೆ: ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನಿಸಿದ ದುಷ್ಕರ್ಮಿಗಳು!

Update: 2021-10-20 17:24 GMT

ಮಂಗಳೂರು, ಅ.20: ಅಕ್ರಮ ಮರಳುಗಾರಿಕೆಯ ತಪಾಸಣೆಯ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಲಾರಿ ಹತ್ತಿಸಲು ಯತ್ನಿಸಿದ್ದಾರೆ ಎನ್ನಲಾದ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.

ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್, ಆಲ್ಟೋ ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ಎರಡು ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ವಿವರ: ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಬಂದ ಮಾಹಿತಿಯ ಮೇರೆಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ನಸುಕಿನ ಜಾವ ಅಡ್ಯಾರ್ ಸಮೀಪದ ಕಾಲೇಜು ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ನಸುಕಿನ ಜಾವ 2:30ರ ಸುಮಾರಿಗೆ ಅಡ್ಯಾರ್ ಸಮೀಪದ ನೇತ್ರಾವತಿ ನದಿ ಹಾಗೂ ಮರಳು ಧಕ್ಕೆ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ-73 ಕಡೆಗೆ ಟಿಪ್ಪರ್ ಲಾರಿಯೊಂದು ಬರುತ್ತಿತ್ತು. ವಾಹನವನ್ನು ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ.

ಈ ವೇಳೆಗೆ ಟಿಪ್ಪರ್ ಲಾರಿಯ ಹಿಂಬದಿಯಿಂದ ಆಲ್ಟೋ ಕಾರೊಂದು ಬಂದಿದ್ದು, ಅದರಲ್ಲಿನ ದುಷ್ಕರ್ಮಿಗಳು ಟಿಪ್ಪರ್ ಲಾರಿಯನ್ನು ನಿಲ್ಲಿಸದಂತೆ ಟಿಪ್ಪರ್ ಲಾರಿ ಚಾಲಕನಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಪೊಲೀಸ್ ಅಧಿಕಾರಿಗಳ ಸೂಚನೆ ಧಿಕ್ಕರಿಸಿ, ಫರಂಗಿಪೇಟೆ ಕಡೆಯ ರಸ್ತೆಯಲ್ಲಿ ವಾಹನ ಚಲಾಯಿಸಿಕೊಂಡು ತೆರಳಿದರು. ಈ ವಾಹನಗಳನ್ನು ಬೆನ್ನಟ್ಟಿದರೂ ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋಗಿ ತಪ್ಪಿಸಿಕೊಂಡಿದ್ದರು.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸಹಕಾರದೊಂದಿಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಟಿಪ್ಪರ್ ಲಾರಿ, ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲೂ ಪ್ರಕರಣ: ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್‌ನಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಫರಂಗಿಪೇಟೆಯತ್ತ ತೆರಳುತ್ತಿದ್ದ ವಾಹನಗಳು ಸಹಿತ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಬುಧವಾರ ನಸುಕಿನ ಜಾವ ಫರಂಗೀಪೇಟೆ ಚೆಕ್‌ಪೋಸ್ಟ್‌ನಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಟಿಪ್ಪರ್ ಲಾರಿಯೊಂದು ಬರುತ್ತಿದ್ದು, ಬ್ಯಾಟನ್ ಹಾಗೂ ಟಾರ್ಚ್‌ಲೈಟ್ ಸಹಾಯದಿಂದ ಟಿಪ್ಪರ್ ಲಾರಿ ನಿಲ್ಲಿಸಲು ಪೊಲೀಸರು ಸೂಚಿಸಿದ್ದಾರೆ. ಆದಾಗ್ಯೂ, ಟಿಪ್ಪರ್ ಲಾರಿ ಚಾಲಕನು ಲಾರಿಯನ್ನು ವೇಗವಾಗಿ ಚಲಾಯಿಸಿ, ಪೊಲೀಸರ ಮೇಲೆಯೇ ವಾಹನ ಹತ್ತಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವೇಳೆ ಪೊಲೀಸರು ತಪ್ಪಿಸಿಕೊಂಡು ಬದಿಗೆ ಸರಿದಿದ್ದಾರೆ. ನಂತರ ಲಾರಿಯನ್ನು ಚಾಲಕನು ಚೆಕ್‌ಪೋಸ್ಟ್‌ನ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದಿದ್ದಾನೆ. ಲಾರಿಯ ಹಿಂದೆಯೇ ಮಂಗಳೂರು ಕಡೆಯಿಂದ ಆಲ್ಟೋ ಕಾರೊಂದನ್ನು ಅದರ ಚಾಲಕನು ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಅದು ಕೂಡ ಪೊಲೀಸರ ಸೂಚನೆಗೆ ನಿಲ್ಲಿಸದೇ ಇದ್ದು, ಆ ಕಾರು ಚಾಲಕನ ಪಕ್ಕದಲ್ಲಿ ಕುಳಿತ್ತಿದ್ದ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರನ್ನು ನಿಲ್ಲಿಸದೇ ಹೋಗಿದ್ದಾರೆ. ದುಷ್ಕರ್ಮಿಗಳು ಪೊಲೀಸರು ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರ ಮೇಲೆ ಲಾರಿಯನ್ನು ಹತ್ತಿಸಿ ಕೊಲೆ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೇ ಇಲಾಖಾ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆಸಿ, ಜಖಂಗೊಳಿಸಿ 2000 ರೂ. ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News