​ಪ.ಜಾತಿ,ಪ.ಪಂಗಡ ಯೋಜನೆ ಶೇ.100ರಷ್ಟು ಅನುಷ್ಠಾನಗೊಳಿಸಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಕರೆ

Update: 2021-10-21 15:51 GMT

ಉಡುಪಿ, ಅ.21: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ಅನುದಾನವನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿವಿಧ ಇಲಾಖೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪ.ಜಾತಿ ಮತ್ತು ಪ.ಪಂಗಡಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ವಿವಿಧ ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜನ ಸಾಮಾನ್ಯರಿಗೆ ಸರಳ ವಾಗಿ ಅರ್ಥವಾಗುವ ರೀತಿಯಲ್ಲಿ ಹೆಚ್ಚು ಪ್ರಚಾರಪಡಿಸುವುದರ ಜೊತೆಗೆ ಸಹಾಯವಾಣಿಗಳನ್ನು ತೆರೆಯುವ ಮೂಲಕ ಯೋಜನೆಗಳ ಇತರೆ ಮಾಹಿತಿ ಯನ್ನು ನೀಡಬೇಕು ಎಂದ ಅವರು, ಎಲ್ಲಾ ಇಲಾಖೆಗಳ ಯೋಜನಾ ಕಾರ್ಯಕ್ರಮಗಳ ಮಾಹಿತಿಯ ಮಡಿಕೆ ಪತ್ರಗಳನ್ನು ತಯಾರಿಸಿ ಗ್ರಾಪಂ ಸದಸ್ಯರು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು ಎಂದರು.

ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿ ಸುವಾಗ ಅಗತ್ಯವಿರುವ ದಾಖಲೆಗಳನ್ನು ಮಾತ್ರ ಪಡೆದು ಅರ್ಹ ಫಲಾನುಭವಿ ಗಳ ಆಯ್ಕೆ ಮಾಡಬೇಕು. ಈ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯ ಸಮಸ್ಯೆಗಳು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಉದ್ಭವಿಸಿದಾಗ ಅವುಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಶೀಘ್ರದಲ್ಲಿಯೇ ಅವುಗಳನ್ನು ಬಗೆಹರಿಸಿ ಅನುಷ್ಟಾನಗೊಳಿಸಬೇಕು ಎಂದರು.

ಪ್ರತೀ ಇಲಾಖೆಯಲ್ಲೂ ಯೋಜನೆಗಳ ಅನುಷ್ಠಾನಕ್ಕಾಗಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಬಗೆಹರಿಸಲು ನೊಡೆಲ್ ಅಧಿಕಾರಿಗಳನ್ನು ನೇಮಕ ಮಾಡುವುದರೊಂದಿಗೆ, ಬಂದಂತಹ ಅಹವಾಲುಗಳನ್ನು ಆಗ್ಗಿಂದಾಗ್ಗೆ ಇತ್ಯರ್ಥ ಪಡಿಸಬೇಕು ಎಂದು ಅವರು ಸೂಚನೆಗಳನ್ನು ನೀಡಿದರು.

ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಬೇಕಾಗಿದೆ. ಆಯ್ದ ಹಾಸ್ಟೆಲ್‌ಗಳಿಗೆ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿ ಗಳೊಂದಿಗೆ ಸಮಾಲೋಚನೆ ನಡೆಸುವುದರೊಂದಿಗೆ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಒತ್ತು ನೀಡುವಂತೆ ಉತ್ತೇಜಿಸಬೇಕು ಎಂದರು.

ಪ.ಜಾತಿ/ಪ.ಪಂಗಡದವರು ವಾಸಿಸುವ ಕಾಲೋನಿಗಳಲ್ಲಿ ಅಗತ್ಯ ಮೂಲ ಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದ ಅವರು ಗ್ರಾ.ಪಂ ಮಟ್ಟದಲ್ಲೂ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಾಮಾನ್ಯ ಯೋಜನೆಗಳಲ್ಲಿ ಪ.ಜಾತಿ/ಪ.ಪಂಗಡದ ಜನಸಂಖ್ಯೆಯಲ್ಲಿ ಬಾಕಿ ಉಳಿದ ಫಲಾನುಭವಿಗಳ ಮಾಹಿತಿಯನ್ನು ಪಡೆದು ಅರ್ಹತೆ ಹೊಂದಿರುವ ಪ್ರತಿಯೊಬ್ಬರಿಗೂ ಯೋಜನೆಗಳ ಸೌಲಭ್ಯವನ್ನು ತಲುಪಿಸುವ ಕಾರ್ಯ ಮಾಡಬೇಕು ಎಂದರು.

ಕಾಲೋನಿಗಳ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಗುಣಮಟ್ಟ ದಲ್ಲಿ ಆದ್ಯತೆಯ ಮೇರೆಗೆ ಕೈಗೊಂಡು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದ ಡಿಸಿ, ಗಂಗಾಕಲ್ಯಾಣ ಯೋಜನೆಯ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುದ್ದೀಕರಣಗೊಳಿಸುವ ಕಾರ್ಯ ಸಹ ನಿಗದಿತ ಕಾಲಾವಧಿಯಲ್ಲಿ ಪೂರ್ಣ ಗೊಳಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಸದಾಶಿವ ಪ್ರಭು, ಜಿಪಂ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ಜಿಲ್ಲಾ ಮಟ್ಟದ ಅನುಷ್ಟಾನಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News