ಬೀದರ್ ನ ಶಾಹೀನ್ ಶಾಲೆಯ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ: ಹೈಕೋರ್ಟ್‍ಗೆ ಸರಕಾರದ ಹೇಳಿಕೆ

Update: 2021-10-22 17:08 GMT

ಬೆಂಗಳೂರು, ಅ.22: ಬೀದರ್ ನಗರದ ಶಾಹೀನ್ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳನ್ನು ಪೊಲೀಸ್ ಸಮವಸ್ತ್ರದಲ್ಲಿಯೇ ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರವು ಹೈಕೋರ್ಟ್‌ಗೆ ತಿಳಿಸಿದೆ. ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಪೊಲೀಸ್ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸತ್ತಗಳನ್ನು ಹಿಡಿದು ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಅನುಪಾಲನಾ ವರದಿ ಸಲ್ಲಿಸಲಾಗುವುದು. ಸುತ್ತೋಲೆಯಲ್ಲಿ ಎರಡನೇ ನಿರ್ದೇಶನವಾದ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಮಾದರಿ ನಿಯಮಗಳು 2016 ಅನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆ ಕಳುಹಿಸಿದ್ದಾರೆ. ಈ ಘಟನೆ ಮುಂದೆ ಮರುಕಳಿಸುವುದಿಲ್ಲ ಎಂದು ಸರಕಾರಿ ವಕೀಲರು ಪೀಠಕ್ಕೆ ತಿಳಿಸಿದರು.

ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಮಾದರಿ ನಿಯಮಗಳು 2016 ಅನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆ ಕಳುಹಿಸಿದ್ದಾರೆ ಎಂದು ತಿಳಿಸಲಾಗಿದೆ. ಈ ಸಂಬಂಧ ಮೂರ್ನಾಲ್ಕು ದಿನಗಳಲ್ಲಿ ಅನುಪಾಲನಾ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಬೇಕು ಎಂದು ಪೀಠ ಆದೇಶದಲ್ಲಿ ಹೇಳಿದೆ. ಅಲ್ಲದೆ ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News