ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸೂಕ್ತ ನಿರ್ಧಾರ: ಸಿದ್ದರಾಮಯ್ಯ

Update: 2021-10-23 15:48 GMT

ಶಿವಮೊಗ್ಗ,ಅ.23:ಬಂಗಾರಪ್ಪನವರು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾಗಿದ್ದರು.ಮಧುಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷದ ಸೇರ್ಪಡೆ ಸೂಕ್ತ ನಿರ್ಧಾರವಾಗಿದೆ. ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

 ಸೊರಬ ತಾಲೂಕು ಕುಬಟೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಬಂಗಾರಪ್ಪ ಅವರು ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಆದವರು. ನಾನು ಕಾಂಗ್ರೆಸ್ ಸೇರುವಾಗಲೂ ಇದೇ ಪ್ರಶ್ನೆ ಕೇಳಿದ್ದೆ, ಕೊನೆಗೆ ನಾನು ಮುಖ್ಯಮಂತ್ರಿ ಆಗಿಲ್ಲವೇ? ಕಾಂಗ್ರೆಸ್ ಪಕ್ಷ ಭವಿಷ್ಯ ರೂಪಿಸುತ್ತೆ, ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರೆ ಉತ್ತಮ ಅವಕಾಶಗಳು ತಾನಾಗಿಯೇ ಸಿಗುತ್ತವೆ ಎಂದರು.

ಸಿ.ಎಂ ಉದಾಸಿ ಮತ್ತು ಎಂ.ಸಿ ಮನಗೂಳಿ ಅವರ ನಿಧನದ ಕಾರಣದಿಂದ ಹಾನಗಲ್ ಮತ್ತು ಸಿಂಧಗಿಯಲ್ಲಿ ಉಪಚುನಾವಣೆಗಳು ಬಂದಿವೆ. ಎರಡೂ ಕಡೆ ನಮ್ಮ ನಿರೀಕ್ಷೆಗೂ ಮೀರಿದ ಜನಸ್ಪಂದನೆ ವ್ಯಕ್ತವಾಗುತ್ತಿದೆ. ಇದನ್ನು ನೋಡಿದಾಗ ಕಾಂಗ್ರೆಸ್ ಪರವಾದ ವಾತಾವರಣ ಇದೆ ಎಂಬುದು ಗೊತ್ತಾಗುತ್ತಿದೆ. ಕಾರಣ ನಮ್ಮ ಸರ್ಕಾರ ಮತ್ತು ಕೇಂದ್ರದ ಮನಮೋಹನ್ ಸಿಂಗ್ ಅವರ ಸರ್ಕಾರ ಅಧಿಕಾರದಲ್ಲಿ ಇದ್ದಾಗ ನೀಡಿದ್ದ ಕಾರ್ಯಕ್ರಮಗಳನ್ನು ಜನ ನೆನಪು ಮಾಡಿಕೊಳ್ಳುತ್ತಿದ್ದಾರೆ. ಕಳೆದ ಎರಡೂಕಾಲು ವರ್ಷಗಳಲ್ಲಿ ರಾಜ್ಯ ಸರ್ಕಾರದ ಮತ್ತು ಏಳು ವರ್ಷಗಳ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳು ಜನರನ್ನು ಭ್ರಮನಿರಸನಗೊಳಿಸಿದೆ. 2014 ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ಇದರಿಂದ ಜನ ನೊಂದಿದ್ದಾರೆ. ಜೊತೆಗೆ ಬೆಲೆಯೇರಿಕೆ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ ಎಂದು ಹೇಳಿದರು.

ಮೊದಲು ಮೀಸಲಾತಿ ವಿರೋಧ ಮಾಡುತ್ತಿದ್ದವರೇ ಇಂದು ನಮಗೂ ಮೀಸಲಾತಿ ಕೊಡಿ ಎಂದು ಕೇಳುತ್ತಿದ್ದಾರೆ. ಮೀಸಲಾತಿ ಇಂದ ಪ್ರತಿಭೆಗಳಿಗೆ ಅನ್ಯಾಯ ಆಗುತ್ತೆ ಎನ್ನುತ್ತಿದ್ದವರು ಇವರೇ ಅಲ್ಲವೇ? ನರೇಂದ್ರ ಮೋದಿ ಅವರು ಸಂವಿಧಾನ ತಿದ್ದುಪಡಿ ಮಾಡಿ ಮೇಲ್ವರ್ಗದ ಜನರಿಗೂ ಮೀಸಲಾತಿ ನೀಡಿದ್ದಾರೆ. ಈಗ ಮೀಸಲಾತಿ ಬಗ್ಗೆ ವಿರೋಧ ಮಾಡುವ ಹಾಗಿಲ್ವ? ಯಾವುದೇ ಸಮುದಾಯ ಮೀಸಲಾತಿ ಕೇಳೋದು ತಪ್ಪಲ್ಲ. ಅರ್ಹರಿಗೆ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ ಎಂದರು.

ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಏನು ಹೇಳಿದೆ ಗೊತ್ತಾ, ಪ್ರತೀ ರಾಜ್ಯದಲ್ಲಿ ಒಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಇರಬೇಕು, ಆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಲು ಬಯಸುವವರು ಆಯೋಗಕ್ಕೆ ಮನವಿ ನೀಡಬೇಕು. ಮನವಿ ಪರಿಶೀಲನೆ ನಡೆಸಿ, ಆ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವುದು ಬಿಡುವುದು ಆಯೋಗದ ಕೆಲಸ ಎಂದು ಹೇಳಿದರು.

ಕೊರೋನ ಕಾಲದಲ್ಲೂ ನಮ್ಮ ಇತಿಮಿತಿಯೊಳಗೆ ಬೆಲೆಯೇರಿಕೆ ವಿರುದ್ಧ ಹೋರಾಟ ಮಾಡಿದ್ದೇವೆ. ಪ್ರತಿಭಟನೆ ಮಾಡಲು ಹೊರಟ್ರೆ ಬಂಧಿಸುತ್ತಾರೆ, ನಮಗೆ ಮಾತನಾಡಲು ಅವಕಾಶವನ್ನೇ ಕೊಡಲ್ಲ. ಮೋದಿ ಸರ್ಕಾರ ವಿರುದ್ಧ ಮಾತನಾಡಿದ್ರೆ ಭಯೋತ್ಪಾದಕ ಅಂತಾರೆ, ದೇಶದ್ರೋಹಿ ಎನ್ನುತ್ತಾರೆ, ಇ.ಡಿ ಅಥವಾ ಐ.ಟಿ ಯವರನ್ನು ಚೂ ಬಿಡ್ತಾರೆ. ಇಂತಹಾ ಸ್ಥಿತಿಯಲ್ಲಿ ಏನು ಮಾಡಬೇಕು? ಇಂದಿರಾಗಾಂಧಿ ಯವರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕೂಡ ಹೀಗೆ ಮಾಡಿರಲಿಲ್ಲ. ಕೊರೋನ ಬಂದಿರುವುದು ಕೇಂದ್ರ ಸರ್ಕಾರಕ್ಕೆ ವರದಾನವಾಗಿದೆ. ಮಾಧ್ಯಮಗಳು ಸರ್ಕಾರದ ವಿರುದ್ಧ ಮಾತನಾಡಿದ್ರೆ ನೋಟಿಸ್ ಬರುತ್ತೆ. ಪರೀಕ್ಷೆ ಮಾಡಿ ಬೇಕಿದ್ದರೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇಂಥಾ ಸ್ಥಿತಿ ಸ್ವಾತಂತ್ರ್ಯ ಬಂದಮೇಲೆ ಯಾವತ್ತೂ ಬಂದಿರಲಿಲ್ಲ ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ಕೇಂದ್ರ ಸರ್ಕಾರ ಎರಡು ಕಾರಣ ನೀಡುತ್ತಿದೆ. ಒಂದು ಹಿಂದಿನ ಯು.ಪಿ.ಎ ಸರ್ಕಾರ ಕಚ್ಚಾ ತೈಲದ ಮೇಲೆ ಸಾಲ ಮಾಡಿತ್ತು. ಎರಡನೆಯದು ಬೆಲೆಯೇರಿಕೆಯಿಂದ ಬಂದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಖರ್ಚು ಮಾಡುತ್ತಿದ್ದೇವೆ. ಇದನ್ನು ಮನ್ ಕೀ ಬಾತ್ ನಲ್ಲಿ ಮೋದಿಯವರು ಹೇಳಿದ್ದಾರೆ. ತೈಲಬಾಂಡ್ ಖರೀದಿ ಆರಂಭ ಮಾಡಿದ್ದು ವಾಜಪೇಯಿ ಸರ್ಕಾರ, 1 ಲಕ್ಷದ 40 ಸಾವಿರ ತೈಲಬಾಂಡ್ ಖರೀದಿ ಮಾಡಲಾಗಿದೆ. ಈವರೆಗೆ ತೀರಿಸಿರುವ ಸಾಲ 3500 ಕೋಟಿ. ವಾರ್ಷಿಕ 10,000 ಕೋಟಿ ಬಡ್ಡಿ ಕಟ್ಟಲಾಗಿದೆ. 2014 ರಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 9 ರೂಪಾಯಿ 21 ಪೈಸೆ, ಡೀಸೆಲ್ 3 ರೂಪಾಯಿ 45 ಪೈಸೆ ಇತ್ತು, ಈಗ ಡೀಸೆಲ್ ಮೇಲೆ 31 ರೂಪಾಯಿ 84 ಪೈಸೆ, ಪೆಟ್ರೋಲ್ ಮೇಲೆ 32 ರೂಪಾಯಿ 98 ಪೈಸೆ ಗೆ ಹೆಚ್ಚಾಗಿದೆ ಎಂದರು.

ಮೋದಿ ಹೇಳಿದ ಅಚ್ಚೇ ದಿನ್ ಎಲ್ಲಿದೆ? ಡೀಸೆಲ್ ಬೆಲೆ ಹೆಚ್ಚಾದರೆ ಸಾಗಾಣಿಕೆ ಹಾಗೂ ಉತ್ಪಾದನಾ ವೆಚ್ಚ ಹೆಚ್ಚಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತೆ. ಡೀಸೆಲ್ ಪೆಟ್ರೋಲ್ ಬೆಲೆ ಹೆಚ್ಚಾದರೆ ರೈತರಿಗೇನು ಸಮಸ್ಯೆ ಆಗಲ್ಲ ಎಂದು ಕೇಂದ್ರ ಸಚಿವರೊಬ್ಬರು ದಡ್ಡನಂತೆ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಎರಡೂಕಾಲು ವರ್ಷ ಆಗಿದೆ. ಈ ಅವಧಿಯಲ್ಲಿ ಸೂರಿಲ್ಲದ ಬಡವರಿಗೆ ಒಂದೇ ಒಂದು ಮನೆಯನ್ನು ಕಟ್ಟಿಸಿಕೊಟ್ಟಿಲ್ಲ. ಅದಕ್ಕಾಗಿಯೇ ನಿನ್ನೆ ನಾನು ಒಂದೇ ವೇದಿಕೆಯಲ್ಲಿ ಚರ್ಚೆ ಮಾಡೋಣ ಬನ್ನಿ ಎಂದು ಬಸವರಾಜ ಬೊಮ್ಮಾಯಿಯವರಿಗೆ ಸವಾಲು ಹಾಕಿದ್ದೆ. ಇದಕ್ಕೆ ಉತ್ತರವಿಲ್ಲ. ಅಭಿವೃದ್ಧಿ ಮೇಲೆ ಓಟು ಕೇಳೋರು ಅಭಿವೃದ್ಧಿ ಕೆಲಸ ಮಾಡಿದ್ದಾರ ಹೇಳಲಿ ಎಂದರು.

ಸಿ.ಎಂ ಉದಾಸಿ ಅವರು ನಿಧನರಾದ ಮೇಲೆ ಬಿಜೆಪಿ ಅಭ್ಯರ್ಥಿ ಚುನಾವಣೆ ಘೋಷಣೆ ಆಗುವ ವರೆಗೆ ಹಾನಗಲ್ ಬಂದಿರಲಿಲ್ಲ. ಆದರೆ ನಮ್ಮ ಅಭ್ಯರ್ಥಿ ಶ್ರೀನಿವಾಸ್ ಮಾನೆ ಕೊರೋನ ಸಂದರ್ಭದಲ್ಲಿ ಮನೆಗೆ ಹೋಗಿರಲಿಲ್ಲ. ಹಾನಗಲ್ ಜನರ ಕಷ್ಟ ಸುಖಗಳನ್ನು ಆಲಿಸಿ, ಕೈಲಾದ ಸಹಾಯ ಮಾಡಿದ್ದಾರೆ. ಇದಕ್ಕಾಗಿ ಜನ ಕಾಂಗ್ರೆಸ್ ಕಡೆ ಒಲವು ಹೊಂದಿದ್ದಾರೆ. ನಾವು ಇಲ್ಲಿ ನೂರಕ್ಕೆ ನೂರು ಗೆಲ್ಲುವುದು ಖಚಿತ. ಈ ಚುನಾವಣೆಯಲ್ಲಿ ಸ್ಪರ್ಧೆಯಿರುವುದು ನಮಗೆ ಮತ್ತು ಬಿಜೆಪಿಗೆ, ಜೆಡಿಎಸ್ ಸ್ಪರ್ಧಾ ಚಿತ್ರಣದಲ್ಲೇ ಇಲ್ಲ. ಜೆಡಿಎಸ್ ನವರು ಬಿಜೆಪಿಗೆ ಸಹಾಯವಾಗಲಿ ಎಂದು ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಾರೆ. ಬಿಜೆಪಿಯವರು ಅಧಿಕಾರ ಮತ್ತು ಹಣದ ದುರುಪಯೋಗ ಮಾಡುತ್ತಿದ್ದಾರೆ, ಇಷ್ಟೆಲ್ಲಾ ಸವಾಲುಗಳಿದ್ದರೂ ನಾವೇ ಎರಡೂ ಕಡೆಗಳಲ್ಲಿ ಗೆಲ್ಲುತ್ತೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News