ಐದು ಲಕ್ಷ ಕಂಠಗಳಲ್ಲಿ ಮೊಳಗಲಿದೆ ಕನ್ನಡ ಗೀತೆಯ ಗಾಯನ: ಸಚಿವ ಸುನೀಲ್ ಕುಮಾರ್

Update: 2021-10-26 15:30 GMT

ಬೆಂಗಳೂರು, ಅ.26: ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ, ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಅ.28ರಂದು ಆಯೋಜಿಸಿರುವ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮ ಅಸಾಧಾರಣ ರೀತಿಯಲ್ಲಿ ಆಯೋಜಿಸಿ ಯಶಸ್ವಿಗೊಳಿಸಲು ರಾಜ್ಯದ ಎಲ್ಲ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಚರ್ಚಿಸಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ, ರಾಜ್ಯದ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಐದು ಲಕ್ಷಕ್ಕೂ ಅಧಿಕ ಮಂದಿ ಈ ಗೀತಗಾಯನದಲ್ಲಿ ಭಾಗವಹಿಸಲಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿಯ ಆಶಯದಂತೆ ಸರಕಾರದ ಸಚಿವರ ಸಹಕಾರದೊಂದಿಗೆ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಅ.28ರಂದು ನಡೆಯಲಿರುವ ಈ ಗೀತಗಾಯನ ಕೇವಲ ಸರಕಾರದ ಅಧಿಕಾರಿ, ಸಿಬ್ಬಂದಿಗಳು ಮಾಡುವ ಸರಕಾರಿ ಕಾರ್ಯಕ್ರಮವಾಗದೇ ಕನ್ನಡ ನಾಡಿನ ಜನಮಾನಸದ ಅಭಿಮಾನದ ಕಾರ್ಯಕ್ರಮವಾಗಿ ರೂಪುಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಸ್ವಯಂ ಸ್ಫೂರ್ತಿಯಿಂದ ಜನತೆ ಈ ಗೀತಗಾಯನದಲ್ಲಿ ಹಾಡುವ ಮೂಲಕ ತಮ್ಮ ಅಭಿಮಾನ ಮತ್ತು ಕನ್ನಡ ಭಾಷೆ ಬಗೆಗಿನ ಪ್ರೀತಿಯನ್ನ ಅಭಿವ್ಯಕ್ತಿಗೊಳಿಸಲು ವೇದಿಕೆಯನ್ನಾಗಿ ಮಾಡುವ ಜವಾಬ್ದಾರಿ ಪ್ರತಿ ಜಿಲ್ಲಾಡಳಿತದ ಮೇಲಿದೆ. ಅದಕ್ಕೆ ಬೇಕಾದ ಪೂರ್ವಸಿದ್ಧತೆ, ಮಾಹಿತಿ ನೀಡುವಿಕೆ ಮತ್ತು ಕಾರ್ಯಕ್ರಮ ಆಯೋಜನೆಗೆ ಪೂರ್ಣ ಬದ್ಧತೆಯೊಂದಿಗೆ ಕೆಲಸ ಮಾಡಬೇಕೆಂದು ಜಿಲ್ಲಾಡಳಿತಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗ್ರಾಮಪಂಚಾಯಿತಿ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಜವಾಬ್ದಾರಿ ವಹಿಸಬೇಕು. ಇದಕ್ಕಾಗಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಿ ಹಾಡುವ ತಂಡಗಳ ಮಾಹಿತಿ, ಅವರಿಗೆ ಬೇಕಾದ ಕನಿಷ್ಠ ಅಗತ್ಯಗಳು ಮತ್ತು ಈ ಕಾರ್ಯಕ್ರಮದ ಪ್ರಚಾರ ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ. 

ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಂಮವ’, ನಿಸಾರ್ ಅಹಮ್ಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಡಾ.ಹಂಸಲೇಖ ಅವರ ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳು ಅ.28 ರಂದು ಬೆಳಗ್ಗೆ 11 ಗಂಟೆಗೆ ಏಕ ಕಾಲದಲ್ಲಿ ರಾಜ್ಯಾದ್ಯಂತ ಮೊಳಗಲಿವೆ. ಇದಕ್ಕೆ ಬೇರ ಬೇರೆ ರಾಜ್ಯಗಳಲ್ಲಿ ನೆಲೆಸಿರುವ ಹಾಗೂ ವಿಶ್ವಾದ್ಯಂತ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ಕನ್ನಡ ಕೂಟಗಳು ತಮಗೆ ಒದಗಿಸಿರುವ ನಿರ್ದಿಷ್ಟ ಜಾಲತಾಣ ಸಂಪರ್ಕದ ಮೂಲಕ ಒಟ್ಟಿಗೆ ಸೇರಿ ಹಾಡುವ ತಾಂತ್ರಿಕ ಸಂಯೋಜನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ರೂಪಿಸಿದೆ ಎಂದು ಅವರು ಹೇಳಿದ್ದಾರೆ.

ಇದರ ಮೂಲಕ ಒಂದೇ ಬಾರಿ ವಿಶ್ವದಾದ್ಯಂತ ಕನ್ನಡ ಗೀತೆಗಳು ಲಕ್ಷ ಲಕ್ಷ ಕಂಠಗಳಲ್ಲಿ ಮೊಳಗಲಿದೆ. ಇದು ಈ ಹಿಂದೆ ಎಂದೂ ನಡೆದಿರದ ಬೃಹತ್ ಹಾಗೂ ಅವಿಸ್ಮರಣೀಯ ಕಾರ್ಯಕ್ರಮವಾಗಲಿದೆ. ಇಡೀ ನಾಡನ್ನು ಈ 66ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡಮಯವನ್ನಾಗಿ ಮಾಡಲು, ಕನ್ನಡದ ಭಾವಲಹರಿ ಜನಮನದ ನರನಾಡಿಗಳಲ್ಲಿ ಸಂಚರಿಸುವ ರೋಮಾಂಚನವನ್ನು ಉಂಟು ಮಾಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಈ ಅಭಿಯಾನ ರೂಪುಗೊಂಡಿದೆ ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.

ನಾಡಿನ ಎಲ್ಲ ಸರಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳ ಆವರಣದಲ್ಲಿ, ವಿಶ್ವವಿದ್ಯಾಲಯಗಳ ಆವರಣಗಳಲ್ಲಿ, ತಾಂತ್ರಿಕ ಹಾಗೂ ವೈದ್ಯಕೀಯ ಕಾಲೇಜುಗಳ ಆವರಣಗಳಲ್ಲಿ ಹಾಗೂ ಮೈಸೂರಿನ ಅರಮನೆಯ ಮುಂಭಾಗ ಮತ್ತು ವಿಶ್ವವಿಖ್ಯಾತ ಹಂಪಿಯ ಕಲ್ಲಿನ ರಥ ಹಾಗೂ ಮಹಾನವಮಿ ದಿಬ್ಬವೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸುಪ್ರಸಿದ್ಧ ಸ್ಮಾರಕಗಳ ಮುಂದೆ ಸಾವಿರಾರು ಜನರು ಒಟ್ಟಿಗೆ ನಿಂತು ಈ ಗೀತಗಾಯನದಲ್ಲಿ ಭಾಗವಹಿಸಲಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.

ಈ ಅಭಿಯಾನದ ಅಂಗವಾಗಿ ವಿಶೇಷವಾಗಿ ಕರ್ನಾಟಕದ ವಿಮಾನ ನಿಲ್ದಾಣಗಳಲ್ಲೂ ಈ ಕನ್ನಡದ ಗೀತಗಾಯನ ಅನುರುಣಿಸಲಿದೆ. ಬೆಂಗಳೂರು ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲಿಯೂ ಸಾವಿರರು ಜನ ಒಟ್ಟಿಗೆ ನಿಂತು ಈ ಕನ್ನಡ ಗೀತೆಗಳ ಗಾಯನ ಮಾಡಲಿದ್ದಾರೆ. ಬೆಂಗಳೂರು ಮೆಟ್ರೋದ ಎಲ್ಲ ರೈಲುಗಳಲ್ಲೂ ಸುಗಮ ಸಂಗೀತ ಗಾಯನ ತಂಡಗಳು ಈ ಮೂರು ಗೀತೆಗಳನ್ನು ಹಾಡುತ್ತವೆ. ಮೆಟ್ರೋದ ಎಲ್ಲಾ 51 ನಿಲ್ದಾಣಗಳಲ್ಲಿ ಈ ಕನ್ನಡ ಗೀತೆಗಳ ಗಾಯನ ಧ್ವನಿವರ್ಧಕಗಳ ಮೂಲಕ ಪ್ರಸಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳು ಹಾಗೂ 198 ವಾರ್ಡ್‍ಗಳಲ್ಲಿ ಸ್ಥಳೀಯ ಶಾಸಕರು ಮತ್ತು ನಗರಸಭಾ ಸದಸ್ಯರ ಸಹಯೋಗದೊಂದಿಗೆ ಈ ಗೀತಗಾಯನದ ಜೊತೆಗೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಹಾಗೂ ಮುಖ್ಯಕಾರ್ಯದರ್ಶಿಗಳ ಜೊತೆ ಸ್ವತಃ ತಾವೇ ಸಾವಿರಾರು ಸಂಖ್ಯೆಯ ಅಧಿಕಾರಿ/ಸಿಬ್ಬಂದಿ ಹಾಗೂ ಸಾರ್ವಜನಿಕರ ಜೊತೆ ಈ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸುನೀಲ್ ಕುಮಾರ್ ಹೇಳಿದ್ದಾರೆ.

ವಿಕಾಸಸೌಧ, ವಿಧಾನಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿಯೂ ಈ ಗೀತಗಾಯನ ಆಯೋಜಿಸಿದ್ದು, ಎಲ್ಲ ಐಎಎಸ್, ಕೆಎಎಸ್ ಅಧಿಕಾರಿಗಳು ಸಚಿವಾಲಯದ ಅಧಿಕಾರಿ/ಸಿಬ್ಬಂದಿ, ವಿಧಾನಮಂಡಲದ ಅಧಿಕಾರಿ/ಸಿಬ್ಬಂದಿಗಳು ಈ ಗೀತಗಾಯನದಲ್ಲಿ ಭಾಗವಹಿಸಿ ವಿಧಾನಸೌಧದ ಆವರಣದಲ್ಲಿ ಕನ್ನಡ ಕಂಠದ ಅನುರುಣನಕ್ಕೆ ಸಾಕ್ಷಿಯಾಗಲಿದ್ದಾರೆ. ರಾಜ್ಯ ಉಚ್ಛ ನ್ಯಾಯಾಲಯ ಮುಂಭಾಗದಲ್ಲಿಯೂ ಸಹ ಈ ಗೀತಗಾಯನದ ಸಂಭ್ರಮ ಅನಾವರಣಗೊಳ್ಳಲಿದೆ ಎಂದು ಎಂದು ಅವರು ತಿಳಿಸಿದರು.

ಗೀತಗಾಯನದ ಪ್ರಮುಖ ತಾಣಗಳು: ಜೋಗದ ಮುಂದೆ ಜೋಗದ ಸಿರಿ ಬೆಳಕಿನಲ್ಲಿ-ಈ ಗೀತಗಾಯನದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಜೋಗದ ಜಲಪಾತದ ಮುಂದೆ ಸಾವಿರ ಜನರ ಕಂಠದಲ್ಲಿ ಈ ಕನ್ನಡ ಗೀತೆಗಳನ್ನು ಹಾಡಲು ಯೋಜಿಸಲಾಗಿದೆ. ಹಾಗೆಯೇ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳಿಯ ಕವಿಶೈಲದಲ್ಲಿ ಈ ಗೀತೆಗಳು ಮೊಳಗಲಿವೆ.

ಚಿತ್ರದುರ್ಗದ ಸುಪ್ರಸಿದ್ಧ ಕೋಟೆಯ ಮುಂಭಾಗದಲ್ಲಿ, ಮಂಗಳೂರು ಸಮುದ್ರತೀರ, ಉಡುಪಿಯ ಶ್ರೀ ಕೃಷ್ಣದೇಗುಲದ ಮುಂಭಾಗದಲ್ಲಿ ಈ ಗೀತಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಮೂಡಬಿದರೆಯ ಸಾವಿರ ಕಂಬದ ಬಸದಿ ಹಾಗೂ ಮಂಗಳೂರು ಬಂದರಿನ ಮೀನುಗಾರರ ಮಧ್ಯೆ ಈ ಗೀತೆಗಾಯನ ನಡೆಯಲಿದೆ. ಮೈಸೂರಿನ ಅರಮನೆ ಮುಂಭಾಗ ಹಾಗೂ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಗಾಯನ ತಂಡಗಳು ಈ ಗೀತೆಗಳನ್ನು ಹಾಡಲಿದೆ.

ಬೆಳಗಾವಿಯ ಸುವರ್ಣಸೌಧದ ಮುಂದೆ ಹಾಗೂ ಬೆಳಗಾವಿ ಗಡಿ ಪ್ರದೇಶಗಳಲ್ಲಿ, ಹಂಪಿಯ ವಿರೂಪಾಕ್ಷ ದೇಗುಲದ ಮುಂದೆ, ಮಹಾನವಮಿ ದಿಬ್ಬ, ವಿಜಯವಿಠ್ಠಲ ದೇವಸ್ಥಾನದ ಆವರಣ, ಕಲ್ಲಿನ ರಥದ ಮುಂಭಾಗ, ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಒಂಭತ್ತು ಸಾವಿರ ವಿದ್ಯಾರ್ಥಿಗಳು ಈ ಗೀತಗಾಯನದಲ್ಲಿ ಪಾಲ್ಗೊಳ್ಳಲಿದ್ದಾರೆ. ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇಗುಲದ ಮುಂಭಾಗ, ಕೊಡಗಿನ ಭಾಗಮಂಡಲ ಹಾಗೂ ಇತರ ಪ್ರವಾಸಿ ತಾಣಗಳ ಮುಂದೆ.

ಹಾಸನದ ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಹಾಗೂ ಕನ್ನಡದ ಪ್ರಥಮ ಶಾಸನ ದೊರೆತ ಹಲ್ಮಿಡಿ ಗ್ರಾಮದಲ್ಲಿ ಈ ಗೀತಗಾಯನದ ಕಂಪು ಪಸರಿಸಲಿದೆ. ಚಿಕ್ಕಬಳ್ಳಾಪುರದ ಭೋಗ ನಂದೀಶ್ವರ ದೇವಸ್ಥಾನದ ಮುಂಭಾಗ, ಯಾದಗಿರಿಯ ಬಂದೀಖಾನೆ ಮುಂಭಾಗ, ಹಾವೇರಿಯ ಸುಪ್ರಸಿದ್ಧ ಕಾಗಿನೆಲೆ, ಶಿಶುನಾಳ, ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯ ಹಾಗೂ ಕನಕದಾಸರ ಜನ್ಮಸ್ಥಳ ಬಾಡಾದಲ್ಲಿ ಈ ಗೀತಗಾಯನ ಆಯೋಜಿಸಲಾಗುತ್ತಿದೆ.

ವಿಜಯಪುರದ ಅಕ್ಕಮಹಾದೇವಿ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಆವರಣ ಹಾಗೂ ಗಡಿಭಾಗಗಳಲ್ಲಿ. ರಾಯಚೂರಿನ ಹಟ್ಟಿ ಚಿನ್ನದಗಣಿ ಆವರಣ, ಆರ್.ಟಿ.ಪಿ.ಎಸ್. ವಿದ್ಯುತ್ ಉತ್ಪಾದನಾ ಘಟಕದ ಮುಂಭಾಗದಲ್ಲಿಯೂ ಕನ್ನಡ ಗೀತೆಯ ಗಾಯನ ಗಂಗೆ ಪ್ರವಹಿಸಲಿದೆ. ಒಟ್ಟಾರೆಯಾಗಿ ಕನ್ನಡಕ್ಕಾಗಿ ನಾವು ಅಭಿಯಾನದ ಈ ಗೀತಗಾಯನ ಕಾರ್ಯಕ್ರಮದ ಮೂಲಕ ಕನ್ನಡದ ಉದ್ಘೋಷ ಒಂದೇ ಭಾರಿಗೆ ಇಡೀ ವಿಶ್ವದಲ್ಲಿ ಮೊಳಗಬೇಕು ಎಂದು ಮಹದಾಶಯದೊಂದಿಗೆ ಈ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಕನ್ನಡ ಮಾತನಾಡುವ ಸ್ಪರ್ಧೆ: ಇದರೊಂದಿಗೆ ಅಂತರ್ಜಾಲದ ಮೂಲಕವೇ ಕನ್ನಡ ಮಾತನಾಡುವ ಸ್ಪರ್ಧೆಯನ್ನು ಅ.24ರಿಂದ ನಡೆಸಲಾಗುತ್ತಿದೆ. ಈ ಸ್ಪರ್ಧೆಯಲ್ಲಿ ಸಾರ್ವಜನಿಕರು ಭಾಗವಹಿಸಿ ತಪ್ಪಿಲ್ಲದೆ ಕನ್ನಡವನ್ನು 3 ರಿಂದ 4 ನಿಮಿಷಗಳ ವರೆಗೆ ಮಾತನಾಡಿ ಅದರ ದೃಶ್ಯ ಚಿತ್ರೀಕರಿಸಿ ಅಂರ್ತಜಾಲದ ಮೂಲಕ ಕಳುಹಿಸಬೇಕಾಗಿದೆ. ಈ ಸ್ಪರ್ಧೆಯ ಅಂತಿಮ ದಿನಾಂಕವನ್ನು ಅ. 28ರವರೆಗೂ ವಿಸ್ತರಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಈ ಸ್ಪರ್ಧೆಗಳು ನಡೆಯಲಿವೆ. ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 5 ಸಾವಿರ ರೂ.ನಗದು, ದ್ವಿತೀಯ ಬಹುಮಾನ 3 ಸಾವಿರ ರೂ. ನಗದು ಹಾಗೂ ತೃತೀಯ ಬಹುಮಾನವಾಗಿ 2 ಸಾವಿರ ರೂ.ನಗದು ಬಹುಮಾನ ನೀಡಲಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ 50 ಸಾವಿರ ರೂ.ಗಳ ಪ್ರಥಮ ಬಹುಮಾನ, 30 ಸಾವಿರ ರೂ.ಗಳ ದ್ವಿತೀಯ ಬಹುಮಾನ ಹಾಗೂ 20 ಸಾವಿರ ರೂ.ಗಳ ತೃತೀಯ ಬಹುಮಾನ ನೀಡಲಾಗುವುದು. ಆಸಕ್ತರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಣಜ ಅಥವಾ ಕುವೆಂಫು ಭಾಷೆ ಭಾರತಿ ಪ್ರಾಧಿಕಾರವನ್ನು ಸಂಪರ್ಕಿಸಬಹುದಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News