ಬಿಟ್ ಕಾಯಿನ್ ಹಗರಣ: ನಿಷ್ಪಕ್ಷಪಾತ ತನಿಖೆಯಾದರೆ ಸರಕಾರಕ್ಕೆ ಕಂಟಕ; ರಾಮಲಿಂಗಾರೆಡ್ಡಿ

Update: 2021-11-06 18:19 GMT

ಬೆಂಗಳೂರು, ನ.6: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆಯಾದರೆ ಸರಕಾರಕ್ಕೆ ಕಂಟಕ ಇದೆ ಎಂದು ಹೇಳಲಾಗುತ್ತಿದೆ. ಸರಕಾರ ಇದ್ದರೂ ಹಗರಣದಲ್ಲಿ ಭಾಗಿಯಾದವರಿಗೆ ಸಮಸ್ಯೆ ಎದುರಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಶನಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ಮಾತ್ರ ಇದರಲ್ಲಿ ಸತ್ಯಾಂಶ ಹೊರಬರುತ್ತದೆ. ಇಲ್ಲವಾದರೆ ಈ ಪ್ರಕರಣವನ್ನು ಮುಚ್ಚಿಹಾಕಲಾಗುತ್ತದೆ ಎಂಬ ಸುದ್ದಿ ಇದೆ ಎಂದರು.

ಪ್ರಕರಣ ತನಿಖೆ ನಡೆಯುವ ಹಂತದಲ್ಲಿ ನಾವು ಯಾವುದೇ ಮಾಹಿತಿ ಹೇಳಲು ಸಾಧ್ಯವಿಲ್ಲ. ನಿಷ್ಪಕ್ಷಪಾತ ತನಿಖೆಯಾದರೆ ಸರಕಾರಕ್ಕೆ ಕಂಟಕ ಇದೆ ಎಂದು ಹೇಳುತ್ತಿದ್ದಾರೆ. ಸರಕಾರ ಇದ್ದರೂ ಹಗರಣದಲ್ಲಿ ಭಾಗಿಯಾದವರಿಗೆ ಸಮಸ್ಯೆ ಎದುರಾಗುತ್ತದೆ ಎಂದು ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು.

‘ಬಿಟ್ ಕಾಯಿನ್ ಸುದ್ದಿ ಕಾವು ಪಡೆದುಕೊಳ್ಳುತ್ತಿದ್ದಂತೆ ಜನರ ಗಮನ ಬೇರೆಡೆ ಸೆಳೆಯಲು ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ. ಬಿಟ್ ಕಾಯಿನ್ ಆನ್‌ಲೈನ್ ಮೂಲಕ ನಡೆಯುವ ಡಿಜಿಟಲ್ ಕರೆನ್ಸಿಯಾಗಿದೆ. ಇದರಲ್ಲಿ ಅನೇಕರು ಬಂಡವಾಳ ಹೂಡುತ್ತಿದ್ದಾರೆ. ಆದರೆ ಇದನ್ನು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ನೆದರ್ ಲ್ಯಾಂಡ್, ಮಲೇಷ್ಯಾ, ಅಮೆರಿಕ ಬೇರೆ ಬೇರೆ ದೇಶಗಳಲ್ಲಿ ಹ್ಯಾಕ್ ಮಾಡಿ ಸಾವಿರಾರು ಕೋಟಿ ಹಣ ಮಾಡಿರುವುದು ಅಪರಾಧವಾಗಿದೆ ಎಂದು ಅವರು ತಿಳಿಸಿದರು.

ಹ್ಯಾಕ್ ಮಾಡಿರುವ ವ್ಯಕ್ತಿಗೆ ಪ್ರಭಾವಿ ನಾಯಕರ ಸಂಪರ್ಕವಿದೆ. ಆಡಳಿತ ಪಕ್ಷದಲ್ಲಿರುವವರು ಪ್ರಭಾವಿ ನಾಯಕರಾಗಿರುತ್ತಾರೆಯೇ ಹೊರತು ವಿರೋಧ ಪಕ್ಷದವರು ಪ್ರಭಾವಿ ನಾಯಕರಾಗಿರುವುದಿಲ್ಲ. ಇದರಲ್ಲಿ ಪ್ರಭಾವಿ ನಾಯಕರ ಮಗ, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಊಹಾಪೋಹವಿದೆ. ಸಿಬಿಐಗೆ ಪ್ರಕರಣ ಹೋದ ಮೇಲೆ ಗೆಜೆಟ್ ಆಗಿರಬೇಕಲ್ಲವೇ? ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪವಾಗಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಪ್ರಕರಣದ ತನಿಖೆ ನಡೆಯುತ್ತಿದೆ. ಸರಕಾರ ಯಾವಾಗ ಇದರ ತನಿಖೆಯನ್ನು ಸಿಬಿಐ, ಈ.ಡಿ.ಗೆ ನೀಡಿದೆ ಎಂಬುದನ್ನು ತಿಳಿಸಬೇಕು. ಅಲ್ಲದೇ, ಈ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ಮಾಡಬೇಕು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News