ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ' ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

Update: 2021-11-08 13:31 GMT

ಬೆಂಗಳೂರು, ನ. 8: ಮುಂಬೈ ಕರ್ನಾಟಕ ಎಂದು ಕರೆಯುತ್ತಿದ್ದ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಇನ್ನು ಮುಂದೆ ‘ಕಿತ್ತೂರು ಕರ್ನಾಟಕ' ಪ್ರದೇಶ ಎಂದು ಮರು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಮಾಡಿದೆ. ಇತ್ತೀಚೆಗೆ ಸಿಎಂ ಬೊಮ್ಮಾಯಿ ಅವರು ಮುಂಬೈ ಕರ್ನಾಟಕ ಭಾಗಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದರು. ಸಚಿವ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಸಭೆ ಬಳಿಕ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಧುಸ್ವಾಮಿ, ಬೆಳಗಾವಿ ಸುವರ್ಣಸೌಧದಲ್ಲೇ ಚಳಿಗಾಲದ ಅಧಿವೇಶನ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ, ದಿನಾಂಕ ಇನ್ನೂ ಅಂತಿಮಗೊಳಿಸಿಲ್ಲ. ಡಿಸೆಂಬರ್ ಎರಡನೆ ಅಥವಾ ಮೂರನೆ ವಾರದಲ್ಲಿ ಅಧಿವೇಶನ ನಡೆಸಲು ಉದ್ದೇಶಿಸಿದ್ದು, ಮುಂದಿನ ಸಂಪುಟ ಸಭೆಯಲ್ಲಿ ದಿನಾಂಕ ನಿರ್ಧಾರ ಮಾಡಲಾಗುವುದು ಎಂದರು.

ಕಿಂಡಿ ಅಣೆಕಟ್ಟೆಗೆ ಅನುಮೋದನೆ: ‘ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಅಡ್ಡಲಾಗಿ 1,348 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ‘ಪಶ್ಚಿಮವಾಹಿನಿ ಯೋಜನೆ'ಯ 3,986.25 ಕೋಟಿ ರೂ.ಮೊತ್ತದ ಕ್ರಿಯಾ ಯೋಜನೆಗೆ ಹಾಗೂ 2021-22ನೆ ಸಾಲಿನಲ್ಲಿ 500 ಕೋಟಿ ರೂ.ಅಂದಾಜು ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲು ಸಮ್ಮತಿಸಲಾಗಿದೆ' ಎಂದು ಅವರು ತಿಳಿಸಿದರು.

ತಿದ್ದುಪಡಿ: ಉಪ ಖನಿಜಗಳ ಗುತ್ತಿಗೆ ಅವಧಿ ಕುರಿತಂತೆ ‘ಕರ್ನಾಟಕ ಉಚ್ಚ ಖನಿಜ ರಿಯಾಯಿತಿ'(ತಿದ್ದುಪಡಿ) ನಿಯಮಗಳು, 2021ಕ್ಕೆ ಅನುಮೋದನೆ ನೀಡಿದೆ. ಬಳ್ಳಾರಿ ಜಿಲ್ಲಾ ಖನಿಜ ಪ್ರತಿμÁ್ಠನ ಟ್ರಸ್ಟ್‍ನ ಕ್ರಿಯಾ ಯೋಜನೆ-6ರಲ್ಲಿ ಅನುಮೋದಿತವಾಗಿರುವ 30 ಕೋಟಿ ರೂ.ಅಂದಾಜು ವೆಚ್ಚದ ಹೊಸಪೇಟೆ ನಗರದ ಹೊಸಪೇಟೆ-ಬಳ್ಳಾರಿ ರಸ್ತೆ ಎಚ್‍ಎಲ್‍ಸಿ ಕಾಲುವೆಯಿಂದ ಇಂಗಳಗಿ ಕ್ರಾಸ್‍ವರೆಗೆ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ಗದಗ ಜಿಲ್ಲೆಯ ಮುಂಡರಗಿ ಬಡಾವಣೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ 17.32 ಕೋಟಿ ರೂ.ಗಳ ಅಂದಾಜು ವೆಚ್ಚದ ಕಾಮಗಾರಿಗೆ, ನೇಕಾರರ ಪ್ಯಾಕೇಜ್ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿಸಣ್ಣ(ಎಸ್‍ಎಂಇ) ಘಟಕಗಳ ಸ್ಥಾಪನೆಗೆ 374 ಕೋಟಿ ರೂ.ಸಹಾಯಧನ ಒದಗಿಸುವ ಪರಿಷ್ಕøತ ಯೋಜನೆಗೆ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಜಮೀನು ಹಂಚಿಕೆ ನೀತಿಗೆ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ರಾಜ್ಯ ನಾಗರಿಕ ಸೇವಾ ಹುದ್ದೆಗಳ ನೇರ ನೇಮಕಾತಿ ಮತ್ತು ಮುಂಭಡ್ತಿಯಲ್ಲಿ ರಿಕ್ತ ಸ್ಥಾನ ಆಧಾರಿತ ನೀತಿಯ ಬದಲಾಗಿ ಹುದ್ದೆ ಆಧಾರಿತ ನೀತಿಯನ್ನು ಜಾರಿಗೊಳಿಸಲು ತೀರ್ಮಾನ ಮಾಡಲಾಗಿದೆ ಎಂದು ಮಾಧುಸ್ವಾಮಿ ಮಾಹಿತಿ ನೀಡಿದರು.

‘ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಡಿ ನೂತನವಾಗಿ ನಿರ್ಮಿಸಿರುವ 450 ಹಾಸಿಗೆಗಳ ಬೋಧಕ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ 165 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಒಪ್ಪಿಗೆ ನೀಡಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ 399ಕೋಟಿ ರೂ.ಗಳ ವೆಚ್ಚದ ಕೆ-ಸೇಫ್-2 ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಕನಗನಹಳ್ಳಿ ಗ್ರಾಮದ ಹತ್ತಿರ ಹರಿಯುವ ಹಳ್ಳಕ್ಕೆ ಸರಣಿ ಚೆಕ್‍ಡ್ಯಾಂ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ 11.34 ಕೋಟಿ ರೂ.ಗೆ ಅನುಮೋದನೆ, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಮುದೇನುರು-ಬಲಕುಂದಿ ಗ್ರಾಮಗಳ ನಡುವೆ ವೇದಾವತಿ ನದಿಗೆ ಅಡ್ಡಲಾಗಿ ಸೇತುವೆ ಸಹಿತ ಬಾಂದಾರ ನಿರ್ಮಾಣ ಕಾಮಗಾರಿಯ 35ಕೋಟಿ ಮೊತ್ತದ ಅಂದಾಜಿಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ, ಆಗರ ಗ್ರಾಮದ ಸರ್ವೆ ನಂ.28ರಲ್ಲಿ 0-21 ಗುಂಟೆ ಖರಾಬು ಜಮೀನನ್ನು ಶ್ರೀಸ್ವಾನಂದಾಶ್ರಮ ಬಾಲ ಗಣಪತಿ ಪ್ರತಿμÁ್ಠನಕ್ಕೆ ಮಂಜೂರಿಗೆ ತೀರ್ಮಾನ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಾಗರಿಕ ಸೌಲಭ್ಯ ನಿವೇಶನಗಳ ಗುತ್ತಿಗೆ ಮೊತ್ತವನ್ನು ಪಾವತಿಸದೇ ಬಾಕಿ ಉಳಿಸಿಕೊಂಡಿರುವ ವಿವಿಧ ಸಂಘ-ಸಂಸ್ಥೆಗಳು ಸಂಪೂರ್ಣ ಬಾಕಿ ಮೊತ್ತವನ್ನು ಪಾವತಿಸಲು ಮುಂದೆ ಬಂದಲ್ಲಿ ನಿಯಮಾನುಸಾರ ವಿಧಿಸಲಾದ ಬಡ್ಡಿಯ ಒಟ್ಟು ಮೊತ್ತದ ಶೇ.50 ರಷ್ಟು ಬಡ್ಡಿಮನ್ನಾಕ್ಕೆ ಒಪ್ಪಿಗೆ ನೀಡಿದೆ. ಬೆಂಗಳೂರು 1ಲಕ್ಷ ಬಹುಮಹಡಿ ವಸತಿ ಯೋಜನೆಯನ್ನು ಅನುμÁ್ಠನಗೊಳಿಸಲು ಭೂಮಿಯನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ.


‘ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಸರ್ವೆ ನಂ. 550/5ರಲ್ಲಿ 2.33 ಎಕರೆ ಜಮೀನು ಅಜೆಕಾರ್ ಪದ್ಮಗೋಪಾಲ್ ಎಜುಕೇಷನ್ ಟ್ರಸ್ಟ್‍ಗೆ ವಿದ್ಯಾರ್ಥಿಗಳ ಆಟದ ಮೈದಾನಕ್ಕಾಗಿ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ'

-ಜೆ.ಸಿ.ಮಾಧುಸ್ವಾಮಿ ಕಾನೂನು ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News