×
Ad

ಬಿಐಎಎಪಿಎ ಅಧ್ಯಕ್ಷರಾಗಿ ಸಚಿವ ಅಶೋಕ್ ಸಂಬಂಧಿ ರವಿ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ

Update: 2021-11-09 23:08 IST

ಬೆಂಗಳೂರು: ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಕಂದಾಯ ಸಚಿವ ಆರ್. ಅಶೋಕ್ ಸಂಬಂಧಿ ಎ.ರವಿ ಅವರನ್ನು ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರಕ್ಕೆ(ಬಿಐಎಎಪಿಎ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ದೂರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 

ಮಾಹಿತಿ ಹಕ್ಕು ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಪ್ರಕಟಿಸಿತು. ಅರ್ಜಿಯಲ್ಲಿ ಯಾವುದೇ ಮೆರಿಟ್ ಇಲ್ಲದ ಕಾರಣ ವಜಾಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಅರ್ಜಿದಾರರ ಆರೋಪ: ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಸಚಿವ ಆರ್.ಅಶೋಕ್ ಸಂಬಂಧಿ ಎ.ರವಿ ಅವರನ್ನು ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. 

ಪ್ರಾಧಿಕಾರದ ಅಧ್ಯಕ್ಷರಾಗಿರುವ ಎ. ರವಿ ಪಿಯುವರೆಗೆ ಮಾತ್ರ ಓದಿದ್ದು, ಪದವಿ ಕೂಡ ಪೂರೈಸಿಲ್ಲ. ಹಾಗಿದ್ದೂ ಪ್ರಭಾವ ಬಳಸಿ ಉನ್ನತ ಹುದ್ದೆ ಪಡೆದುಕೊಂಡಿದ್ದಾರೆ. ವಿಮಾನ ನಿಲ್ದಾಣದ ಸುತ್ತಲಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಬಹುದೊಡ್ಡ ವ್ಯಾಪ್ತಿಯ ಪ್ರದೇಶಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ, ಮಾನ್ಯ ಮಾಡುವ ಅಥವಾ ತಿರಸ್ಕರಿಸುವ ಜವಾಬ್ದಾರಿಯನ್ನು ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಹೊಂದಿದೆ. ಇಂತಹ ಪ್ರಾಧಿಕಾರಕ್ಕೆ ಕನಿಷ್ಠ ಶೈಕ್ಷಣಿಕ ಅರ್ಹತೆಯೂ ಇಲ್ಲದ ವ್ಯಕ್ತಿಯನ್ನು ರಾಜಕೀಯ ಕಾರಣಗಳಿಗಾಗಿ ನೇಮಕ ಮಾಡಿದ್ದು, ನೇಮಕಾತಿ ಆದೇಶ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News