ಮಾನಸಿಕ ಆರೋಗ್ಯ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ: ಹೈಕೋರ್ಟ್ ನಿರ್ದೇಶನ
ಬೆಂಗಳೂರು, ನ.16: ರಾಜ್ಯ ಮಾನಸಿಕ ಆರೋಗ್ಯ ಮಂಡಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ-2017ನ್ನು ಜಾರಿಗೊಳಿಸುವಂತೆ ಕೋರಿ ಬೆಂಗಳೂರಿನ ಎನ್.ಸಂಜಯ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರಕಾರಿ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರ ಆರೋಗ್ಯ ರಕ್ಷಣೆ ಉದ್ದೇಶದಿಂದ ಕೇಂದ್ರ ಸರಕಾರ ಜಾರಿಗೊಳಿಸಿರುವ ‘ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ’ ಅನ್ವಯ ರಾಜ್ಯ ಮಾನಸಿಕ ಆರೋಗ್ಯ ಮಂಡಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಧ್ಯಕ್ಷರ ಹುದ್ದೆಗೆ 19 ಮತ್ತು ಸದಸ್ಯರ ಹುದ್ದೆಗಳಿಗೆ 17 ಅರ್ಜಿಗಳು ಬಂದಿವೆ. ಈ ಅರ್ಜಿಗಳನ್ನ ಪರಿಗಣಿಸಿ ಅರ್ಹರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ರಾಜ್ಯ ಮಾನಸಿಕ ಆರೋಗ್ಯ ಮಂಡಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಶೀಘ್ರವೇ ನೇಮಕ ಮಾಡಬೇಕು. ಮಂಡಳಿಗೆ ಎಲ್ಲ ಅಗತ್ಯ ಮೂಲ ಸೌಕರ್ಯ ಮತ್ತು ಹಣಕಾಸು ವ್ಯವಸ್ಥೆ ಕಲ್ಪಿಸಬೇಕು. ರಾಜ್ಯ ಸರಕಾರವು ಹಣಕಾಸು ಮತ್ತು ಮೂಲ ಸೌಕರ್ಯ ಕಲ್ಪಿಸಿ ಮಂಡಳಿ ಕಾರ್ಯಾರಂಭಿಸುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.
ಕೋರಿಕೆ ಏನು: ಕೇಂದ್ರ ಸರಕಾರ ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ–2017ರ ಜನವರಿ 6ರಿಂದ ಜಾರಿಗೆ ತಂದಿದೆ. ಆದರೆ, ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿ ಮಾಡಿಲ್ಲ. ಆದುದರಿಂದ, ಕಾಯ್ದೆ ಜಾರಿ ಮಾಡಲು ಮತ್ತು ರಾಜ್ಯ, ಜಿಲ್ಲಾ ಮಟ್ಟದಲ್ಲಿ ಮಾನಸಿಕ ಆರೋಗ್ಯ ಮಂಡಳಿಗಳನ್ನು ರಚಿಸಲು ಸರಕಾರಕ್ಕೆ ಆದೇಶಿಸಬೇಕು. ಹಾಗೆಯೇ, ಮಂಡಳಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲು ಮತ್ತು ಮಂಡಳಿಗಳಿಗೆ ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.