ಮೋದಿ ಸರಕಾರದ ಜನಪರ ಕೆಲಸಗಳಿಂದಾಗಿ ಬಿಜೆಪಿಗೆ ಪ್ರತಿಸ್ಪರ್ಧಿಗಳೇ ಇಲ್ಲ: ಸಚಿವ ಈಶ್ವರಪ್ಪ

Update: 2021-11-18 14:55 GMT

ಚಿಕ್ಕಮಗಳೂರು: ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರವನ್ನು ಮತ್ತಷ್ಟು ಬಲಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಕರೆನೀಡಿದರು.

ಗುರುವಾರ ನಗರದ ಒಕ್ಕಲಿಗರ ಭವನದಲ್ಲಿ ಆಯೋಜಿಸಿದ್ದ ಜನಸ್ವರಾಜ್ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುವವರೇ ಇರಲಿಲ್ಲ, ಈಗ ಬಿಜೆಪಿ ಎದುರು ನಿಲ್ಲಲು ಪ್ರತಿಸ್ಫರ್ಧಿಗಳೇ ಇಲ್ಲ. ಪಕ್ಷ ಇಷ್ಟು ಬಲಿಷ್ಠವಾಗಿ ಬೆಳೆಯಲು ಕಾರ್ಯಕರ್ತರ ನಿರಂತರ ಪರಿಶ್ರಮವೇ ಕಾರಣ. ಚಿಕ್ಕಮಗಳೂರು ಜಿಲ್ಲೆಯಲ್ಲಿ 2 ಇದ್ದ ಬಿಜೆಪಿ ಶಾಸಕರ ಸಂಖ್ಯೆ ಇಂದು 4ಕ್ಕೆ ಏರಿಕೆಯಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಐದೂ ಸ್ಥಾನಗಳಲ್ಲೂ ಬಿಜೆಪಿ ಶಾಸಕರು ಗೆದ್ದು ಬರಲಿದ್ದಾರೆ ಎಂದರು. 

ಕೇಂದ್ರ ಸರಕಾರ ಗ್ರಾಮೀಣ ಪ್ರದೇಶದಲ್ಲಿ ಪ್ರತೀ ಮನೆ ಮನೆಗೆ ಕುಡಿಯುವ ನೀರು ನೀಡುವ ಉದ್ದೇಶದಿಂದ ಜಲಜೀವನ್ ಯೋಜನೆ ಜಾರಿಗೆ ತಂದಿದ್ದು, 2024ರೊಳಗೆ ಗ್ರಾಮೀಣ ಪ್ರದೇಶದ ಪ್ರತೀ ಮನೆಗೆ ಕುಡಿಯುವ ನೀರು ಒದಗಿಸಲಾಗುವುದು. ಗ್ರಾಮ ಪಂಚಾಯತ್‌ಗಳಲ್ಲಿ ವಿದ್ಯುತ್ ಸಮಸ್ಯೆಯನ್ನು ನೀಗಿಸುವ ಸಲುವಾಗಿ ರಾಜ್ಯ ಸರಕಾರ ಪ್ರತೀ ಗ್ರಾಮ ಪಂಚಾಯತ್‌ಗೆ ಸೋಲಾರ್ ವ್ಯವಸ್ಥೆ ಮಾಡಲು ಮುಂದಾಗಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ಯಶಸ್ವಿಯಾಗಿ ಎದುರಿಸಿದ್ದು, 100 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿ ಪ್ರಪಂಚದಲ್ಲೇ ದೊಡ್ಡ ಸಾಧನೆ ಮಾಡಿದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಡಿ.10ರಂದು ಚುನಾವಣೆ ನಡೆಯಲಿದೆ. ವಿಧಾನ ಪರಿಷತ್ 25 ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಚಿಕ್ಕಮಗಳೂರು ಜಿಲ್ಲೆಯಿಂದ ಸ್ಫರ್ಧಿಸುವ ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸುವಂತೆ ಗ್ರಾಪಂ ಸದಸ್ಯರಲ್ಲಿ ಮನವಿ ಮಾಡಿದರು.

ಮಾಜಿಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದಗೌಡ ಮಾತನಾಡಿ, ಗ್ರಾಮ ಪಂಚಾಯತ್ ಸದಸ್ಯರೇ ದೇಶದ ಭವಿಷ್ಯದ ನಿಮಾತೃಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾವಿಸಿದ್ದು, ಕೇಂದ್ರ ಸರಕಾರ 2 ಲಕ್ಷ 30 ಸಾವಿರ ಕೋಟಿ ರೂ. ಗ್ರಾಮೀಣ ಪ್ರದೇಶದ ಜನರ ಆರೋಗ್ಯಕ್ಕಾಗಿ ಮೀಸಲಿಟ್ಟಿದೆ. ನೂತನ ಶಿಕ್ಷಣ ನೀತಿ ಜಾರಿಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಸರಕಾರ ಮುಂದಾಗಿದೆ ಎಂದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದರು.

ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ಮನವರಿಗೆ ಮಾಡಿಕೊಡುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸಬೇಕು. ಮುಂಬರುವ ಎಲ್ಲಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಕ್ಷವನ್ನು ಬಲ ಪಡಿಸಬೇಕೆಂದು ತಿಳಿಸಿದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಬಿಜೆಪಿ ಪಕ್ಷ ವಿಧಾನಸಭೆಯಲ್ಲಿ ಬಹುಮತ ಪಡೆದುಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಬಹುಮತವಿಲ್ಲ, ಎಲ್ಲಿಯವರೆಗೂ ಬಹುಮತ ಬರಲ್ಲ, ಅಲ್ಲಿಯವರೆಗೂ ಶಕ್ತಿ ಬರಲ್ಲ, ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಶಕ್ತಿ ತುಂಬಿಸುವಂತೆ ಮನವಿ ಮಾಡಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಾತನಾಡಿ, ಜಿಲ್ಲೆಯಲ್ಲಿ ಕೆರೆ ತುಂಬಿಸುವ ಯೋಜನೆಗೆ 1,281 ಕೋಟಿ ರೂ. ಟೆಂಡರ್ ಕರೆಯಲಾಗಿದೆ. ಜನಜೀವನ್ ಮಿಷನ್, ಮೆಡಿಕಲ್ ಕಾಲೇಜ್, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಮುಂದಿನ ಬಜೆಟ್‌ನಲ್ಲಿ ಜಿಲ್ಲೆಗೆ ಹಾಲು ಒಕ್ಕೂಟವನ್ನು ತರುವ ಪ್ರಯತ್ನ ಮಾಡಲಾಗುವುದು. ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರಕಾರ ಎಂದೂ ಹಿಂದೆ ಬೀಳುವುದಿಲ್ಲ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಉಪಸಭಾತಿ ಎಂ.ಕೆ.ಪ್ರಾಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಬೆಳ್ಳಿಪ್ರಕಾಶ್, ಡಿ.ಎಸ್.ಸುರೇಶ್, ಚನ್ನಬಸಪ್ಪ, ವಿನಯ್ ಬಿದರೆ, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ. ಕಲ್ಮುರಡಪ್ಪ, ದೀಪಕ್ ದೊಡ್ಡಯ್ಯ, ಎಚ್.ಡಿ.ತಮ್ಮಯ್ಯ, ರವೀಂದ್ರ ಬೆಳವಾಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚುನಾವಣಾ ನೀತಿ ಸಂಹಿತೆ ಉಲಂಘಿಸಿದ ಸಚಿವ ಈಶ್ವರಪ್ಪ

ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಭರವಸೆಗಳನ್ನು ನೀಡುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಆದರೆ ಗುರುವಾರ ನಗರದಲ್ಲಿ ನಡೆದ ಜನಸ್ವರಾಜ್ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಮಾತನಾಡುತ್ತಾ, ಗ್ರಾಪಂ ಸದಸ್ಯರ ಗೌರವಧನವನ್ನು ಹೆಚ್ಚಿಸುವುದಾಗಿ ಭರವಸೆ ನೀಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಘಟನೆ ನಡೆದಿದೆ.



 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News