×
Ad

ರೈತರ ಹೋರಾಟದ ಗೆಲುವಿನ ಸ್ಫೂರ್ತಿ ಕೇಂದ್ರದ ಜನವಿರೋಧಿ ನೀತಿ ವಿರುದ್ಧದ ಹೋರಾಟಕ್ಕೆ ನಾಂದಿಯಾಗಲಿದೆ: ಸಿದ್ದರಾಮಯ್ಯ

Update: 2021-11-19 10:45 IST

ಬೆಂಗಳೂರು, ನ.19: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿರುವ ಮಾಜಿ ಮುಖ್ಯಮಂತ್ರಿ, ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೃಷಿ‌ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು. ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ.

ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.

ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಫೂರ್ತಿ ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News