ನ.25ರವರೆಗೆ ಭಾರೀ ಮಳೆಯ ಮುನ್ಸೂಚನೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಬೆಳಗಾವಿ ಜಿಲ್ಲಾಧಿಕಾರಿ ಮನವಿ
Update: 2021-11-20 18:50 IST
ಬೆಳಗಾವಿ, ನ.20: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ನ.20 ರಿಂದ 25ರವರೆಗೆ ಅತಿವೃಷ್ಟಿಯಾಗುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೋಶವು ಮುನ್ಸೂಚನೆಯನ್ನು ನೀಡಿದೆ. ಅತಿವೃಷ್ಟಿ ಸಾಧ್ಯತೆ ಇರುವುದರಿಂದ ನದಿ ಪಾತ್ರಗಳಲ್ಲಿರುವ ಜನರು ತಮ್ಮ ಅಗತ್ಯ ಸಾಮಗ್ರಿಗಳು ಮತ್ತು ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ಕುಮಾರ್ ಮನವಿ ಮಾಡಿದ್ದಾರೆ.
ಜನರು ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಲ್ಲಿ ಜಿಲ್ಲಾಡಳಿತ ವತಿಯಿಂದ ಎಲ್ಲ ಅಗತ್ಯ ರೀತಿಯ ಸಹಕಾರ ನೀಡಲಾಗುವುದು. ಜಿಲ್ಲಾಡಳಿತ, ತಾಲೂಕು ಆಡಳಿತವು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.