ಪರಿಷತ್ ಚುನಾವಣೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ: ಎಡಿಸಿ
ಉಡುಪಿ, ನ.24: ಜಿಲ್ಲೆಯಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ಗೆ ಡಿಸೆಂಬರ್ 10ರಂದು ನಡೆಯುವ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಹೇಳಿದ್ದಾರೆ.
ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಕೇಂದ್ರದಲ್ಲಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲು ನಿಯೋಜಿಸಿರುವ ಮಾಸ್ಟರ್ ಟ್ರೈನಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಡಿ.10ರಂದು ನಡೆಯುವ ಚುನಾವಣೆಗೆ ಜಿಲ್ಲೆಯ ನಗರ /ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಈ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಮತಗಟ್ಟೆ ಸಿಬ್ಬಂದಿಗಳಿಗೆ ಮತದಾನ ಪ್ರಕ್ರಿಯೆಗಳ ಕುರಿ ತು ಸೂಕ್ತ ತರಬೇತಿ ನೀಡಬೇಕು. ಮತದಾನ ಸಂದರ್ಭದಲ್ಲಿ ಮತಗಟ್ಟೆಯಲ್ಲಿ ಅವರಿಗೆ ಯಾವುದೇ ಗೊಂದಲಗಳು ಉಂಟಾಗದಂತೆ ವಿವರ ವಾದ ಮಾಹಿತಿಗಳನ್ನು ನೀಡುವಂತೆ ಮಾಸ್ಟರ್ ಟ್ರೈನಿಗಳಿಗೆ ತಿಳಿಸಿದ ಅಪರ ಜಿಲ್ಲಾಧಿಕಾರಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಒಟ್ಟಾಗಿ, ಯಾವುದೇ ದೂರುಗಳಿಗೆ ಆಸ್ಪದ ನೀಡದ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಮಾಸ್ಟರ್ ಟ್ರೈನರ್ ಅಶೋಕ್ ಕಾಮತ್, ಚುನಾವಣಾ ಅಧೀಕ್ಷಕರಾದ ಜಯಲಕ್ಷ್ಮಿ ಮತ್ತು ಸಂಪತ್ ಹಾಗೂ ಜಿಲ್ಲೆಯ 7 ತಾಲೂಕುಗಳ ಮಾಸ್ಟರ್ ಟ್ರೈನರ್ಗಳು ಉಪಸ್ಥಿತರಿದ್ದರು.