ಕೋವಿಡ್ ಹೊಸ ರೂಪಾಂತರಿ ತಡೆಗೆ ಉಡುಪಿ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ: ಡಿಸಿ ಕೂರ್ಮಾರಾವ್

Update: 2021-11-28 14:17 GMT

ಉಡುಪಿ, ನ.28: ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್‌ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಸರಣದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸರ್ವೇಕ್ಷಣಾ ಚಟುವಟಿಕೆಗಳನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯ ಗುರಿಯನ್ನು ಹಚ್ಚಿಸಿ ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ.

ಅದರಂತೆ ಜಿಲ್ಲೆಯಲ್ಲಿ ಕೋವಿಡ್‌ನ ಹೊಸ ರೂಪಾಂತರಿ ವೈರಾಣು ಪ್ರಸರಣ ತಡೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರಕಾರದ ಹೊಸ ಮಾರ್ಗಸೂಚಿಯಂತೆ ಉಡುಪಿ ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆ ಗುರಿಯನ್ನು 3000 ದಿಂದ 4000ಕ್ಕೆ ಹೆಚ್ಚಿಸಿ ನಿಗದಿ ಪಡಿಸಲಾಗಿದೆ.

ರೋಗಲಕ್ಷಣ ಹೊಂದಿರುವವರು, ಐಎಲ್‌ಐ/ಎಸ್‌ಎಆರ್‌ಐ ಪ್ರಕರಣಗಳು, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕ ಹೊಂದಿರುವವರು ಮತ್ತು ಹೈ ರಿಸ್ಕ್ ಹೊಂದಿರುವ ಗುಂಪಿನ ವ್ಯಕ್ತಿಗಳಿಗೆ ಕೋವಿಡ್ ಪರೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಮುಂದುವರಿಸುವುದು ಮತ್ತು ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗುವುದು.

ಅಲ್ಲದೇ ಈ ಕೆಳಕಂಡ ಗುಂಪಿನವರಿಗೆ ಪಾಕ್ಷಿಕವಾಗಿ ಅನಿರ್ದಿಷ್ಟವಾಗಿ ಪರೀಕ್ಷೆ ನಡೆಸಲಾಗುತ್ತದೆ. ಪ್ರೌಢಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಿಬ್ಬಂದಿ, ಮಾಲ್‌ ಗಳಲ್ಲಿರುವ ಅಂಗಡಿ ಮುಂಗಟ್ಟುಗಳ ವರ್ತಕರು, ಕ್ಯಾಟರಿಂಗ್ ಸಿಬ್ಬಂದಿ ಮತ್ತು ಮನೆಮನೆಗಳಿಗೆ ವಿತರಣೆ ಮಾಡುವ ಸಿಬ್ಬಂದಿ, ಕಾರ್ಖಾನೆಗಳ ಸಿಬ್ಬಂದಿ, ಎಲ್ಲಾ ಕಚೇರಿಗಳ ಸಿಬ್ಬಂದಿ, ಪಬ್ ಮತ್ತು ಬಾರ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು. ಕೆಲವೊಂದು ಸಂದರ್ಭಗಳಲ್ಲಿ ಸಾರ್ವಜನಿಕರು ಗುಂಪು ಸೇರಿದಾಗಲೂ ಪರೀಕ್ಷೆಗಳನ್ನು ನಡೆಸಲಾಗುವುದು.

ಜಿಲ್ಲೆಗೆ ನಿಗದಿಪಡಿಸಿದ ಗುರಿಯಲ್ಲಿ ಶೇ.50ರಷ್ಟು ಜಿಲ್ಲಾ ಕೇಂದ್ರದಲ್ಲಿ ಮತ್ತು ಉಳಿದ ಶೇ.50 ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆ ನಡೆಸಬೇಕಾಗಿದೆ. ಪರೀಕ್ಷೆಯಲ್ಲಿ ಶೇ.10ರಷ್ಟು ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಬೇಕು. ಐಸಿಎಂಆರ್ ಮಾರ್ಗಸೂಚಿ ಪ್ರಕಾರ ಎಲ್ಲಾ ರೋಗಲಕ್ಷಣ ಸಹಿತ ಪ್ರಕರಣಗಳನ್ನು ಮೊದಲಿಗೆ ಆರ್‌ಎಟಿ ಪರೀಕ್ಷೆಗೆ ಒಳಪಡಿಸಬೇಕು. ಫಲಿತಾಂಶ ನೆಗಟಿವ್ ಬಂದಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ರೋಗಲಕ್ಷಣ ಇಲ್ಲದವರಿಗೆ ಆರ್‌ಎಟಿ ಪರೀಕ್ಷೆ ಮಾಡಬಾರದು.

ರಾಜ್ಯ ಸುತ್ತೋಲೆ: ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್ ದೇಶಗಳಲ್ಲಿ ಕೋವಿಡ್‌ನ ರೂಪಾಂತರಿ ಪ್ರಭೇದ ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರನ್ನು ತಪಾಸಣೆ ಪರೀಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿದೆ.

ದಕ್ಷಿಣ ಆಫ್ರಿಕಾ, ಬೋಟ್ಸುವಾನ ಮತ್ತು ಹಾಂಕಾಂಗ್‌ನಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್‌ಟಿಪಿಸಿಎಲ್ ಪರೀಕ್ಷೆ ಮಾಡಿಸಬೇಕು. ಮತ್ತು ನೆಗೆಟಿವ್ ವರದಿ ಬಂದ ನಂತರವೇ ವಿಮಾನ ನಿಲ್ದಾಣದಿಂದ ನಿರ್ಗಮಿಸಲು ಅನುಮತಿ ನೀಡಬೇಕು. ಈ ಮೂರು ದೇಶಗಳಿಂದ ಕಳೆದ 15 ದಿನಗಳಿಂದ ಈಚೆಗೆ ಬಂದಿರುವ ಪ್ರಯಾಣಿಕರನ್ನು ಪತ್ತೆ ಹಚ್ಚಿ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು. ಪ್ರಯಾಣಿಕರು ಕೋವಿಡ್ ಸೋಂಕಿತ ಆಗಿದ್ದಲ್ಲಿ ಅವರನ್ನು 10 ದಿನಗಳ ಕಾಲ ಕಡ್ಡಾಯ ಸಾಂಸ್ಥಿಕ ಪ್ರತ್ಯೇಕತೆಗೆ ಒಳಪಡಿಸಬೇಕು. ಪಾಸಿಟಿವ್ ಬಂದಿರುವ ಪರೀಕ್ಷಾ ಮಾದರಿಗಳನ್ನು ಕಡ್ಡಾಯವಾಗಿ ತಕ್ಷಣ ಜಿನೋಮಿಕ್ ಸಿಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಬೇಕು. ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಈ ಪರೀಕ್ಷೆಗೆ ಒಳಪಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಮೇಲಿನ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಥಮ ಆದ್ಯತೆ ಎಂದು ಪರಿಗಣಿಸಿ ಆರೋಗ್ಯ ಇಲಾಖೆ ಮತ್ತು ಇತರ ಪ್ರಮುಖ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಹಾಗೂ ಜಿಲ್ಲಾಡಳಿತದ ಸೂಕ್ತ ಮಾರ್ಗದರ್ಶನ ಮತ್ತು ನಿಗಾವಣೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News