‘ಶ್ರೀವಿಶ್ವೇಶತೀರ್ಥ’-‘ಯಕ್ಷಗಾನ ಕಲಾರಂಗ’ ಪ್ರಶಸ್ತಿ ಪ್ರದಾನ
ಉಡುಪಿ, ನ. 28: ಪರ್ಯಾಯ ಅದಮಾರು ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಯಕ್ಷಗಾನ ಕಲಾರಂಗದ ವತಿಯಿಂದ ರವಿವಾರ ರಾಜಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮೂಡಬಿದ್ರೆ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ ಮತ್ತು ಯಕ್ಷಗಾನದ ವಿವಿಧ ಕ್ಷೇತ್ರಗಳಲ್ಲಿ ಜೀವಮಾನದ ಸಾಧನೆ ಮಾಡಿದ 18 ಮಂದಿ ಕಲಾವಿದರುಗಳಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗಳನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಾಡಿದ ಪರ್ಯಾಯ ಅದಮಾರು ಮಠಾಧೀಶ ಶ್ರೀಈಶ ಪ್ರಿಯತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಯಕ್ಷಗಾನವೂ ನೃತ್ಯ ಹಾಡುಗಾರಿಕೆ, ವೇಷಭೂಷಣ, ಸಂಗೀತ, ಅಭಿನಯ ಸೇರಿದಂತೆ ಎಲ್ಲ ಪ್ರಾಕರಗಳನ್ನು ಒಳಗೊಂಡಿದೆ. ಈ ಕಲೆಯ ಮೂಲಕ ಪುರಾಣದ ಚಿಂತನೆ ಜನಮಾನಸದಲ್ಲಿ ಉಳಿಯುವಂತಾಗಬೇಕು ಎಂದು ತಿಳಿಸಿದರು.
ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ, ಹಿರಿಯ ಯಕ್ಷಗಾನ ಚಿಂತಕ ಡಾ.ಚಂದ್ರಶೇಖರ ದಾಮ್ಲೆ ಮಾತನಾಡಿದರು.
ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಎಚ್.ಎಂ.ಶೃಂಗೇಶ್ವರ್ ವಂದಿಸಿದರು. ಬಳಿಕ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ’ಸಾಯುಜ್ಯ ಸಂಗ್ರಾಮ’ ಪ್ರಾದ್ಸಂಗದ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಿತು.