ನಂಜನಗೂಡು: ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು

Update: 2021-11-29 08:15 GMT
ಸಾಂದರ್ಭಿಕ ಚಿತ್ರ (source: PTI)

ಮೈಸೂರು, ನ.29: ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಸಾವಿಗೀಡಾಗಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ನಂಜನಗೂಡು ತಾಲೂಕು ಬ್ಯಾಳಾರು ಹುಂಡಿ ಗ್ರಾಮದ ಸಿದ್ದರಾಜು ಮೃತಟ್ಟ ವ್ಯಕ್ತಿ.

ಶನಿವಾರ ಸಿದ್ದರಾಜು ಕುಡಿದು ಗಲಾಟೆ ಮಾಡುತ್ತಿದ್ದಾನೆ ಎಂಬ ದೂರವಾಣಿ ಕರೆಯ ಹಿನ್ನೆಲೆಯಲ್ಲಿ ಪೊಲೀಸರು ಗ್ರಾಮಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಗ್ರಾಮದ ಮಹಿಳೆಯೊಬ್ಬರು ಸಿದ್ದರಾಜು ಸದಾ ಕುಡಿದು ಬಂದು ನನಗೆ ಕಿರುಕುಳ ನೀಡುತ್ತಿರುವುದಾಗಿ ದೂರಿದ್ದಾರೆ.  ಪೊಲೀಸರು ಮಹಿಳೆಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಮಹಿಳೆ ರವಿವಾರ ಬೆಳಗ್ಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡುವುದಾಗಿ ತಿಳಿಸಿದ್ದಾರೆ.

ನಂತರ ಪೊಲೀಸರು ಸಿದ್ದರಾಜುವನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ರವಿವಾರ ಸಂಜೆ ಸಿದ್ದರಾಜು

ಅಸ್ವಸ್ಥಗೊಂಡಿದ್ದಾರೆ ಎಂದು ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಈ ವೇಳೆ ಅವರು ಮೃತಪಟ್ಟಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದರು ಎಂದು ಪೊಲೀಸರು ಹೇಳುತ್ತಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಮೃತ ಸಿದ್ದರಾಜು ಸಂಬಂಧಿಕರು ಮತ್ತು ಗ್ರಾಮಸ್ಥರು ಪೊಲೀಸ್ ಠಾಣೆಯೆದುರು ಜಮಾಯಿಸಿದ್ದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಎಎಸ್ಪಿ ಶಿವಕುಮಾರ್  ಭೇಟಿ ನೀಡಿದ್ದಾರೆ.

ಮೃತರ ತಾಯಿ ಮಹದೇವಮ್ಮ ದೂರು ನೀಡಲು ಸಿದ್ದರಾಗಿದ್ದು, ಅವರ ದೂರಿನನ್ವಯ ತನಿಖೆ ನಡೆಸಲಾಗುವುದು‌ ಎಂದು ಎಸ್ಪಿ ಭರವಸೆ ನೀಡಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News