ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು ದಾಖಲು

Update: 2021-11-30 12:51 GMT

ಬೆಂಗಳೂರು, ನ.30: ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅ.26ರಂದು ಸಿಂದಗಿ ಪಟ್ಟಣದ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿ ‘ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿ ಪಕ್ಷ ಸೇರುತ್ತಿದ್ದಾರೆ’ ಎಂದು ಹೇಳಿಕೆ ನೀಡಿ ಮಾನಸಿಕವಾಗಿ, ಸಾಮಾಜಿಕವಾಗಿ ಅವಹೇಳನ, ಅಪಮಾನ ಮಾಡಿ ದೌರ್ಜನ್ಯ ಎಸಗಿದ್ದಾರೆ. ಇದು ಪರಿಶಿಷ್ಟ ಜಾತಿ, ವರ್ಗಗಳು ಮತ್ತು ನಾಗರಿಕ ಸಮಾಜಕ್ಕೆ ಮಾಡಿದ ಘೋರ ಅಪರಾಧವಾಗಿದೆ ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಭಾರತದ ಪರಿಶಿಷ್ಟ ಜಾತಿ ಮತ್ತು ವರ್ಗದ ಜನ ತಮ್ಮ ಸ್ವಾಭಿಮಾನ ಸ್ವಪ್ರಯತ್ನಗಳಿಗೆ ಹೆಸರಾಗಿದ್ದು, ಬಿಜೆಪಿ ತತ್ವಾದರ್ಶಗಳಿಗೆ ಬದ್ಧರಾಗಿ ಬಿಜೆಪಿ ಕಡೆ ಒಲವು ತೋರಿಸುತ್ತಿದ್ದು, ಇದನ್ನು ಸಹಿಸದ ಸಿದ್ದರಾಮಯ್ಯ ಪರಿಶಿಷ್ಟ ಜಾತಿ, ವರ್ಗಗಳ ಘನತೆಗೆ ಕುಂದು ತರುವ ರೀತಿ ಅವಹೇಳನಕಾರಿಯಾದ ಬೇಜವಾಬ್ದಾರಿ ತನದ ಹೇಳಿಕೆ ನೀಡಿ ಈ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದು ಘಾಸಿಗೊಳಿಸಿದ್ದಾರೆ. ಆದುದರಿಂದ, ಸಿದ್ದರಾಮಯ್ಯ ವಿರುದ್ಧ ಪರಿಶಿಷ್ಟ ಜಾತಿ, ವರ್ಗಗಳ ಅಪರಾಧ ತಡೆ ಕಾಯಿದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News