ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ವ್ಯವಸ್ಥಿತ ಅಪಪ್ರಚಾರ: ಸಚಿವ ಕೋಟ

Update: 2021-12-02 15:18 GMT

ಕುಂದಾಪುರ, ಡಿ.2: ಸರಕಾರದ ವಿರುದ್ಧ ನಡೆಯುವ ವ್ಯವಸ್ಥಿತ ಅಪಪ್ರಚಾರ ಗಳನ್ನು ತಡೆದು, ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಸರಕಾರದ ಕಾರ್ಯಕ್ರಮಗಳ ಬಗ್ಗೆ ತಿಳುವಳಿಕೆ ನೀಡಬೇಕು. ಹಿಂದುಳಿದ ವರ್ಗ ಗಳು ಒಟ್ಟಾಗಿ ಸಮಾಜಕ್ಕೆ ಶಕ್ತಿ ತುಂಬುವ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕೋಟೇಶ್ವರದ ಸಹನಾ ಕನ್ವೆಷನ್ ಸೆಂಟರ್‌ನಲ್ಲಿ ಗುರುವಾರ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಮುಖರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶದ ಕಾನೂನಿಗೆ ಸವಾಲೊಡ್ಡುವ ಯಾರನ್ನೆ ಆದರೂ ಸುಮ್ಮನ್ನೆ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಸುಮ್ಮನೆ ಕುಳಿತು ಕೊಳ್ಳುವುದಕ್ಕೆ ಆಡಳಿತ ನಡೆಸುತ್ತಿಲ್ಲ, ಇಂತಹ ಯಾವುದೇ ದೇಶ ವಿರೋಧಿ ಹಾಗೂ ಕಾನೂನು ವಿರೋಧಿ ಕೃತ್ಯವನ್ನು, ಗೋಹತ್ಯೆ ಯಂತಹ ದುರ್ಷ್ಕತ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲ್ಲ. ರಾಜ್ಯ ದಲ್ಲಿ ಗೋಹತ್ಯೆಯನ್ನು ನಿಲ್ಲಿಸುವ ತಾಕತ್ತು ಇರುವುದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾಕ್ಕೆ ಮಾತ್ರ. ಗೋ ಹತ್ಯೆ ನಿಷೇಧದ ಬಗ್ಗೆ ಕಾನೂನು ಅರಿವು ಮೂಡಿಸುವ ಕೆಲಸ ಶೀಘ್ರ ಮಾಡಲಾಗುವುದು ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರ ಬಾಬು, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣ ಕುಮಾರ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಷ್ಟ್ರೀಯ ಬಿಜೆಪಿ ಹಿಂದುಗಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಾಜಿ ಶಾಸಕ ಪದ್ಮನಾಭ ಕೊಠಾರಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಮುಖರಾದ ಸುರೇಶ್ ಬಾಬು, ಅಶೋಕಮೂರ್ತಿ, ವಿಠ್ಠಲ್ ಪೂಜಾರಿ, ಎಂ.ಸಿ.ನಾರಾಯಣ, ರವಿ ನಾಯಕ್, ರಾಜೇಂದ್ರ ನಾಯಕ್, ರಾಜೇಶ್ ಕಾವೇರಿ ಕುಂದಾಪುರ ಉಪಸ್ಥಿತರಿದ್ದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಸ್ವಾಗತಿಸಿದರು. ಅರುಣ್ ಭಾಣ ವಂದಿಸಿದರು. ಸತೀಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

ಕೋಟರನ್ನು ಗೆಲ್ಲಿಸೋಣ: ಹಾಲಾಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಎಲ್ಲರೂ ಒಟ್ಟಾಗಿ ಒಂದಾಗಿ ಪೂರ್ಣ ಬಹುಮತ ದಿಂದ ಗೆಲ್ಲಿಸುವುದರ ಮೂಲಕ ಬಿಜೆಪಿ ಪಕ್ಷದಿಂದ ಒಳ್ಳೆಯ ಸಂದೇಶ ನೀಡಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕುಂದಾಪುರ ಮಂಡಲ ವತಿಯಿಂದ ಗುರುವಾರ ಜರಗಿದ ಚುನಾವಣಾ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News