ಭಟ್ಕಳ: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಹಲ್ಲೆ

Update: 2021-12-07 09:27 GMT

ಭಟ್ಕಳ : ಕಾರಿನಿಂದ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಭಟ್ಕಳ ಮೂಸಾನಗರದ ಬದ್ರಿಯಾ ಕಾಲನಿ ಎಂಬಲ್ಲಿ ಸೋಮವಾರ ರಾತ್ರಿ 10.30 ಸುಮಾರಿಗೆ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಜಾಲಿರೋಡ್  ನಿವಾಸಿ ಸದ್ದಾಂ ಹುಸೈನ್ ಎಂದು ಗುರುತಿಸಲಾಗಿದೆ.

ಈತ ಬದ್ರಿಯಾ ಕಾಲನಿ ಕಿರಾಣಿ ಅಂಗಡಿಯೊಂದರಲ್ಲಿ ಕುಳಿತಿದ್ದ ವೇಳೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ಅಪರಿಚಿತ ವ್ಯಕ್ತಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಸದ್ದಾಂ ನನ್ನು ಸ್ಥಳೀಯರು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News