ಗ್ರಾಮ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಬಲಹೀನತೆಗೆ ಬಿಜೆಪಿ ಸರ್ಕಾರ ಹುನ್ನಾರ: ಶಾಸಕ ಪ್ರಿಯಾಂಕ್ ಖರ್ಗೆ ಆರೋಪ
ಕಲಬುರಗಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಹೀನಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಸಚಿವ, ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಗಳಿಗೆ ಚುನಾವಣೆ ನಡೆಸದೆ ಮುಂದೂಡುವ ಮೂಲಕ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಸರ್ಕಾರವೇ ಖುದ್ದು ತೊಡರುಗಾಲು ಹಾಕುತ್ತಿದೆ ಎಂದರು.
ನೋಟ್ ದೋ ಓಟ್ ಲೋ ಎನ್ನವ ಉಕ್ತಿಯನ್ನು ಪಾಲಿಸುತ್ತಿರುವ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಅವರು ತಮ್ಮ ಅನುದಾನವನ್ನು ಹೇಗೆ ಎಲ್ಲಿ ಬಳಸಿಕೊಂಡಿದ್ದಾರೆ ? ಎಷ್ಟು ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷ ವ್ಯವಸ್ಥೆ ಮಾಡುತ್ತಿಲ್ಲವೇ ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ನಾವು ಕೈಮುಗಿದು ಮತ ಕೇಳಿತ್ತಿದ್ದೇವೆ, ಆದರೆ, ಬಿಜೆಪಿಯವರು ಕೈ ಬಿಸಿ ಮಾಡಿ ಓಟು ಕೇಳುತ್ತಿದ್ದಾರೆ. ಶಿವಾನಂದ ಅವರು ಪ್ರಾಮಾಣಿಕ ವ್ಯಕ್ತಿ ಹಣ ಹಂಚುವಷ್ಟು ಶಕ್ತಿ ಹೊಂದಿಲ್ಲ. ನಾನು ಕಾಂಗ್ರೆಸ್ ಪಕ್ಷದವನು, ಪಕ್ಷಕ್ಕಾಗಿ ನಾನು ಚುನಾವಣೆಯಲ್ಲಿ ಕೆಲಸ ಮಾಡುತ್ತೇನೆ ಎಂದರು.
ಮಾಜಿ ಎಂ ಎಲ್ ಸಿ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಮತ್ತಿತರಿದ್ದರು.