×
Ad

ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕನ್ನು ಎದುರಿಸಲು ಸಹಕರಿಸಬೇಕು: ಉಡುಪಿ ಡಿಸಿ ಕೂರ್ಮಾರಾವ್

Update: 2021-12-09 20:53 IST

ಉಡುಪಿ, ಡಿ.9: ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕನ್ನು ಎದುರಿಸಲು ಸರಕಾರಿ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆಗಳನ್ನು ನೀಡಿದ್ದಾರೆ.

ಗುರುವಾರ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಕೋವಿಡ್-19ರ ಕಳೆದೆರಡು ಅಲೆಗಳಲ್ಲಿ ಸರಕಾರದ ಜೊತೆಗೆ ಖಾಸಗಿ ಆಸ್ಪತ್ರೆಗಳು ಅತ್ಯುತ್ತಮ ರೀತಿಯಲ್ಲಿ ಸ್ಪಂದಿಸಿ, ಸೋಂಕಿತರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಿದ್ದು, ಎಲ್ಲಾ ರೀತಿಯ ಸಹಕಾರವನ್ನೂ ನೀಡಿವೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಸಹಕಾರವನ್ನು ನೀಡುವ ಮೂಲಕ ಮುಂದಿನ ದಿನಗಳಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದವರು ಹೇಳಿದರು.

ಆಯುಷ್ಮಾನ್‌ನಲ್ಲಿ ಚಿಕಿತ್ಸೆ: ಆಯುಷ್ಮಾನ ಆರೋಗ್ಯ ಭಾರತ್ ಯೋಜನೆ ಯಡಿಯಲ್ಲಿ 5000ಕ್ಕೂ ಹೆಚ್ಚು ಕೋವಿಡ್ ಸೋಂಕಿತರಿಗೆ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳು ನೀಡಿರುವುದು ಪ್ರಶಂಸನೀಯ ಕಾರ್ಯ ಎಂದ ಅವರು, ಸರಕಾರದಿಂದ ಚಿಕಿತ್ಸೆಯ ವೆಚ್ಚವನ್ನು ಆದ್ಯತೆ ಮೇಲೆ ಭರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಖಾಸಗಿ ಆಸ್ಪತ್ರೆಗಳು ಸಂಭಾವ್ಯ ಕೋವಿಡ್ ಸೋಂಕನ್ನು ಎದುರಿಸಲು ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು. 2ನೇ ಅಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯವಿದ್ದ ಪ್ರಾಣವಾಯುವಿನ ಸಮಸ್ಯೆ ರಾಜ್ಯದಲ್ಲಿ ಉಂಟಾಗಿದ್ದ ಹಿನ್ನೆಲೆ, ಆಕ್ಸಿಜನ್ ಸಂಗ್ರಹ ಮಾಡುವ ಜಂಬೋ ಸಿಲೆಂಡರ್, ಡ್ಯುರೋ ಸಿಲೆಂಡರ್‌ಗಳನ್ನು ಅವಶ್ಯಕತೆಗೆ ತಕ್ಕಂತೆ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ ಶೇ.95ರಷ್ಟು ಜನ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದಾರೆ. ಶೇ.5ರಷ್ಟು ಇತರೆ ಸಾಮಾನ್ಯ ಕಾಯಿಲೆಯವರು, ಗರ್ಭಿಣಿಯರು ಸೇರಿದಂತೆ ಮತ್ತಿತರರು ಲಸಿಕೆ ಪಡೆಯದೇ ಇರುವುದು ಕಂಡು ಬಂದಿದೆ. ಅವರಿಗೆ ಲಸಿಕೆ ಪಡೆಯಲು ವೈದ್ಯರುಗಳು ಶಿಫಾರಸು ಮಾಡಬೇಕೆಂದು ಕೂರ್ಮಾರಾವ್ ಸೂಚನೆ ನೀಡಿದರು.

ಕೋವಿಡ್ ಸೋಂಕಿಗೆ ಚಿಕಿತ್ಸೆ, ಆಕ್ಸಿಜಿನ್ ಬಳಕೆ ಸೇರಿದಂತೆ ಅಗತ್ಯವಿರುವ ಚಿಕಿತ್ಸಾ ವಿಧಾನಗಳ ಬಗ್ಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರಿಗೆ ತರಬೇತಿ ಕಾರ್ಯಗಾರಗಳನ್ನು ಕೆಎಂಸಿಸಹಕಾರದೊಂದಿಗೆ ಆಯೋಜಿಸಬೇಕೆಂದು ಅವರು ಸೂಚಿಸಿದರು.

ಜಿಲ್ಲೆಯ ಪ್ರತಿಯೊಂದು ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಅಡಿಯಲ್ಲಿ ನೋಂದಣಿ ಆಗುವಾಗ ನಮೂದಿಸಿರುವ ಬೆಡ್‌ಗಳ ಸಂಖ್ಯೆ ಸೇರಿದಂತೆ ಮತ್ತಿತರೆ ಮಾರ್ಪಾಡು ಮಾಡಿರುವ ಅಗತ್ಯ ಮಾಹಿತಿಗಳನ್ನು ಕೂಡಲೇ ಪ್ರಾಧಿಕಾರಕ್ಕೆ ನೀಡಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಎಲ್ಲಾ ಖಾಸಗಿ ಅಸ್ಪತ್ರೆಗಳ ವೈದ್ಯರು ತಮ್ಮಲ್ಲಿಗೆ ಬರುವ ಜ್ವರ ಶೀತ ಕೆಮ್ಮು ಪ್ರಕರಣಗಳ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಬೇಕು. ಎಲ್ಲಾ ವೈದ್ಯಕೀಯ ಉಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಪರಿಶೀಲಿಸಿಕೊಳ್ಳಬೇಕು. ಅಗ್ನಿ ಸುರಕ್ಷಾ ಉಪಕರಣಗಳು ಸೇರಿದಂತೆ ಮತ್ತಿತರ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಡಿಎಚ್‌ಓ ಡಾ. ನಾಗಭೂಷಣ ಉಡುಪ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಡಾ.ಶ್ರೀರಾಮರಾವ್ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಖಾಸಗಿ ಅಸ್ಪತ್ರೆಗಳಿಗೆ ನಿಯೋಜಿಸಿದ್ದ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News