×
Ad

ಮುಕ್ತ, ಪಾರದರ್ಶಕ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಜಿಲ್ಲಾಧಿಕಾರಿ

Update: 2021-12-09 20:56 IST

ಉಡುಪಿ, ಡಿ.9: ಜಿಲ್ಲೆಯಲ್ಲಿ ಡಿ.10ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಗುರುವಾರ ಉಡುಪಿ ತಾಲೂಕು ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆಯ ಮಸ್ಟರಿಂಗ್ ಕಾರ್ಯಗಳನ್ನು ವೀಕ್ಷಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಮತ ದಾನ ಪ್ರಕ್ರಿಯೆ ನಡೆಸಲು ಎಲ್ಲಾ ಸಿದ್ಧತೆ ಗಳನ್ನು ಮಾಡಿಕೊಂಡಿದ್ದು, ಚುನಾವಣಾ ಕರ್ತವ್ಯದಲ್ಲಿ ಭಾವಹಿ ಸುವ ಎಲ್ಲಾ ಸಿಬ್ಬಂದಿಗಳು ಮತ್ತು ಮೈಕ್ರೋ ಅಬ್ಸರ್‌ ವರ್‌ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದರು.

ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿದಂತೆ ಒಟ್ಟು 2505 ಮಂದಿ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.

ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News