ಡಿಸೆಂಬರ್ ಅಂತ್ಯದೊಳಗೆ ಶೇ.90ರಷ್ಟು 2 ಡೋಸ್ ಲಸಿಕೆಗೆ ಕ್ರಮ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸುನೀಲ್ ಕುಮಾರ್
ಉಡುಪಿ, ಡಿ.11: ಜಿಲ್ಲೆಯಲ್ಲಿ ಕೋವಿಡ್ 19 ಮೂರನೇ ಅಲೆಯನ್ನು ಸಮರ್ಥವಾಗಿ ತಡೆಯಲು ಡಿಸೆಂಬರ್ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಶೇ.90 ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ತಕ್ಷಣದಿಂದ ಕಾರ್ಯಪ್ರವೃತ್ತರಾಗಬೇಕು ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಕೋವಿಡ್ ಉಸ್ತುವಾರಿ ಸಚಿ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಶನಿವಾರ ನಡೆದ ಜಿಲ್ಲೆಯ ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣದ ಪ್ರಗತಿಯ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.
ಈಗಾಗಲೇ ಜಿಲ್ಲೆಯಲ್ಲಿ ಶೇ.95 ಪ್ರಥಮ ಡೋಸ್ ಲಸಿಕೆ ನೀಡಲಾಗಿದ್ದು, 2ನೇ ಡೋಸ್ ಪಡೆಯಲು ಅರ್ಹರಿರುವವರನ್ನು ಮತ್ತು ಅವಧಿ ಮೀರಿದ್ದರೂ ಲಸಿಕೆ ಪಡೆಯದವವರನ್ನು ಗುರುತಿಸಿ, ಕೂಡಲೇ ಅವರಿಗೆ ಲಸಿಕೆ ನೀಡಬೇಕು. ಲಸಿಕೆ ಪಡೆಯಲು ನಿರಾಕರಣೆ ಇರುವ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಲಸಿಕೆ ಪಡೆಯುಂತೆ ಮನವೊಲಿಸಬೇಕು ಎಂದರು.
ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಸರಕಾರ ಮತ್ತು ವಿವಿಧ ದಾನಿಗಳು ಹಲವು ವೈದ್ಯಕೀಯ ಉಪಕರಣಗಳು ಜಿಲ್ಲಾಡಳಿತಕ್ಕೆ ಕೊಡುಗೆ ನೀಡಿದ್ದು, ಈ ಎಲ್ಲಾ ಉಪಕರಣಗಳನ್ನು ಆಸ್ಪತ್ರೆಗಳಲ್ಲಿ ಅಳವಡಿಸಿರುವ ಕುರಿತು ಮತ್ತು ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡುತ್ತಿರುವ ಕುರಿತಂತೆ ಪರಿಶೀಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿದಿನ 4000 ಕೋವಿಡ್ ಟೆಸ್ಟ್
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾತನಾಡಿ, ಜಿಲ್ಲೆಯಲ್ಲಿ ಮನೆ ಮನೆಗೆ ಲಸಿಕಾ ಮಿತ್ರ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಕುರಿತು ಆಕ್ಷೇಪಣೆ ಇರುವಲ್ಲಿ ಅಧಿಕಾರಿಗಳು ಖುದ್ದು ತೆರಳಿ ಮನವೊಲಿಸಿ ಲಸಿಕೆ ನೀಡುತ್ತಿದೆ. ಎಲ್ಲಾ ಸಮುದಾಯಗಳ ಮುಖಂಡರ ಮೂಲಕ ಕೂಡಾ ಲಸಿಕೆ ಪಡೆಯುವ ಬಗ್ಗೆ ಅರಿವು ಮೂಡಿಸಲಾಗಿದೆ. ವಲಸಿಗರು ಮತ್ತು ಕಾರ್ಮಿಕರಿಗಾಗಿ ವಿಶೇಷ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಪ್ರತಿದಿನ ಸರಾಸರಿ 4000 ಅಧಿಕ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟ್ ಪ್ರಮಾಣ 0.16 ಇದ್ದು, ಒಟ್ಟು 72 ಸಕ್ರಿಯ ಪ್ರಕರಣಗಳಲ್ಲಿ, 66 ಮಂದಿ ಹೋಂ ಐಸೋಲೇಶನ್ ಮತ್ತು 6 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಸರಕಾರ ಸೂಚಿಸಿರುವ ಪಂಚ ಸೂತ್ರಗಳಾದ, ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ಸಮುಚಿತ ವರ್ತನೆಗಳ ಪಾಲನೆಯನ್ನು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಪಾಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಬೆಯಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಎಚ್ಓ ಡಾ.ನಾಗಭೂಷಣ ಉಡುಪ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಹೆಚ್ಚಿನ ಪರೀಕ್ಷೆ
ಎಲ್ಲಾ ಖಾಸಗಿ ಮತ್ತು ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆಯನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಆ ಪ್ರದೇಶದಲ್ಲಿ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸ ಬೇಕು ಎಂದು ಸಚಿವ ಸುನೀಲ್ ಕುಮಾರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಮಣಿಪಾಲ ಕೆಎಂಸಿ ವತಿಯಿಂದ ತಾಂತ್ರಿಕ ಮತ್ತು ಕೋವಿಡ್ ನಿರ್ವಹಣೆಗೆ ಅಗತ್ಯ ತರಬೇತಿ ಕಾರ್ಯಗಾರಗಳನ್ನು ನಡೆಸಬೇಕು ಎಂದ ಅವರು, ಜಿಲ್ಲೆಗೆ ವಿದೇಶಗಳಿಂದ ಬರುವವರನ್ನು ಸರಕಾರದ ಮಾರ್ಗಸೂಚಿಯನ್ವಯ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಪಾಲನೆ ಮತ್ತು ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸು ವುದು ಅತ್ಯಂತ ಅವಶ್ಯಕ ಎಂದರು.
‘ಜಿಲ್ಲೆಯ ವಿವಿಧ ಖಾಸಗಿ ಆಸ್ಪತೆಗಳಲ್ಲಿ ಲ್ಯವಿರುವ ಬೆಡ್ಗಳ ಸಂಖ್ಯೆ, ಹೆಚ್ಚು ಮಾಡಬಹುದಾದ ಬೆಡ್ಗಳ ಸಂಖ್ಯೆ, ಲಭ್ಯ ಇರುವ ಆಕ್ಸಿಜನ್ ಮತ್ತು ವೆಂಟಿಲೇಟರ್ ಸೇರಿದಂತೆ ಎಲ್ಲಾ ಅಗತ್ಯ ಮೂಲ ಆರೋಗ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಬೇಕು ಮತ್ತು ತುರ್ತು ಸಂದರ್ದಲ್ಲಿ ತಕ್ಷಣದಲ್ಲಿ ಅವುಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು’
-ಸುನೀಲ್ ಕುಮಾರ್, ಸಚಿವರು