ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಡಿ.17ರವರೆಗೆ ನಿಷೇಧಾಜ್ಞೆ ಜಾರಿ
ಪುತ್ತೂರು, ಡಿ.15: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.14ರಂದು ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗವಾದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನಾದ್ಯಂತ ಡಿ.15 ರಿಂದ ಡಿ.17ರ ಮಧ್ಯರಾತ್ರಿ 12ರ ತನಕ ನಿಷೇಧಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.
ಸೋಮವಾರ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಅಕ್ರಮ ಕೂಟ ಸೇರಿಕೊಂಡು ಜಮಾಯಿಸುವ ಮೂಲಕ ಕಾನೂನನ್ನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರುಗಳು ತಮ್ಮ ವಾಸ್ತವ್ಯದ ವ್ಯಾಪ್ತಿಯಲ್ಲಿ ಮುಂದಕ್ಕೆ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಸನ್ನಿವೇಶಗಳನ್ನು ನಿರ್ಮಾಣ ಮಾಡುವ ಸಾಧ್ಯತೆಯಿರುತ್ತದೆ. ಆದ್ದರಿಂದ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಕೂಡಲೇ ಪುತ್ತೂರು ಉಪವಿಭಾಗ ವ್ಯಾಪ್ತಯಲ್ಲಿ ಕಲಂ 144 ಸಿ.ಆರ್ ಪಿಸಿ ರೀತಿಯ ನಿಷೇಧಾಜ್ಞೆಯನ್ನು ಜಾರಿಗೊಳಿಸುವಂತೆ ಕೋರಿ ಪುತ್ತೂರು ಡಿವೈಎಸ್ಪಿಯವರು ಪುತ್ತೂರು ಸಹಾಯಕ ಆಯುಕ್ತರಿಗೆ ವರದಿ ಸಲ್ಲಿಸಿದ್ದರು.
ಈ ವರದಿಯನ್ನು ಆಧರಿಸಿ ಸಹಾಯಕ ಆಯುಕ್ತರು ಪುತ್ತೂರು ಉಪವಿಭಾಗ ಮಟ್ಟದಲ್ಲಿ ಯಾವುದೇ ರೀತಿ ಕೋಮು ಗಲಭೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಿ.ಆರ್.ಪಿ.ಸಿ. ಕಲಂ 144 ಪ್ರಕಾರ ನಿಷೇದಾಜ್ಞೆ ಹೊರಡಿಸುವುದು ಸೂಕ್ತ ಎಂದು ಅಭಿಪ್ರಾಯಿಸಿ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತ ಅಧಕಾರ ಚಲಾಯಿಸಿ ಪುತ್ತೂರು ಉಪವಿಭಾಗದಾದ್ಯಂತ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.