ಉದ್ಯಾವರದಲ್ಲಿ ಸೌಹಾರ್ದ ಕ್ರಿಸ್ಮಸ್ ಆಚರಣೆ
ಉಡುಪಿ, ಡಿ.21: ಉದ್ಯಾವರ ಸೌಹಾರ್ದ ಸಮಿತಿ ನೇತೃತ್ವದಲ್ಲಿ ಸರ್ವ ಧರ್ಮೀಯರ ಸಹಕಾರದೊಂದಿಗೆ ಸೋಮವಾರ ಸೌಹಾರ್ದ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮವನ್ನು ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಫಾ.ಚೇತನ್ ಲೋಬೊ ಮಾತನಾಡಿ, ಧ್ವನಿ ಇದ್ದವರು ಮತ್ತು ಶಕ್ತಿ ಉಳ್ಳವರು ಮಾತ್ರ ಸಮಾಜದಲ್ಲಿ ಬೆಳೆಯುವಂತಾಗಿದೆ. ದೀನ ದಲಿತರು, ಬಡವರು, ನಿರ್ಗತಿಕರು ಮತ್ತು ಇತರರೆಲ್ಲರೂ ಬದಿಗೆ ಸರಿಯಲ್ಪಡುತ್ತಿದ್ದಾರೆ ಎಂದು ತಿಳಿಸಿದರು.
ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರೊ. ವಿಣೆಶ್ ಅಮೀನ್ ಸಾಂತೂರು ಮಾತನಾಡಿ, ಯಾವುದೇ ಒಳ್ಳೆಯ ಕೆಲಸಗಳು ಮಾಡುತ್ತಿರುವಾಗ ಜಾತಿ ಧರ್ಮ ಅಡ್ಡಬರಬಾರದು. ಮಾಧ್ಯಮಗಳು ಒಳ್ಳೆಯ ಕೆಲಸಗಳಿಗೆ ಹೆಚ್ಚು ಪ್ರಚಾರ ನೀಡಬೇಕೆ ವಿನಾ ಕೆಟ್ಟ ಕೆಲಸಗಳಿಗಲ್ಲ. ಇಂದಿನ ಸಮಾಜ ಮನಸ್ಸು ಮನಸ್ಸು ಬೆಸೆಯುವ ಸಮಾಜವಾಗಬೇಕು ಎಂದರು.
ಉಡುಪಿ ಧರ್ಮಪ್ರಾಂತ್ಯದ ಕುಲಪತಿ, ಸ್ಥಳೀಯ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ಪ್ರಧಾನ ಧರ್ಮಗುರು ಅ.ವಂ.ಫಾ.ಸ್ಟ್ಯಾನಿ ಬಿ. ಲೋಬೊ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಸೇವಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಫಾರೂಕ್ ಚಂದ್ರನಗರ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಸೌಹಾರ್ದ ಸಮಿತಿ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ ವಹಿಸಿದ್ದರು.
ವೇದಿಕೆಯಲ್ಲಿ ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೊರೊನ್ಹಾ ಉಪಸ್ಥಿತರಿದ್ದರು. ಸೌಹಾರ್ದ ಸಮಿತಿ ಕಾರ್ಯದರ್ಶಿ ಆಬಿದ್ ಅಲಿ ಸ್ವಾಗತಿಸಿ ದರು. ಕೋಶಾಧಿಕಾರಿ ಪ್ರತಾಪ್ ಕುಮಾರ್ ವಂದಿಸಿದರು. ಸ್ಟೀವನ್ ಕುಲಾಸೊ ಮತ್ತು ಶ್ರೀಜಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕ್ರಿಸ್ಮಸ್ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು