×
Ad

ಎಂಇಎಸ್ ಪುಂಡರ ಹಾವಳಿ ಹೆಚ್ಚಳ: ಮಹಾರಾಷ್ಟ್ರಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಸಂಚಾರ ಸ್ಥಗಿತ

Update: 2021-12-22 22:33 IST
ಫೈಲ್ ಚಿತ್ರ - (ಡಿ.19ರಂದು ಪುಣೆಯಲ್ಲಿ ಕರ್ನಾಟಕ ಸಾರಿಗೆ ಬಸ್ ಗೆ ಕಲ್ಲು ತೂರಾಟ)

ಹುಬ್ಬಳ್ಳಿ, ಡಿ.22: ಮಹಾರಾಷ್ಟ್ರದಲ್ಲಿ ಎಂಇಎಸ್ ಕಾರ್ಯಕರ್ತರ ಉದ್ಧಟತನ ದಿನಂಪ್ರತಿ ಹೆಚ್ಚಾಗುತ್ತಿದೆ. ಅದರಲ್ಲೂ ಸಾರಿಗೆ ಸಂಸ್ಥೆಯ ಬಸ್‍ಗಳನ್ನು ಟಾರ್ಗೆಟ್ ಮಾಡಿರುವ ಕಿಡಿಗೇಡಿಗಳು ಕಪ್ಪು ಮಸಿ ಬಳಿದು, ಸಂಚಾರಕ್ಕೆ ತಡೆ ಮಾಡುತ್ತಿದ್ದಾರೆ. ಹೀಗಾಗಿ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಇದೀಗ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಬಂದ್ ಮಾಡಿದೆ.

ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳಿಗೆ ಎಂಇಎಸ್ ಕಾರ್ಯಕರ್ತರು ಹಾನಿ ಮಾಡುತ್ತಿರುವ ಹಿನ್ನೆಲೆ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ಮಹಾರಾಷ್ಟ್ರಕ್ಕೆ ಹೊರಡುತ್ತಿದ್ದ ಎಲ್ಲ ಬಸ್ ಸಂಚಾರ ಬಂದ್ ಮಾಡಲಾಗಿದೆ.

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟು ಹಾಕಿದ ಪ್ರಕರಣದ ನಂತರ ಎರಡೂ ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ಕಲಬುರಗಿ ಡಿಪೋದ ಬಸ್‍ಗಳನ್ನು ನೆರೆಯ ಮಹಾರಾಷ್ಟ್ರ ರಾಜ್ಯದ ಎಂಇಎಸ್ ಪುಂಡರು ನಿಲ್ಲಿಸಿ ಬಸ್‍ಗೆ ಮಸಿ ಬಳಿದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ.

ಪ್ರತಿ ದಿನ ಕಲ್ಯಾಣ ಕರ್ನಾಟಕ ಭಾಗದಿಂದ ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಸರಿ ಸುಮಾರು 351 ಬಸ್‍ಗಳು ಸಂಚಾರ ಮಾಡುತ್ತವೆ. ಇದೀಗ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನೆಲೆ ನಿತ್ಯವು ಸುಮಾರು 40 ಲಕ್ಷ ರೂಪಾಯಿ ನಷ್ಟ ಸಂಭವಿಸುತ್ತಿದೆ. ಎಂಇಎಸ್ ಪುಂಡರು ಸಾರಿಗೆ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದಿದ್ದಾರೆ.

ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಾರಾಷ್ಟ್ರಕ್ಕೆ ಬಸ್‍ಗಳು ತೆರಳುತ್ತಿಲ್ಲ. ಈ ಮಧ್ಯೆ ಕರ್ನಾಟಕದಿಂದ ಮಹಾರಾಷ್ಟ್ರದ ಪುಣೆ, ಸೋಲಾಪುರಕ್ಕೆ ಹೋಗುವ ಬಸ್‍ಗಳನ್ನು ತಡೆದ ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದಿದ್ದಾರೆ.

ಜೊತೆಗೆ ಕಾರುಗಳ ಮೇಲೂ ಕಲ್ಲು ತೂರಾಟ ನಡೆಸಿ, ಕಾರನ್ನು ಜಖಂಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋμï ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News