ಬೈಕ್ ಕಳವು ಪ್ರಕರಣ: ಕಾನ್‍ಸ್ಟೇಬಲ್ ಸೇರಿ ಇಬ್ಬರ ಬಂಧನ, 75 ಲಕ್ಷ ಮೌಲ್ಯದ ವಾಹನಗಳ ವಶ

Update: 2021-12-24 12:02 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.24: ದ್ವಿಚಕ್ರ ವಾಹನಗಳನ್ನು ಹುಡುಗರಿಂದ ಕಳವು ಮಾಡಿಸಿ ಅದರ ನಂಬರ್ ಪ್ಲೇಟ್ ಬದಲಾಯಿಸಿ ನಕಲಿ ಆರ್‍ಸಿ ಕಾರ್ಡ್ ಮಾಡಿ ಮಾರಾಟ ಮಾಡುತ್ತಿದ್ದ ಪೊಲೀಸ್ ಕಾನ್‍ಸ್ಟೇಬಲ್ ಸೇರಿ ಇಬ್ಬರನ್ನು ಮಾಗಡಿ ರಸ್ತ್ತೆ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ವಿದ್ಯಾರಣ್ಯಪುರ ಠಾಣೆಯ ಸಿಬ್ಬಂದಿ ಹೊನ್ನಪ್ಪ ದುರದಪ್ಪ ಮಾಳಗಿ(26) ಮತ್ತು ರಾಜಸ್ತಾನ ಮೂಲದ ರಮೇಶ್(25) ಎಂದು ಗುರುತಿಸಲಾಗಿದೆ. ಬಂಧಿತರಿಂದ 75 ಲಕ್ಷ ರೂ. ಮೌಲ್ಯದ 52 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊನ್ನಪ್ಪ ಓಓಡಿ ಆಧಾರದ ಮೇಲೆ ಈಶಾನ್ಯ ವಿಭಾಗದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ.

ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಕಾಕೋಳ ನಿವಾಸಿಯಾದ ಹೊನ್ನಪ್ಪ ಹುಡುಗರ ಗ್ಯಾಂಗ್ ಕಟ್ಟಿಕೊಂಡು ಬೈಕ್‍ಗಳನ್ನು ಕಳ್ಳತನ ಮಾಡಿಸುತ್ತಿದ್ದುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಅ.28ರಂದು ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಮನೆಯೊಂದರ ಮುಂದೆ ನಿಲ್ಲಿಸಿದ್ದ ಬಜಾಜ್ ಪಲ್ಸರ್ ಬೈಕ್ ಕಳ್ಳತನವಾಗಿದ್ದ ಬಗ್ಗೆ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನಂಜುಂಡೆಗೌಡ ಅವರ ನೇತೃತ್ವದ ಇನ್‍ಸ್ಪೆಕ್ಟರ್ ಶ್ರೀನಿವಾಸ್ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆ ಕೈಗೊಂಡಿತ್ತು.

ಡಿ.21ರಂದು ಇಬ್ಬರು ಹುಡುಗರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅವರನ್ನು ತಡೆದು ವಿಚಾರಣೆ ನಡೆಸಿದಾಗ ಹೊನ್ನಪ್ಪ ಮತ್ತು ರಮೇಶ್‍ನ ಹೆಸರನ್ನು ಹೇಳಿದ್ದಾರೆ. ತಕ್ಷಣ ತನಿಖೆ ಚುರುಕುಗೊಳಿಸಿ ಕಾರ್ಯೋನ್ಮುಖರಾದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಬ್ಬರು ಆರೋಪಿಗಳು ಹುಡುಗರಿಂದ ಬೈಕ್‍ಗಳನ್ನು ಕಳ್ಳತನ ಮಾಡಿಸಿ ನಂತರ ವಾಹನಗಳ ನಂಬರ್ ಪ್ಲೇಟ್‍ಗಳನ್ನು ಬದಲಿಸಿ ನಕಲಿ ಆರ್‍ಸಿ ಕಾರ್ಡ್‍ಗಳನ್ನು ಮಾಡಿ ಬೆಂಗಳೂರು, ರಾಣಿಬೆನ್ನೂರು, ಹಾವೇರಿ ಇನ್ನಿತರ ಕಡೆಗಳಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ಆರೋಪಿಗಳ ಮಾಹಿತಿ ಮೇರೆಗೆ 75 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪೆನಿಗಳ 52 ದ್ವಿಕಚ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ಬಂಧನದಿಂದ ಮಾಗಡಿ ರಸ್ತೆ ಪೊಲೀಸ್ ಠಾಣೆ ಸೇರಿ ನಗರದ ವಿವಿಧ ಪೊಲೀಸ್ ಠಾಣೆಗಳ ಹಲವು ಪ್ರಕರಣಗಳು ಪತ್ತೆಯಾಗಿವೆ. ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಡಾ.ಸಂಜೀವ್ ಎಂ. ಪಾಟೀಲ್ ಮಾರ್ಗದರ್ಶನದಲ್ಲಿ ಸಿಬ್ಬಂದಿ ತಂಡ ಇಬ್ಬರನ್ನು ಬಂಧಿಸಿ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News