ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮತಿ: ಸಚಿವ ಪ್ರಭು ಚೌಹಾಣ್

Update: 2021-12-25 11:55 GMT

ಬೆಳಗಾವಿ, ಡಿ.25: ರಾಜ್ಯ ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ಸಂದರ್ಭದಲ್ಲಿ ಇಲಾಖೆ ಸಚಿವನಾಗಿ ನಾನು ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಲಾಖೆಯಲ್ಲಿ ಹಲವು ವರ್ಷಗಳಿಂದ ಹುದ್ದೆಗಳು ಖಾಲಿ ಇದ್ದಿದ್ದರಿಂದ ಸಮರ್ಪಕವಾಗಿ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿತ್ತು. ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ ಜಾರಿ, ಜಿಲ್ಲೆಗೊಂದು ಗೋಶಾಲೆ, ಪ್ರಾಣಿ ಕಲ್ಯಾಣ ಸಹಾಯವಾಣಿ ಸೇರಿದಂತೆ ಇತ್ತೀಚೆಗೆ ಪರಿಚಯಿಸಿದ ಇಲಾಖೆಯ ಯೋಜನೆಗಳು ಸಿಬ್ಬಂದಿಗಳ ಕೊರತೆಯಿಂದ ಹಿನ್ನಡೆ ಆಗುತ್ತಿತ್ತು ಎಂದು ಹೇಳಿದರು.

ಪ್ರತಿಬಾರಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಕೊರತೆ ನೀಗಿಸಲು ಮನವಿ ಮಾಡಿಕೊಳ್ಳುತ್ತಿದ್ದರು. ಅಲ್ಲದೆ, ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಉಭಯ ಸದನಗಳ ಸದಸ್ಯರುಗಳು ತಮ್ಮ ಜಿಲ್ಲೆಗಳಲ್ಲಿ ಸಿಬ್ಬಂದಿಗಳ ಕೊರತೆ ಕುರಿತು ಪ್ರಶ್ನೆ ಹಾಕುವುದು ವಾಡಿಕೆಯಾಗಿತ್ತು. ಬಿ.ಎಸ್.ಯಡಿಯೂರಪ್ಪ ಸರಕಾರದ ಅವಧಿಯಲ್ಲಿ ಅವರೊಂದಿಗೆ ನೇಮಕಾತಿ ಕುರಿತು ಚರ್ಚೆ ನಡೆಸಿದ್ದೆ. ಅಲ್ಲದೆ, ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪಶುಸಂಗೋಪನೆ ಇಲಾಖೆಗೆ ನೇಮಕಾತಿಯಲ್ಲಿ ಇರುವ ತೊಡಕುಗಳ ಕುರಿತು ಮಾತುಕತೆ ನಡೆಸಿದ್ದೆ ಎಂದು ಅವರು ತಿಳಿಸಿದರು.

ಪಶುಸಂಗೋಪನೆ ಇಲಾಖೆಯಲ್ಲಿ ಗುರುತರ ಬದಲಾವಣೆ ತರುವ ಸಲುವಾಗಿ ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಅಭಿವೃದ್ಧಿ ಮಾದರಿಗಳನ್ನು ನಮ್ಮಲ್ಲಿಯೂ ಅಳವಡಿಸಿಕೊಳ್ಳಲು ಆಲೋಚಿಸಿದಾಗ ನಮ್ಮಲ್ಲಿನ ಸಿಬ್ಬಂದಿ ಕೊರತೆಯಿಂದ ಪ್ರತಿಬಾರಿ ಸಮಸ್ಯೆ ಎದುರಾಗುತ್ತಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಪಶುಸಂಗೋಪನೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಗಳಿಂದ ಎದುರಾಗುತ್ತಿರುವ ಸಮಸ್ಯೆ ಕುರಿತು ಹಲವು ಬಾರಿ ಚರ್ಚೆ ನಡೆಸಲಾಗಿತ್ತು.

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯಿಂದಾಗಿ ಇಲಾಖೆಯ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ವೇಗ ದೊರೆಯಲಿದ್ದು ಪಶುಸಂಗೋಪನೆ ಇಲಾಖೆ ಮತ್ತಷ್ಟು ಚುರುಕಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ. ಪಶುಸಂಗೋಪನೆ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ಅನುಮತಿ ದೊರೆತಿದ್ದು ಸದ್ಯದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಅವರು ವಿವರಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News