ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಫ್ಯೂ ಜಾರಿ: ಸಚಿವ ಡಾ. ಸುಧಾಕರ್
ಬೆಂಗಳೂರು: ಒಮೈಕ್ರಾನ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಡಿಸೆಂಬರ್ 28ರಿಂದ ರಾಜ್ಯದಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.
ಸೋಂಕು ತಡೆಗೆ ತೆಗೆದುಕೊಂಡಿರುವ ಕ್ರಮಗಳು ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉನ್ನತ ಮಟ್ಟದ ಸಭೆ ನಡೆಸಿದರು.
ಡಿಸೆಂಬರ್ 28ರಿಂದ ಹತ್ತು ದಿನಗಳು ರಾತ್ರಿ ಕರ್ಫ್ಯೂ ಜಾರಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಡಿಸೆಂಬರ್ 28ರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರ ವರೆಗೂ ಕರ್ಫ್ಯೂ ಇರಲಿದೆ. ರೆಸ್ಟೊರೆಂಟ್, ಬಾರ್, ಕ್ಲಬ್ ಹಾಗೂ ಪಬ್ಗಳಲ್ಲಿ ಒಟ್ಟು ಆಸನಗಳ ಪೈಕಿ ಶೇ. 50 ಜನರ ಪ್ರವೇಶದ ಮಿತಿ ವಿಧಿಸಲಾಗಿದೆ.
'ಹೊಸ ವರ್ಷಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ನಡೆಸುವ ಸಂಭ್ರಮಾಚರಣೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ' ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ ಶ್ರೀ @BSBommai ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಳ್ಳಲಾಯಿತು. ಕಂದಾಯ ಸಚಿವ ಶ್ರೀ @RAshokaBJP, ಗೃಹ ಸಚಿವ ಶ್ರೀ @JnanendraAraga, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. pic.twitter.com/jNlQAZAris
— Dr Sudhakar K (@mla_sudhakar) December 26, 2021