ಡಿ.28ರಿಂದ ಎರಡು ದಿನ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಚಿವ ಮುನೇನಕೊಪ್ಪ
ಹುಬ್ಬಳ್ಳಿ, ಡಿ. 26: `ಬಿಜೆಪಿ ರಾಜ್ಯ ಕಾರ್ಯಕಾರಿಣಿ ಡಿ.28 ಮತ್ತು 29ರಂದು ಹುಬ್ಬಳ್ಳಿ ನಗರದಲ್ಲಿ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ರವಿವಾರ ಬಿಡುಗಡೆ ಮಾಡಿದ್ದಾರೆ.
ರವಿವಾರ ಇಲ್ಲಿನ ಸರ್ಕ್ಯೂಟ್ ಹೌಸ್ನಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಘೋಷಣೆ ನಂತರ ಮೊದಲ ಬಾರಿಗೆ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಹುಬ್ಬಳ್ಳಿ ನಗರದಲ್ಲಿ ಮಾಡಲಾಗುತ್ತಿದೆ. ರಾಜ್ಯ ಕಾರ್ಯಕಾರಿಣಿಗೆ ರಾಷ್ಟ್ರೀಯ, ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ಉಸ್ತುವಾರಿ ಅರುಣ್ಸಿಂಗ್, ಪ್ರಧಾನ ಕಾರ್ಯದರ್ಶಿಗಳಾದ ಅರುಣಾ, ಸಿ.ಟಿ.ರವಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕಾರ್ಯಕಾರಿಣಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಭೋಜನ ವ್ಯವಸ್ಥೆ ಸೇರಿದಂತೆ ವಸತಿ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕಾರಿಣಿಯಲ್ಲಿ ದೇಶಕ್ಕೆ ಹಾಗೂ ರಾಜ್ಯಕ್ಕೆ ಒಳ್ಳೆಯದಾಗುವ ಎರಡು ಪ್ರಮುಖ ನಿರ್ಣಯ ಮಾಡಲಾಗುವುದು ಎಂದು ಅವರು ನುಡಿದರು.
ಪರಿಷತ್ ಸೋಲು ಆತ್ಮಾವಲೋಕನ ಮಾಡಲಾಗುವುದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವನ್ನು ಸ್ವಾಗತ ಮಾಡಬೇಕು. ಹಾಗಾಗಿ, ಸೋಲು-ಗೆಲುವಿನ ಕುರಿತು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ಅವರು, ಸಿಎಂ ಬದಲಾವಣೆ ಕೇವಲ ಊಹಾಪೋಹ ಈ ಸಂಬಂಧ ಈಗಾಗಲೇ ಸಿಎಂ ಸಹಿತ ಹಲವು ಮುಖಂಡರು ಸ್ಪಷ್ಟಣೆ ನೀಡಿದ್ದಾರೆ ಎಂದು ವಿವರಣೆ ನೀಡಿದರು.