ಕೆಐಎಡಿಬಿಯಿಂದ ಹಂಚಿಕೆಯಾದ ಭೂಮಿ 10 ವರ್ಷದ ಅವಧಿಯ ಲೀಸ್ ಕಂ ಸೇಲ್‍ಗೆ ಸಮ್ಮತಿ: ಸಚಿವ ಮುರುಗೇಶ್ ನಿರಾಣಿ

Update: 2022-01-01 13:26 GMT

ಬೆಂಗಳೂರು, ಜ.1: ‘ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ)ಯ ಮೂಲಕ ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ 2 ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟ(ಲೀಸ್ ಕಂ ಸೇಲ್)ಕ್ಕೆ ನೀಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ಧರಿಸಿದೆ' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್.ನಿರಾಣಿ ಪ್ರಕಟಿಸಿದ್ದಾರೆ.

ಶನಿವಾರ ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಮುಂಬರುವ 2022ರ ಹೊಸ ವರ್ಷ ಕರ್ನಾಟಕಕ್ಕೆ ಉದ್ದಿಮೆದಾರರು ಹಾಗೂ ಹೂಡಿಕೆದಾರರನ್ನು ಕೈ ಬೀಸಿ ಕರೆಯುತ್ತಿದ್ದು, ರಾಜ್ಯದಲ್ಲಿ ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳಿಗೆ ಹಿಂದೆಂದೂ ಸಿಗದಷ್ಟು ಪ್ರೋತ್ಸಾಹ ಹಾಗೂ ಕೈಗಾರಿಕಾ ಸ್ನೇಹಿ ನಿಯಮಗಳನ್ನು ಜಾರಿಗೊಳಿಸುತ್ತಿದೆ ಎಂದು ತಿಳಿಸಿದರು.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಉದ್ದೇಶಿತ ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಲಾಗಿದ್ದು, ಇನ್ನು ಮುಂದೆ 10 ವರ್ಷಗಳ ಅವರಿಗೆ ಕೈಗಾರಿಕಾ ಉದ್ದೇಶಗಳಿಗೆ ನೀಡಲಾದ ಜಮೀನನ್ನು ಲೀಸ್ ಕಂ ಸೇಲ್‍ಗೆ ನೀಡಲು ಸಮ್ಮತಿಸಲಾಗಿದೆ. ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಬಂಡವಾಳ ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಸುಲಲಿತ ವಹಿವಾಟು ನಡೆಸಲು ಅನುಕೂಲವಾಗುವಂತೆ ಶೀಘ್ರದಲ್ಲೇ ಹೊಸ ನೀತಿ ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

ಅಸ್ತಿತ್ವದಲ್ಲಿರುವ ನೀತಿಯಿಂದಾಗಿ ರಾಜ್ಯದಲ್ಲಿ ಹೂಡಿಕೆ ಮಾಡಲು ಕೈಗಾರಿಕೆಗಳ ಕಾಳಜಿ ಮತ್ತು ಅನೇಕ ಹೂಡಿಕೆದಾರರ ಹಿಂಜರಿಕೆಯನ್ನು ಪರಿಹರಿಸಿ, ಕೆಐಎಡಿಬಿ ಭವಿಷ್ಯದಲ್ಲಿ ಎಲ್ಲಾ ಜಮೀನುಗಳನ್ನು ಖಾಸಗಿ ಕೈಗಾರಿಕೆಗಳು/ಸಂಸ್ಥೆಗಳಿಗೆ 10 ವರ್ಷಗಳ ಗುತ್ತಿಗೆ ಕಮ್ ಮಾರಾಟದ ಆಧಾರದ ಮೇಲೆ ಹಂಚಲಿದೆ ಎಂದು ಅವರು ವಿವರ ನೀಡಿದರು.

ಹೊಸ ಯೋಜನೆಗೆ ನಿಯಮಗಳನ್ನು ರೂಪಿಸಲಾಗುತ್ತಿದೆ ಮತ್ತು ಒಂದೆರಡು ವಾರಗಳಲ್ಲಿ ಪೂರ್ಣ ಪ್ರಮಾಣದ ಸರಕಾರಿ ಆದೇಶವನ್ನು ಹೊರಡಿಸುವ ನಿರೀಕ್ಷೆಯಿದೆ. ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಗೂ ಮೊದಲು, ಆಗಸ್ಟ್ ಮತ್ತು ಸೆಪ್ಟೆಂಬರ್‍ನಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಉದ್ಯಮ ತಜ್ಞರು ಇದರ ಬಗ್ಗೆ ಚರ್ಚಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದರು.

ಕೆಐಎಡಿಬಿಯಿಂದ ಕೇವಲ 99 ವರ್ಷಗಳ ಲೀಸ್ ಆಧಾರದ ಮೇಲೆ 2 ಎಕರೆಗಿಂತ ಹೆಚ್ಚಿನ ಭೂಮಿಯನ್ನು ಮಂಜೂರು ಮಾಡುವುದರಿಂದ ಹಲವಾರು ಪ್ರಮುಖ ಖಾಸಗಿ ಕಂಪೆನಿಗಳು ಕೈಗಾರಿಕೆಗಳನ್ನು ಸ್ಥಾಪಿಸಲು ಹಿಂಜರಿಯುತ್ತಿದ್ದವು. ಮಂಜೂರು ಮಾಡಿದ ಭೂಮಿಯನ್ನು ಮಾರಾಟ ಮಾಡಲು ಎಂದಿಗೂ ಅವಕಾಶ ಇರಲಿಲ್ಲ. 

ಈ ಹಿಂದಿನ ಷರತ್ತಿನ ಪ್ರಕಾರ, ಕೈಗಾರಿಕೆಗಳಿಗೆ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲ ಮತ್ತು ಬಂಡವಾಳದ ಒಳಹರಿವು ಪಡೆಯಲು ಹಾಗೂ ಗುತ್ತಿಗೆ ಪಡೆದ ಭೂಮಿಯನ್ನು ಅಡಮಾನಗೊಳಿಸಲು ತೊಂದರೆಗಳು ಎದುರಾಗಿತ್ತು. ಇದರ ಪರಿಣಾಮ ರಾಜ್ಯದಲ್ಲಿ ಹೂಡಿಕೆಯ ಹರಿವಿಗೆ ಅಡ್ಡಿಯಾಗಿದ್ದರಿಂದ ಇಂತಹ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪ್ರಸ್ತಾವಿತ ತಿದ್ದುಪಡಿಯ ಮೂಲಕ, ಯಾವುದೇ ಕೈಗಾರಿಕಾ ಘಟಕವು ಭೂ ಹಂಚಿಕೆಯ ನಂತರ ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸಿದರೆ, ಅವರು ಹತ್ತು ವರ್ಷಗಳವರೆಗೆ ಕಾಯದೆ ಕೆಐಎಡಿಬಿಯಿಂದ ಮಾರಾಟ ಪತ್ರದ ಶೀರ್ಷಿಕೆಯನ್ನು ಪಡೆಯಲು ಅರ್ಹತೆ ಪಡೆಯುತ್ತಾರೆ. ಇಲಾಖೆಯು ತನ್ನ ಅಧಿಕಾರಿಗಳ ಮೂಲಕ ಉದ್ಯಮದ 24 ತಿಂಗಳ ಬ್ಯಾಲೆನ್ಸ್ ಶೀಟ್ ಪರಿಶೀಲಿಸಿ ಎಲ್ಲವೂ ನಿಯಮಬದ್ಧವಾಗಿದ್ದರೆ, ಸೇಲ್ ಡೀಡ್ ಕೊಡಲಾಗುತ್ತದೆ. ಇದರಿಂದ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುತ್ತದೆ. 

ಕೆಐಎಡಿಬಿ ನಿಯಮಗಳ ಪ್ರಕಾರ, ಎಂಎಸ್‍ಎಂಇ ವಲಯಗಳು ಭೂಮಿಯನ್ನು ಹಂಚಿಕೆ ಮಾಡಿದ ದಿನಾಂಕದಿಂದ ಮೂರು ವರ್ಷಗಳೊಳಗೆ ಉದ್ಯಮವನ್ನು ಸ್ಥಾಪಿಸಿ, ಉತ್ಪಾದನೆಯನ್ನು ಪ್ರಾರಂಭಿಸಬೇಕು. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಐದು ವರ್ಷಗಳ ಸಮಯವನ್ನು ನೀಡಲಾಗಿದೆ. ತಿದ್ದುಪಡಿಯು ಉದ್ಯಮದ ವಿಸ್ತರಣೆ ಮತ್ತು  ಇನ್ನೂ ಹೆಚ್ಚಿನ ಹೂಡಿಕೆಗೆ ಪೆÇ್ರೀತ್ಸಾಹಿಸುತ್ತದೆ, ಏಕೆಂದರೆ ಉದ್ಯಮಿಗಳು ಕಂಪನಿಯನ್ನು ಯಶಸ್ವಿಯಾಗಿ ನಡೆಸಿದ ನಂತರ ಮಂಜೂರು ಮಾಡಿದ ಭೂಮಿ ಅವರ ಮಾಲಕತ್ವದಲ್ಲಿರುತ್ತದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News