ಪರ್ಯಾಯೋತ್ಸವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಮೂಲಭೂತ ಸೌಕರ್ಯ: ಸಚಿವ ಸುನೀಲ್ ಕುಮಾರ್
ಉಡುಪಿ, ಜ.2: ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸಲಾಗುವುದು. ಇದಕ್ಕೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಜೊತೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರವಿವಾರ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಪರ್ಯಾಯ ಮಹೋತ್ಸವಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಹಿನ್ನಲೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ, ವಾಹನಗಳ ಸುಗಮ ಸಂಚಾರ, ವಾಹನ ನಿಲುಗಡೆ ಸೇರಿದಂತೆ ಮೊದಲಾದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಿಸಿ ಕ್ಯಾಮೆರಾ ಆಳವಡಿಕೆ
ಪೊಲೀಸ್ ಇಲಾಖೆಯವರು ವಾಹನಗಳ ಸುಗಮ ಸಂಚಾರ ಸೇರಿದಂತೆ ಅವುಗಳ ನಿಲುಗಡೆಗೆ ಸೂಕ್ತ ಸ್ಥಳಗಳನ್ನು ಗುರುತಿಸುವುದರೊಂದಿಗೆ ವಾಹನ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಬೇಕು. ಆಯ್ದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಬೇಕು. ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಸಚಿವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದರು.
ಪರ್ಯಾಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಟ್ಯಾಬ್ಲೋಗಳನ್ನು ಇಲಾಖೆಗಳು ಸಿದ್ದಪಡಿಸುವುದರೊಂದಿಗೆ, ಮೆರವಣಿಗೆಯಲ್ಲಿ ಭಾಗವಹಿಸಬೇಕು. ರಾಜ್ಯ ಹಾಗೂ ಹೊರರಾಜ್ಯದ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಬೇಕು ಎಂದು ಅವರು ಹೇಳಿದರು.
ಹೆಚ್ಚುವರಿ ಸಿಬ್ಬಂದಿ ನೇಮಕ
ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಗಳನ್ನು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಬೇಕು. ಸಾರ್ವಜನಿಕರ ಉಪಯೋಗಕ್ಕಾಗಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಮಾಡುವುದರೊಂದಿಗೆ ಅವುಗಳಿಗೆ ನೀರಿನ ವ್ಯವಸ್ಥೆ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ನಗರದ ರಸ್ತೆ ನಿರ್ಮಾಣ ಸೇರಿದಂತೆ ದುರಸ್ತಿ ಕಾರ್ಯಗಳನ್ನು ಈ ತಿಂಗಳ 10ರೊಳಗೆ ಪೂರ್ಣಗೊಳಿಸ ಬೇಕೆಂದು ಅವರು ತಿಳಿಸಿದರು.
ಭಕ್ತಾತಿದಿಗಳ ಸಂಚಾರಕ್ಕೆ ಅನುಗುಣವಾಗಿ ಸಾರಿಗೆ ವಾಹನಗಳನ್ನು ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆವತಿಯಿಂದ ನಿಗಧಿತ ಸ್ಥಳಗಳಲ್ಲಿ ಕೋವಿಡ್ ಲಸಿಕೆಗಳನ್ನು ನೀಡಲು ಲಸಿಕಾ ಕೇಂದ್ರಗಳನ್ನು ತೆರೆಯಬೇಕು. ಹೆಚ್ಚಿನ ಕೋವಿಡ್ ತಪಾಸಣೆಯನ್ನು ನಡೆಸಬೇಕು. ಆಂಬುಲೆನ್ಸ್ ಸೇರಿದಂತೆ ಅಗ್ನಿ ಅವಘಡಗಳು ನಡೆದಲ್ಲಿ ತಕ್ಷಣ ಸ್ಪಂದಿಸಲು ಸನ್ನದ್ದರಾಗಿರಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಉಡುಪಿ ಶಾಸಕ ಹಾಗೂ ಪರ್ಯಾಯ ಸಮಿತಿ ಗೌರವಾಧ್ಯಕ್ಷ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಭಕ್ತಾಧಿಗಳಿಗೆ ಎರಡು ಡೋಸ್ ಲಸಿಕೆ ಕಡ್ಡಾಯ
ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸುವ ಭಕ್ತಾಧಿಗಳು ಕಡ್ಡಾಯವಾಗಿ 2 ಡೋಸ್ ಕೋವಿಡ್ 19 ಲಸಿಕೆಯನ್ನು ಪಡೆದಿರಬೇಕು. ಮಾಸ್ಕ್ ಧರಿಸುವುದರೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಎಚ್ಚರ ವಹಿಸಬೇಕಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಈ ಸಂಖ್ಯೆಯು ಎಂಐಟಿ ಪರಿಸರದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರೊಂದಿಗೆ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಮತ್ತು ಕಂಟೈನ್ಮೆಂಟ್ ಝೋನ್ಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆರೋಗ್ಯ ಇಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
14 ವರ್ಷ ಮೆಲ್ಪಟ್ಟವರಿಗೆ ಶಾಲೆಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ರೂಪಿಸಬೇಕು. ಲಸಿಕೆ ನೀಡಿದ ನಂತರ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಲಸಿಕೆ ನೀಡುವ ಸಂದರ್ಭದಲ್ಲಿ ಪೋಷಕರು ಹಾಜರಿರುವಂತೆ ನೋಡಿಕೊಳ್ಳಬೇಕು. ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ವಾರ್ಡನ್ಗಳು ನಿಗಾ ವಹಿಸಬೇಕು ಎಂದರು.