ನಕಲಿ ನಂದಿನಿ ತುಪ್ಪ ತಯಾರಿಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ: ಸಚಿವ ಎಸ್.ಟಿ.ಸೋಮಶೇಖರ್

Update: 2022-01-03 16:15 GMT

ಮೈಸೂರು,ಜ.3: ನಕಲಿ ನಂದಿನಿ ತುಪ್ಪ ತಯಾರಿಕೆ ತಡೆಗೆ ಟಾಸ್ಕ್ ಫೋರ್ಸ್ ರಚಿಸಲಾಗಿದೆ. 7 ಸದಸ್ಯರ ಈ ತಂಡಕ್ಕೆ ಪೂರ್ಣ ಅಧಿಕಾರ ನೀಡಲಾಗಿದೆ. ಎಲ್ಲ ರೀತಿಯಲ್ಲೂ ತನಿಖೆ ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. 

ಹೊಸಹುಂಡಿಯಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಪ್ರಕರಣ ಸಂಬಂಧ ಸೋಮವಾರ ಮೈಸೂರು ಹಾಲು ಉತ್ಪಾದಕರ ಮಹಾಮಂಡಳಿ (ಮೈಮುಲ್) ಆಡಳಿತ ಮಂಡಲಿ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 

ಕೆಎಂಎಫ್‍ನಲ್ಲಿ ಲಕ್ಷಾಂತರ ರೈತರಿದ್ದಾರೆ. 5 ಕೋಟಿ ಗ್ರಾಹಕರಿದ್ದಾರೆ. ಸಂಬಳ ಪಡೆದು ಸಂಸ್ಥೆಗೆ ಮೋಸ ಮಾಡಿದರೆ ಸಹಿಸುವುದಿಲ್ಲ. ಪೊಲೀಸರಿಗೆ ಸಂಪೂರ್ಣ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ನುಡಿದರು. 

ಟಾಸ್ಕ್ ಫೋರ್ಸ್ 14 ಹಾಲು ಒಕ್ಕೂಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈಗಾಗಲೇ ಜಾಗೃತ ದಳದ ಅಧಿಕಾರಿಗಳು ಹೊಸಕೋಟೆಯಲ್ಲಿ 1728 ಲೀಟರ್ ತುಪ್ಪ, ನೆಲಮಂಗಲದ ಮಾಕಳಿ ಪ್ರದೇಶದಲ್ಲಿ 6990 ಲೀಟರ್ ತುಪ್ಪ, ಜಯನಗರದ ಡಿಪಾರ್ಟ್‍ಮೆಂಟಲ್ ಸ್ಟೋರ್ಸ್‍ನಲ್ಲಿ 4 ಲೀಟರ್ ತುಪ್ಪ ಪತ್ತೆ ಮಾಡಿದ್ದಾರೆ ಎಂದು ತಿಳಿಸಿದರು. 

ಕೆಎಂಎಫ್ ಏಜೆಂಟರ ಸಹಕಾರದಿಂದ ನಂದಿನಿ ನಕಲಿ ತುಪ್ಪ ತಯಾರಿಸಿರಬಹುದು. ನಂದಿನಿ ಪ್ಯಾಕೆಟ್, ಶೇ. 30ರಿಂದ 40 ಕಲಬೆರಕೆ ಮಾಡಿರುವ ಬಗ್ಗೆ ಮಾಹಿತಿ ಇದೆ. ಅಲ್ಲದೇ ಕಡಿಮೆ ದರದಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಿದರೆ ಗ್ರಾಹಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು. 

ತಿರುಪತಿ ಮತ್ತು ವಿದೇಶಗಳಿಗೆ ನಂದಿನಿ ತುಪ್ಪ ಕಳುಹಿಸಲಾಗುತ್ತದೆ. ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗಬಾರದೆಂದು ನಕಲಿ ತುಪ್ಪ ಪ್ರಕರಣಗಳ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವ್ಯತ್ಯಾಸ ಕಂಡು ಬಂದರೆ ಬಂಧಿಸುವಂತೆ ಆದೇಶಿಸಲಾಗಿದೆ ಎಂದು ಹೇಳಿದರು. 

ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾತನಾಡಿ, ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಂದಿನಿ ಉತ್ಪನ್ನ ಮಾತ್ರವಲ್ಲದೇ ಎಲ್ಲ ಆಹಾರ ಪದಾರ್ಥಗಳನ್ನು ಪರಿಶೀಲಿಸುತ್ತಾರೆ. ದೂರು ಬಂದಾಗ ತನಿಖೆ ಮಾಡುತ್ತಾರೆ. ನಕಲಿ ನಂದಿನಿ ತುಪ್ಪ ತಯಾರಿಕೆ ತನಿಖೆಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಪ್ರಾಥಮಿಕ ಮಾಹಿತಿ ಮಾತ್ರ ನೀಡಿದ್ದೇವೆ ಎಂದು ತಿಳಿಸಿದರು. 

ಮೈಮುಲ್ ಅಧ್ಯಕ್ಷ ಪ್ರಸನ್ನ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್, ಮೈಮುಲ್  ವ್ಯವಸ್ಥಾಪಕ ನಿರ್ದೇಶಕ ವಿಜಯ್‍ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಶಿವಕುಮಾರ್ ದಂಡಿನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಕಲಿ ನಂದಿನಿ ತುಪ್ಪ ತಯಾರಿಕೆ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರು ಯಾರೇ ಇದ್ದರೂ ಶಿಕ್ಷೆಯಾಗುತ್ತದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದರೆ ಕೆಲಸದಿಂದ ತೆಗೆದು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತೇವೆ. 

 - ಎಸ್.ಟಿ.ಸೋಮಶೇಖರ್, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News