ರೈತರನ್ನು ಗುರಿಯಾಗಿರಿಸಿ ಸುಲಿಗೆ: ಮೂವರ ಬಂಧನ
Update: 2022-01-04 12:14 GMT
ಬೆಂಗಳೂರು, ಜ.4: ರೈತರನ್ನು ಗುರಿಯಾಗಿರಿಸಿಕೊಂಡು ನೆಲಮಂಗಲ ಸುತ್ತಮುತ್ತಲಿನ ಎಪಿಎಂಸಿ ಮಾರುಕಟ್ಟೆಗಳಲ್ಲಿ ದರೋಡೆ ಮಾಡುತ್ತಿದ್ದ ಆರೋಪದಡಿ ಮೂವರನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಜಾನ್ಸನ್, ರಾಜ ಮತ್ತು ಸತ್ಯವೇಲು ಬಂಧಿತ ಆರೋಪಿಗಳಾಗಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದು ಬಂಧನ ಕಾರ್ಯ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
ನೆಲಮಂಗಲ ಮತ್ತು ಸುತ್ತಮುತ್ತಲಿನ ಎಪಿಎಂಸಿ ಮಾರುಕಟ್ಟೆಗಳಲ್ಲಿ ಕಾರ್ಯಾಚರಣೆ ಕೈಗೊಂಡು ಪಿಳ್ಳಳ್ಳಿ ಮಾರ್ಕೆಟ್ನಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಮೂವರನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ವೇಳೆ ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೊ, ಚಾಕು, ದೊಣ್ಣೆ, ಮಚ್ಚು, ಖಾರದಪುಡಿ ಪೊಟ್ಟಣವನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ಮುಂದುವರೆಸಲಾಗಿದೆ.