×
Ad

ಜ.22ರಂದು ಬಂದ್ ಬದಲಾಗಿ ಬೃಹತ್ ರ‍್ಯಾಲಿ: ವಾಟಾಳ್ ನಾಗರಾಜ್

Update: 2022-01-05 21:16 IST
ವಾಟಾಳ್ ನಾಗರಾಜ್

ಬೆಂಗಳೂರು: ಕೊರೋನ ಸೋಂಕು ರಾಜ್ಯಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಜ.22ರಂದು ಕನ್ನಡ ಒಕ್ಕೂಟ ಹಮ್ಮಿಕೊಂಡಿದ್ದ ಕರ್ನಾಟಕ ಬಂದ್ ಬದಲಾಗಿ ಬೃಹತ್ ರ‍್ಯಾಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಒಕ್ಕೂಟದ ಮುಖಂಡ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. 

ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಮಂಜುನಾಥ್ ದೇವು, ದೀಪಕ್, ಗಿರೀಶ್ ಮುಂತಾದವರ ನೇತೃತ್ವದಲ್ಲಿ ಬುಧವಾರ ಸಭೆ ನಡೆಸಿ ಉದ್ದೇಶಿತ ಬಂದ್ ಬದಲಾಗಿ ಜ.22ರಂದು ರಾಜಧಾನಿ ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕಚೇರಿಗಳ ಎದುರು ಪ್ರತಿಭಟನಾ ರ‍್ಯಾಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು. ಮೇಕೆದಾಟು, ಮಹದಾಯಿ ಯೋಜನೆ ಜಾರಿಗೊಳಿಸುವುದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು. ಟೌನ್ ಹಾಲ್‌ನಿಂದ ಫ್ರೀಡ್‌ಂಪಾರ್ಕ್ವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಕೊರೋನ ನಿಯಂತ್ರಣದ ನೆಪದಲ್ಲಿ ಸರಕಾರ ಕೈಗೊಂಡಿರುವ ವಾರಾಂತ್ಯ ಕರ್ಫ್ಯೂವಿನಂತಹ ಕ್ರಮಗಳು ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ. ಇದು ಅತ್ಯಂತ ಖಂಡನೀಯವಾಗಿದೆ. ಲಾಕ್‌ಡೌನ್, ಸೀಲ್‌ಡೌನ್ ಮುಂತಾದ ಕ್ರಮಗಳಿಂದ ಜನರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತದೆ. ಅದರ ಬದಲು ಆರೋಗ್ಯ ಸೇವೆ ನೀಡಲು ಸರಕಾರ ಮುಂದಾಗಬೇಕು ಎಂದು ಹೇಳಿದರು. ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ರಾಜಕೀಯ ಪ್ರೇರಿತ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News