​ಶಿವಮೊಗ್ಗ: ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ

Update: 2022-01-06 11:14 GMT

ಶಿವಮೊಗ್ಗ,ಜ.06 : ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಕರೆಯಲಾದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಪ್ರತಿದಿನ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕಫ್ರ್ಯೂ ಜಾರಿಯಲ್ಲಿರುತ್ತದೆ. ಶನಿವಾರ ಮತ್ತು ಭಾನುವಾರ ವಾರಾಂತ್ಯ  ಕರ್ಪ್ಯೂ   ಘೋಷಿಸಲಾಗಿದ್ದು, ಇದನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಪ್ರವಾಸಿ ತಾಣಗಳಿಗೆ ಪ್ರವೇಶ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಈ ದಿನಗಳಲ್ಲಿ ಅವಕಾಶವಿರುವುದಿಲ್ಲ. ಆದರೆ ಅಗತ್ಯ ಸೇವೆಗಳನ್ನು ಒದಗಿಸಲು ಯಾವುದೇ ತೊಂದರೆಯಿರುವುದಿಲ್ಲ ಎಂದರು.

ಸರ್ಕಾರದ ನಿಗದಿತ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜು ನಡೆಸಬೇಕು. ಯಾವುದೇ ನಿಗದಿತ ವ್ಯಾಪ್ತಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುವುದು. ಅಂತಹ ಕ್ಲಸ್ಟರ್ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳನ್ನು ಮುಚ್ಚಲು ಕ್ರಮ ವಹಿಸಲಾಗುವುದು. ಕೋವಿಡ್ ಹರಡುವಿಕೆಯನ್ನು ತಡೆಯಲು ವಸತಿಶಾಲೆಗಳು, ಆಶ್ರಯ ತಾಣಗಳು ಮುಂತಾದ ಕಡೆಗಳಲ್ಲಿ ನಿರಂತರವಾಗಿ ರ್ಯಾಂಡಮ್ ಸ್ಯಾಂಪಲ್ ಸಂಗ್ರಹ ಮಾಡಿ ತಪಾಸಣೆ ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸುವ ಪೂರ್ವದಲ್ಲಿ ಸ್ಥಳೀಯಾಡಳಿತದಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಹೇಳಿದರು.

ಮಹಾರಾಷ್ಟ್ರ, ಕೇರಳ, ಗೋವಾ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ  ರ್ಯಾಂಡಮ್  ತಪಾಸಣೆ ಮಾಡಬೇಕು. ಇದಕ್ಕಾಗಿ ಶಿವಮೊಗ್ಗ, ಭದ್ರಾವತಿ ಬಸ್ ನಿಲ್ದಾಣ ಹಾಗೂ ಆಗುಂಬೆ ಚೆಕಪೋಸ್ಟ್‍ನಲ್ಲಿ ವ್ಯವಸ್ಥೆ ಮಾಡಬೇಕು. ಹೊರರಾಜ್ಯ ಮತ್ತು ಹೊರದೇಶಗಳಿಂದ ಬಂದವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ನಿಗಾ ಇರಿಸಬೇಕು.

ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕಿನಲ್ಲಿ ಕನಿಷ್ಟ 150 ಹಾಸಿಗೆ  ಸಾಮರ್ಥ್ಯ ದ ಹಾಸ್ಟೆಲ್ ಅಥವಾ ಸಮುದಾಯ ಭವನಗಳನ್ನು ಗುರುತಿಸಿ ಸಜ್ಜುಗೊಳಿಸಬೇಕು. 15ವರ್ಷದಿಂದ 18ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯವನ್ನು ಚುರುಕುಗೊಳಿಸಿ, ಪ್ರತಿಯೊಬ್ಬರಿಗೂ ಆದಷ್ಟು ಬೇಗನೆ ಲಸಿಕೆ ನೀಡಬೇಕು. ವಾರಾಂತ್ಯ  ಕರ್ಪ್ಯೂ   ಸಂದರ್ಭದಲ್ಲಿ ಲಸಿಕೆ ನೀಡುವ ಕಾರ್ಯಕ್ಕೆ ಯಾವುದೇ ತೊಂದರೆಯಿರುವುದಿಲ್ಲ ಎಂದರು.

ಜಿಲ್ಲಾ  ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಮಟ್ದದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News