ಪಂಜಾಬ್ ಸರಕಾರ ವಜಾಕ್ಕೆ ನಳಿನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗದ ಆಗ್ರಹ
ಬೆಂಗಳೂರು, ಜ. 7: `ಪ್ರಧಾನಿ ಮೋದಿಯವರಿಗೆ ಸರಿಯಾದ ಭದ್ರತೆ ಒದಗಿಸದೆ ತನ್ನ ಕರ್ತವ್ಯದಿಂದ ವಿಮುಖವಾಗಿರುವ ಪಂಜಾಬ್ ಸರಕಾರವನ್ನು ವಜಾಗೊಳಿಸಬೇಕು ಮತ್ತು ಸರಕಾರಿ ಯಂತ್ರವು ಖಲಿಸ್ತಾನ್ ಪರ ಅಂಶಗಳಿಂದ ಮುಕ್ತವಾಗುವವರೆಗೆ ಅಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ವಿಧಿಸಬೇಕು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.
ಶುಕ್ರವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ನಿಯೋಗ ಈ ಕುರಿತಂತೆ ಮನವಿ ಸಲ್ಲಿಸಿತು. ಸಚಿವರಾದ ಡಾ.ಅಶ್ವಥ್ ನಾರಾಯಣ, ಎಸ್.ಟಿ.ಸೋಮಶೇಖರ್ ಮತ್ತು ಬೈರತಿ ಬಸವರಾಜ್ ನಿಯೋಗದಲ್ಲಿದ್ದರು. ಪಂಜಾಬ್ ಸರಕಾರದ ಖಲಿಸ್ತಾನ್ ಮತ್ತು ಇತರ ಪಡೆಗಳೊಂದಿಗಿನ ಕ್ರಿಮಿನಲ್ ಬಾಂಧವ್ಯದ ಮೂಲಕ ಪ್ರಧಾನಿಯವರನ್ನು ಗಂಭೀರವಾದ ಭದ್ರತಾ ಅಪಾಯಕ್ಕೆ ತಳ್ಳುವ ಉದ್ದೇಶಪೂರ್ವಕ ಪ್ರಯತ್ನ ಮಾಡಿದೆ ಎಂದು ನಿಯೋಗ ದೂರಿದೆ.
ಮೋದಿಯವರ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಭದ್ರತೆಯ ವಿಚಾರದಲ್ಲಿ ಅದು ನಿರ್ಲಕ್ಷ್ಯ ತೋರಿದೆ. ಖಲಿಸ್ತಾನ್ ಮತ್ತು ಭಾರತದ ಇತರ ಶತ್ರುಶಕ್ತಿಗಳೊಂದಿಗೆ ಅದರ ಸ್ಪಷ್ಟವಾದ ಸಹಭಾಗಿತ್ವವನ್ನು ಇದು ಸಾಬೀತು ಪಡಿಸುವಂತಿದೆ. ಮೋದಿಯವರು ಸೇರಿದಂತೆ ರಾಷ್ಟ್ರೀಯವಾದಿಗಳ ವಿರುದ್ಧ ದೇಶವಿರೋಧಿ ಶಕ್ತಿಗಳು ಸಂಚು ಹೂಡಿವೆ. ಇದಕ್ಕೆ ಅಲ್ಲಿನ ಸರಕಾರವು ಕೈಜೋಡಿಸಿದೆ. ಇದು ಸಂಪೂರ್ಣವಾಗಿ ಆತಂಕಕಾರಿ ಮತ್ತು ಅಪಾಯಕಾರಿ ಆಯಾಮವಾಗಿದೆ, ಈ ಕ್ರಮ ಅತ್ಯಂತ ಖಂಡನೀಯ ಎಂದು ತಿಳಿಸಿದೆ.
ಎಸ್ಪಿಜಿಗೆ ಪಂಜಾಬ್ನ ಡಿಜಿಪಿ ಅನುಮತಿ ನೀಡಿದ ನಂತರವೇ ಪ್ರಧಾನಿಯವರು ಭಟಿಂಡಾ ವಾಯುನೆಲೆಯಿಂದ ರಸ್ತೆ ಮೂಲಕ ತೆರಳಿದರು. ಪ್ರತಿಕೂಲ ಹವಾಮಾನದಿಂದಾಗಿ ಪ್ರಧಾನಮಂತ್ರಿಯವರ ಹೆಲಿಕಾಪ್ಟರ್ ಟೇಕ್ ಆಫ್ ಆಗಲಿಲ್ಲ. ಪಂಜಾಬ್ ಪೊಲೀಸ್ ಮತ್ತು ಪಂಜಾಬ್ ಸರಕಾರದ ಎಲ್ಲ ಅನುಮತಿಗಳನ್ನು ಪಡೆದ ನಂತರ ಪ್ರಧಾನಿಯವರ ಬೆಂಗಾವಲು ಪಡೆ ಭಟಿಂಡಾದಿಂದ ರಸ್ತೆಯ ಮೂಲಕ ಹೊರಟಿತ್ತು.
ಎಸ್ಪಿಜಿ, ಪ್ರಧಾನಿಗೆ ನಿಕಟ ಭದ್ರತೆಯನ್ನು ಒದಗಿಸುತ್ತದೆ ಎಂಬುದು ಸತ್ಯ. ಇದು ಭಯೋತ್ಪಾದಕರು ಮತ್ತು ಕ್ರಿಮಿನಲ್ ಉದ್ದೇಶವನ್ನು ಹೊಂದಿರುವ ವ್ಯಕ್ತಿಗಳನ್ನು ಪ್ರಧಾನಿಯ ಹತ್ತಿರ ಬರುವುದನ್ನು ತಡೆಯಲು ಮಾತ್ರ. ಆದಾಗ್ಯೂ, ರಸ್ತೆ ಕ್ಲಿಯರೆನ್ಸ್ ಒದಗಿಸುವುದು, ಜೀರೋ ಟ್ರಾಫಿಕ್ ನೀಡುವುದು ಮತ್ತು ಪ್ರಧಾನಿ ಹೋಗುವ ಮಾರ್ಗದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವುದು ಮತ್ತು ಇತರ ಪೂರಕ ಭದ್ರತಾ ವ್ಯವಸ್ಥೆಗಳು ರಾಜ್ಯ ಪೊಲೀಸರ ಜವಾಬ್ದಾರಿ. ಈ ಸಂದರ್ಭದಲ್ಲಿ, ಪಂಜಾಬ್ ಪೊಲೀಸರು ಮತ್ತು ಸಾಮಾನ್ಯವಾಗಿ ಪಂಜಾಬ್ ಸರಕಾರವು ಹೆದ್ದಾರಿಯನ್ನು ತೆರವುಗೊಳಿಸದೆ ಗಂಭೀರ ಲೋಪ ಎಸಗಿವೆ. ಇದು ರಸ್ತೆ ತಡೆಗೆ ಕಾರಣವಾಯಿತು ಮತ್ತು ಪ್ರಧಾನಿ ಅವರು ಹೆದ್ದಾರಿಯಲ್ಲಿ 20 ನಿಮಿಷಗಳ ಕಾಲ ಕಳೆಯಬೇಕಾಯಿತು ಎಂದು ನಿಯೋಗ ಮನವಿಯಲ್ಲಿ ತಿಳಿಸಿದೆ.
ಪ್ರಧಾನಿ @narendramodi ಅವರ ಭದ್ರತೆಯಲ್ಲಿ ಲೋಪ ಎಸಗಿರುವ ಪಂಜಾಬ್ ಸರಕಾರವನ್ನು ವಜಾಗೊಳಿಸಬೇಕು ಮತ್ತು ಖಲಿಸ್ತಾನದ ಪರ ಮನಸ್ಥಿತಿಯ ಪಂಜಾಬಿನಲ್ಲಿ ಪ್ರಸ್ತುತ ರಾಷ್ಟ್ರಪತಿ ಆಳ್ವಿಕೆ ವಿಧಿಸಬೇಕು ಎಂದು ರಾಜ್ಯಪಾಲರ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.@drashwathcn @STSomashekarMLA @BABasavaraja pic.twitter.com/rSMAIwGdku
— Nalinkumar Kateel (@nalinkateel) January 7, 2022