ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ

Update: 2022-01-07 12:20 GMT

ಬೆಂಗಳೂರು, ಜ.7: ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಂಪೂರ್ಣ ಬೆಂಬಲವಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ.

ಇದು ಪಕ್ಷಾತೀತ ಹೋರಾಟವಾಗಿರುವುದರಿಂದ ಪಾದಯಾತ್ರೆಗೆ ಬೆಂಬಲ ನೀಡುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾಣಿಜ್ಯಮಂಡಳಿಗೆ ಬಂದು ಬೆಂಬಲ ಕೋರಿದರು. ಇದರಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಿದ್ದಾರೆ. ನಮ್ಮ ಹಕ್ಕನ್ನು ಪ್ರತಿಪಾದಿಸಲು ನಾವು ಕೂಡ ಇದರಲ್ಲಿ ಪಾಲ್ಗೊಳ್ಳುತ್ತೇವೆ ಎಂದರು.

ತಮಿಳುನಾಡಿಗೆ ನೂರು ಟಿಎಂಸಿ ನೀರು ಬಿಡಬೇಕು. ಆದರೆ, 400 ಟಿಎಂಸಿ ನೀರು ಹರಿಯುತ್ತಿದೆ. ಹೆಚ್ಚುವರಿಯಾಗಿ ಹರಿಯುತ್ತಿರುವ ನೀರನ್ನು ನಾವು ಬಳಸಿಕೊಳ್ಳಲು ಹೋರಾಡಬೇಕಾಗಿದೆ. ಇದು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಹೋರಾಟವಾಗಿದೆ ಎಂದು ತಿಳಿಸಿದರು. 

ಬೆಂಗಳೂರು ಇಂದು ಸಾಕಷ್ಟು ಬೆಳೆದಿದೆ. ಕುಡಿಯುವ ನೀರಿನ ಅಗತ್ಯತೆ ಹೆಚ್ಚುತ್ತಿದೆ. ಇದನ್ನು ನೀಗಿಸಲು ಮೇಕೆದಾಟು ಯೋಜನೆ ಅನುಕೂಲವಾಗಲಿದೆ. ಕೊರೋನ ನಿಯಮಗಳು ಇರುವುದರಿಂದ ಭೌತಿಕವಾಗಿ ನಾವೆಲ್ಲರೂ ಒಂದೇ ಬಾರಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಆದರೆ, ಒಂದೊಂದು ದಿನ ಅವರವರ ಅನುಕೂಲಕ್ಕೆ ತಕ್ಕಂತೆ ಹೋರಾಟದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಹೇಳಿದರು.

ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ಕುಡಿಯುವ ನೀರಿಗಾಗಿ ಹಾಹಾಕಾರ ಇದೆ. ಕೇಂದ್ರ ಸರಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಮೇಕೆದಾಟು ಯೋಜನೆಯನ್ನು ಜಾರಿಗೆ ತರಬೇಕು. ಪಾದಯಾತ್ರೆಯ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಇದು ಕನ್ನಡಿಗರಾದ ನಮ್ಮೆಲ್ಲರ ಜವಾಬ್ದಾರಿ ಕೂಡ ಎಂದರು.
ಮೇಕೆದಾಟು ಪಾದಯಾತ್ರೆಗೆ ಚಿತ್ರರಂಗದ ಬೆಂಬಲ ಕುರಿತು ಗುರುವಾರ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಹಿರಿಯ ನಟಿ ಉಮಾಶ್ರೀ, ಜಯಮಾಲಾ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಗಣೇಶ್, ಪ್ರವೀಣ್ ಸೇರಿ ಹಲವು ಮುಖಂಡರು ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News