×
Ad

ಕೋವಿಡ್ ಸಮುಚಿತ ವರ್ತನೆ ಪಾಲನೆ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್

Update: 2022-01-07 18:54 IST

ಉಡುಪಿ, ಜ.7: ಜಿಲ್ಲೆಯಲ್ಲಿ ಕೋವಿಡ್-19 ಹರಡುವುದನ್ನು ತಪ್ಪಿಸಲು ಅರ್ಹ ಪ್ರತಿಯೊಬ್ಬರೂ 2 ಡೋಸ್ ಲಸಿಕೆ ಪಡೆಯುವುದು ಹಾಗೂ ಕೋವಿಡ್ ಸಮುಚಿತ ವರ್ತನೆಗಳ ಪಾಲನೆ ಮಾಡುವುದರಿಂದ ಕೋವಿಡ್‌ನ ನಿಯಂತ್ರಣ ಸಾದ್ಯವಾಗಲಿದ್ದು, ಹೀಗಾಗಿ ಜಿಲ್ಲೆಯಾದ್ಯಂತ ಕೋವಿಡ್ ಸಮುಚಿತ ವರ್ತನೆ ಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಕೋವಿಡ್ ನಿಯಂತ್ರಣ ಕುರಿತು ನಡೆದ ಸಭೆಯ ಆಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೋವಿಡ್ ಸಮುಚಿತ ವರ್ತನೆಗಳಾದ ಮಾಸ್ಕ್ ಧರಿಸುವುದು, ಸುರಕ್ಷತಾ ಅಂತರ ಪಾಲನೆ, ಕೈಗಳ ಸ್ವಚ್ಛತೆ ಕುರಿತಂತೆ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಇವುಗಳ ಪಾಲನೆ ಉಲ್ಲಂಘಿಸಿದಲ್ಲಿ ಸೂಕ್ತ ದಂಡ ವಿಧಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಟಾಸ್ಕ್ ಪೋರ್ಸ್, ತಾಲೂಕು ಟಾಸ್ಕ್ ಪೂರ್ಸ್, ಗ್ರಾಮೀಣ ಟಾಸ್ಕ್ ಪೋರ್ಸ್ ತಂಡ ಪ್ರತಿದಿನ ತಮ್ಮ ವ್ಯಾಪ್ತಿಯಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಬೇಕು. ಪ್ರತೀ ಸೋಮವಾರ ಎಲ್ಲಾ ಅಧಿಕಾರಿಗಳನ್ನು ಒಳಗೊಂಡ ತಂಡ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕೋವಿಡ್ ಸಮುಚಿತ ವರ್ತನೆ ಪಾಲನೆ ಕುರಿತು ಅಭಿಯಾನ ನಡೆಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ದಂಡ ವಿಧಿಸಬೇಕು ಎಂದು ಅವರು ಸೂಚನೆ ನೀಡಿದರು.

ಕೋವಿಡ್-19 ಕುರಿತು ಸಾರ್ವಜನಿಕರ ದೂರುಗಳ ನಿವಾರಣೆಗೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರಗಳನ್ನು ತೆರೆಯಬೇಕು. ಜಿಲ್ಲೆ, ತಾಲೂಕು ಮತ್ತು ಗ್ರಾಮೀಣ ಟಾಸ್ಕ್‌ಪೋರ್ಸ್ ತಂಡಗಳ ಸದಸ್ಯರು ವಾರದಲ್ಲಿ ನಿಯಮಿತವಾಗಿ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಕೈಗೊಳ್ಳ ಬೇಕಾದ ಕ್ರಮಗಳ ಕುರಿತು ಚಿರ್ಚಿಸಿ ಅವುಗಳನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನ ಗೊಳಿಸಿ, ಕೋವಿಡ್ ಹರಡುವುದನ್ನು ನಿಯಂತ್ರಿಸಬೇಕು ಎಂದರು.

ತಾಲೂಕು ಮಟ್ಟದಲ್ಲಿ ಕೋವಿಡ್ ಸಂಪರ್ಕಿತರ ಪತ್ತೆ ಹಚ್ಚುವ ತಂಡಗಳನ್ನು ರಚಿಸಿ, ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ಸೀಲ್‌ಡೌನ್ ಮಾಡಿ ರುವ ಮನೆಗಳ ಜನ ಅನಗತ್ಯವಾಗಿ ಹೊರಗೆ ಬಾರದಂತೆ ಪ್ರತಿದಿನ ಮನೆಗಳನ್ನು ಸಂದರ್ಶಿಸಿ ಎಚ್ಚರವಹಿಸಬೇಕು. ಈ ಬಗ್ಗೆ ಕ್ವಾರಂಟೈನ್ ಆ್ಯಪ್‌ನಲ್ಲಿ ವಿವರಗಳನ್ನು ದಾಖಲಿಸಬೇಕು. ಪಾಸಿಟಿವ್ ಪ್ರಕರಣಗಳು ಕಂಡು ಬಂದ ವಸತಿ ಪ್ರದೇಶಗಳು ಮತ್ತು ವಸತಿ ಸಮುಚ್ಛಯಗಳಲ್ಲಿ ಶೀಘ್ರದಲ್ಲಿ ಕಂಟೈನ್‌ಮೆಂಟ್ ಝೋನ್ ರಚಿಸಿ ಕೋವಿಡ್ ಹರಡುವುದನ್ನು ನಿಯಂತ್ರಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯಕೀಯ ಉಪಕರಣಗಳು, ಐಸಿಯುಗಳು, ವೆಂಟಿಲೇಟರ್, ಆಕ್ಸಿಜಿನ್ ಕಾನ್ಸನ್‌ ಟ್ರೇಟರ್‌ಗಳು ಸೇವೆಗೆ ಲಭ್ಯ ವಿರುವ ಬಗ್ಗೆ ವರದಿಯನ್ನು ನೀಡುವಂತೆ ಮತ್ತು ಅವುಗಳು ಸುಸ್ಥಿತಿಯಲ್ಲಿರುವ ಬಗ್ಗೆ ಮತ್ತು ಅಗತ್ಯ ದುರಸ್ತಿಗಳಿದ್ದಲ್ಲಿ ಶೀಘ್ರದಲ್ಲಿ ದುರಸ್ತಿಪಡಿಸಿ ಉಪಯೋಗಿಸಲು ಸಾಧ್ಯವಾಗುವಂತೆ ಸಿದ್ಧವಾಗಿಟ್ಟುಕೊಳ್ಳುವಂತೆ ಹಾಗೂ ಎಲ್ಲಾ ಅಂಬುಲೈನ್ಸ್ ಗಳು ಸೇವೆಗೆ ಲಭ್ಯವಾಗಿರುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿರುವಂತೆ ಮತ್ತು ಜಿಲ್ಲೆಗೆ ಆಕ್ಸಿಜಿನ್ ಸರಬರಾಜು ಪ್ರಮಾಣ ನಿರಂತರ ವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ನಿಗದಿತ ಸಂಖ್ಯೆಗಿಂತ ಹೆಚ್ಚಿನ ಜನ ಸೇರುವ ಸಭೆ, ಸಮಾರಂಭ ಮತ್ತಿತರ ಕಾರ್ಯಕ್ರಮಗಳ ಬಗ್ಗೆ ಪರಿಶೀನೆ ನಡೆಸಲು ಪ್ಲೈಯಿಂಗ್ ಸ್ಕ್ವಾಡ್‌ಗಳನ್ನು ನಿಯೋಜಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ವಿವಿಧ ಕಾರ್ಯಪಡೆಗಳ ಅಧಿಕಾರಿ ಗಳು ತಮಗೆ ವಹಿಸಲಾಗಿರುವ ಕಾರ್ಯಗಳನ್ನು ಯಾವುದೇ ಲೋಪಗಳಿಗೆ ಆಸ್ಪದ ನೀಡದೇ, ಎಲ್ಲಾ ತಂಡಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವ ಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾದಿಕಾರಿ ಸದಾಶಿವ ಪ್ರಭು , ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಕಾರ್ಯಪಡೆ ಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News