ನೊಂದ ಮಹಿಳೆಯರು ಉಚಿತ ಸಹಾಯವಾಣಿ ಸಂಖ್ಯೆ181ನ್ನು ಸಂಪರ್ಕಿಸಿ: ಉಡುಪಿ ಡಿಸಿ

Update: 2022-01-07 15:51 GMT

ಉಡುಪಿ, ಜ.7: ವಿವಿಧ ಕಾರಣಗಳಿಂದ ನೊಂದಿರುವ ಮಹಿಳೆಯರು ತಮ್ಮ ಸಮಸ್ಯೆಗಳ ಬಗ್ಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಉಚಿತ ದೂರವಾಣಿ ಸಂಖ್ಯೆ 181ನ್ನು ಸಂಪರ್ಕಿಸಿ ತಮ್ಮ ದೂರುಗಳು ಸಲ್ಲಿಸಿ, ಅಗತ್ಯ ನೆರವು ಪಡೆಯು ವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನೊಂದ ಮಹಿಳೆಯರ ಪ್ರಕರಣಗಳನ್ನು ಇತ್ಯರ್ಥಪಡಿಸಲು ‘ಸಖಿ ಒನ್ ಸ್ಟಾಪ್ ಸೆಂಟರ್’ ಮತ್ತು ‘ಸಾಂತ್ವನ ಕೇಂದ್ರ’ ಗಳು ಕಾರ್ಯನಿರ್ವ ಹಿಸುತ್ತಿದ್ದು, ಮಹಿಳೆಯರು ತುರ್ತು ಸಂದರ್ಭಗಳಲ್ಲಿ ಉಚಿತ ಸಹಾಯವಾಣಿ 181ನ್ನು ಸಂಪರ್ಕಿಸಬಹುದು ಎಂದರು.

ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿ ರಚಿಸು ವುದು ಕಡ್ಡಾಯವಾಗಿದ್ದು, ಇದುವರೆಗೆ ಸಮಿತಿ ರಚಿಸದ ಇಲಾಖೆಗಳು ಮತ್ತು ಸಂಸ್ಥೆಗಳ ವರದಿ ಪಡೆದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೇ ಸಮಿತಿ ರಚಿಸಿರುವ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ನಿಗದಿತವಾಗಿ ಸಮಸ್ಯೆಗಳನ್ನು ಆಲಿಸಿರುವ ಕುರಿತು ವರದಿ ಪಡೆಯುವಂತೆಯೂ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪುನಃ ಶಾಲೆಗೆ ಸೇರಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಶಾಲೆ ಬಿಟ್ಟ ಮಕ್ಕಳು ಬಾಲ ಕಾರ್ಮಿಕರು ಮತ್ತು ಬಾಲ್ಯ ವಿವಾಹಗಳಿಗೆ ಒಳಪಡುವ ಸಾಧ್ಯತೆಗಳಿದ್ದು, ಇಂತಹ ಮಕ್ಕಳ ಕುರಿತು ಸ್ಥಳೀಯವಾಗಿ ಅಂಗನವಾಡಿ ಮೇಲ್ವಿಚಾರಕರು ಮತ್ತು ಶಿಕ್ಷಣ ಇಲಾಖೆಯ ಸಿಆರ್‌ಪಿಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಆಯೋಜಿಸಿ ಎಂದವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಾಣೆಯಾದ ಮಹಿಳೆ ಮತ್ತು ಮಕ್ಕಳ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯುವಂತೆ ಹಾಗೂ ಮಹಿಳೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ಇರುವ ಕಾನೂನುಗಳು ಮತ್ತು ಅವರ ಹಕ್ಕುಗಳ ಕುರಿತಂತೆ ಜಿಲ್ಲೆಯಾದ್ಯಂತ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶಗಳು, ಪ್ರವಾಸಿ ತಾಣಗಳು ಮತ್ತಿತರ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರದಲ್ಲಿ ದಾಖಲಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸುವಂತೆ ಪೊಲೀಸ್ ಇಲಾಖೆಗೆ ಕೂರ್ಮಾರಾವ್ ಸೂಚಿಸಿದರು.

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತಂತೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಹಯೋಗ ದಲ್ಲಿ ವ್ಯಾಪಕ ಅರಿವು ಕಾರ್ಯಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯ ಯುವಜನತೆ ಈ ಪಿಡುಗಿಗೆ ಒಳಗಾಗದಂತೆ ಎಚ್ಚರ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ, ಶಿಶು ಅಭಿವೃದ್ಧಿ ಯೋಜನಾಧಿ ಕಾರಿ ವೀೀಣಾ, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News