ಇಲಾಖೆಗಳ ಕಾರ್ಯನಿರ್ವಹಣೆ: ಶ್ರೇಯಾಂಕ ನೀಡಲು ಮಾನದಂಡ ನಿಗದಿ ಮಾಡಲು ಸಿಎಂ ಸೂಚನೆ

Update: 2022-01-10 18:02 GMT

ಬೆಂಗಳೂರು, ಜ.10: ಪ್ರತಿ ವರ್ಷ ಎಲ್ಲಾ ಇಲಾಖೆಗಳ ಕಾರ್ಯನಿರ್ವಹಣೆಯ ಬಗ್ಗೆ ಶ್ರೇಯಾಂಕ ನೀಡಲು ಮಾನದಂಡಗಳನ್ನು ನಿಗದಿಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆಡಳಿತ ಸುಧಾರಣೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರ್ಧಾರ ಕೈಗೊಳ್ಳುವ ಹಂತಗಳು ಕಡಿಮೆ ಆಗಿ ವಿಳಂಬವಿಲ್ಲದೆ ಜನರಿಗೆ ಸುಲಭವಾಗಿ ಸೌಲಭ್ಯಗಳು ದೊರಕುವಂತಾಗಬೇಕು. ಜನರ ಅರ್ಜಿಗಳಿಗೆ ಕೆಲವೇ ಗಂಟೆಗಳಲ್ಲಿ ಉತ್ತರಿಸುವಂತಿರಬೇಕು. ಅತ್ಯಂತ ಕೆಳಮಟ್ಟದಲ್ಲಿ ಹಾಗೂ ಮೇಲ್ಮಟ್ಟದಲ್ಲಿ ಜವಾಬ್ದಾರಿಗಳನ್ನು ನಿಗದಿಪಡಿಸಬೇಕು. ಕಂದಾಯ ಇಲಾಖೆಯ ಕೆಲವು ಹೊಣೆಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಬೇಕು ಎಂದು ಅವರು ಹೇಳಿದರು.

ಜಂಟಿ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳನ್ನು ಸಬಲಗೊಳಿಸಬೇಕು. ಪ್ರಾದೇಶಿಕ ಆಯುಕ್ತರಿಗೆ ಬೃಹತ್ ನೀರಾವರಿ, ಭೂ ಸ್ವಾಧೀನ ಮುಂತಾದ ವಿಷಯಗಳನ್ನು ನಿರ್ವಹಿಸಬೇಕು. ಕಂದಾಯ ಇಲಾಖೆಯ ಸುಧಾರಣೆಯಾದರೆ ಶೇ.40ರಷ್ಟು ಸರಕಾರಿ ಕೆಲಸ ಕಡಿಮೆಯಾದಂತಾಗುತ್ತದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ನೀರಾವರಿ, ಲೋಕೋಪಯೋಗಿ ಮುಂತಾದ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳ್ಳಬೇಕು. ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಯೋಜನೆಗಳಿಂದ ರಾಜ್ಯಕ್ಕೆ ಅತಿ ಹೆಚ್ಚಿನ ನಷ್ಟ ಉಂಟಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಕಾಯ್ದೆಗಳಲ್ಲಿ ಬದಲಾವಣೆ, ಪುನಾರಾವರ್ತಿತ ಕಾಯ್ದೆಗಳನ್ನು ಗುರುತಿಸುವ ಕೆಲಸವೂ ಆಗಬೇಕೆಂದು ತಿಳಿಸಿದ ಮುಖ್ಯಮಂತ್ರಿ, ಸರಕಾರದಿಂದ ವಿವಿಧ ಯೋಜನೆಗಳಿಗೆ ಬಿಡುಗಡೆಯಾದರೂ ಬಳಕೆಯಾಗದ ಮೊತ್ತ ಬ್ಯಾಂಕ್ ಖಾತೆಗಳಲ್ಲಿ ಉಳಿದುಕೊಂಡಿದ್ದು, ಈ ಮೊತ್ತವನ್ನು ಕ್ಲಿಯರ್ ಮಾಡಲು ಕ್ರಮ ಕೈಗೊಳ್ಳಲು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಬಿ.ಎ.ಬಸವರಾಜ, ಅಭಿವೃದ್ಧಿ ಆಯುಕ್ತೆ ಹಾಗೂ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಡಿ.ಪಿ.ಎ.ಆರ್ ಕಾರ್ಯದರ್ಶಿ ಹೇಮಲತಾ, ಸಿಆಸು ಇಲಾಖೆ (ಆಡಳಿತ ಸುಧಾರಣೆ) ಕಾರ್ಯದರ್ಶಿ ಮನೀಶ್ ಮೌದ್ಗಿಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News