×
Ad

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ರದ್ದಾಗಲಿದೆ ಎಂಬುದು ಊಹಾಪೋಹ: ಮುಖ್ತಾರ್ ಹುಸೇನ್ ಪಠಾಣ್

Update: 2022-01-13 19:01 IST

ಬೆಂಗಳೂರು, ಜ.13: ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಎನ್‍ಸಿಇಎಫ್  ಸ್ಥಾನಮಾನವನ್ನು  ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ(ಕೆಎಂಡಿಸಿ) ಕಳೆದುಕೊಂಡಿದೆ ಇದರಿಂದ ನಿಗಮ ರದ್ದುಗೊಳ್ಳಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಸುದ್ದಿಗಳನ್ನು ಹರಿಬಿಡಲಾಗಿದೆ. ಇದು ಊಹಾಪೋಹ ಸುದ್ದಿಯಾಗಿದ್ದು ಈ ಸಂಬಂಧ ಯಾರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಹುಸೇನ್ ಪಠಾಣ್ ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ನಗರದ ಅಂಬೇಡ್ಕರ್ ವೀಧಿಯಲ್ಲಿರುವ ವಿಶ್ವೇಶ್ವರಯ್ಯ ಗೋಪುರದಲ್ಲಿನ ನಿಗಮದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಿಸರ್ವ್ ಬ್ಯಾಂಕ್ ಮತ್ತು ನಿಗಮಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ರಿಸರ್ವ್ ಬ್ಯಾಂಕ್ ನಿಯಮಗಳ ಪ್ರಕಾರ ಕೆಲ ಮಾರ್ಗದರ್ಶಿ ನಿಯಮಗಳನ್ನು ಕೇಳಿದ್ದಾರೆ. ಇದರಲ್ಲಿ ಜನರು ಆತಂಕ ಪಡುವ ಯಾವುದೇ ವಿಚಾರವಿಲ್ಲ ಎಂದು ಸ್ಪಷ್ಟಪಡಿಸಿದರು.

2022-23ರ ಆಯವ್ಯಯದಲ್ಲಿ 300 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು. ಕಳೆದ ಬಜೆಟ್‍ನಲ್ಲಿ 55 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು. ಶಿಕ್ಷಣ, ಅರಿವು ಸಾಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಇನ್ನೂ 48 ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ ಎಂದು ಅವರು ಹೇಳಿದರು.

ಪ್ರಸಕ್ತ ವರ್ಷದಲ್ಲಿ ನಿಗಮದಿಂದ ನೂತನವಾಗಿ ಮೂರು ಯೋಜನೆಗಳನ್ನು ಜಾರಿ ತರುವ ಉದ್ದೇಶ ಹೊಂದಲಾಗಿದೆ. ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸದ ಉದ್ದೇಶಕ್ಕೆ ಶೇ.4ರಷ್ಟು ಸಾಲ ಸೌಲಭ್ಯ, ವಸತಿ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಸಾಲ ಸೌಲಭ್ಯ. ವ್ಯಾಪಾರ, ವಾಣಿಜ್ಯ ಚಟುವಟಿಕೆ ಕೈಗೊಳ್ಳುವ ಉದ್ದೇಶಗಳಿಗೆ 10 ಲಕ್ಷ ರೂಪಾಯಿ ಒದಗಿಸುವ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಆದುದರಿಂದ, ನಿಗಮಕ್ಕೆ 300 ಕೋಟಿ ರೂಪಾಯಿ ಹಣಕಾಸು ನೆರವು ನೀಡುವುವಂತೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಝೀರ್ ಪಾಷ, ನಿರ್ದೇಶಕ ಸದ್ದಾಂ ವಝೀರ್ ಗಾಂವ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News